ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಶೈಕ್ಷಣಿಕ ದೃಷ್ಟಿಯಿಂದ ಅನುಕೂಲವಾಗುವಂತೆ ಅತಿ ಹೆಚ್ಚು ಪರಿಶಿಷ್ಟ ಪಂಗಡಗಳ ಜನರು ವಾಸಿಸುವ ಪ್ರದೇಶಗಳಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಳನ್ನು ತೆರೆಯಲು ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯ ಕಾರ್ಯೋನ್ಮುಖವಾಗಿದೆ.
ಇದಕ್ಕೆ ಪೂರಕವಾಗಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಪರಿಶಿಷ್ಟ ಪಂಗಡದ ಜನರು ವಾಸ ಮಾಡುತ್ತಿದ್ದು, ಇಲ್ಲಿಗೆ ಏಕಲವ್ಯ ಮಾದರಿ ವಸತಿ ಶಾಲೆಯನ್ನು ಮಂಜೂರು ಮಾಡುವಂತೆ ಸಂಸದ ಗೋವಿಂದ ಎಂ.ಕಾರಜೋಳ ಅವರು ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವ ಜುಹಲ್ ಓರಾಮ್ ರವರಿಗೆ ದೆಹಲಿಯ ಕಚೇರಿಯಲ್ಲಿ ಭೇಟಿ ಮಾಡಿ ಶಾಲೆ ಮಂಜೂರಾತಿಗೆ ಮನವಿ ಮಾಡಿದರು.
ಈಗಾಗಲೇ ಸದರಿ ಶಾಲೆಗೆ ಅಗತ್ಯವಾಗಿರುವ ೧೫ ಎಕರೆ ಜಮೀನನ್ನು ಚಳ್ಳಕೆರೆ ತಾಲ್ಲೂಕಿನಲ್ಲಿ ಗುರುತಿಸಿ ಕಾಯ್ದಿರಿಸುವಂತೆ ಚಿತ್ರದುರ್ಗ ಜಿಲ್ಲಾಧಿಕಾರಿಗಳಿಗೆ ಸಂಸದರು ನಿರ್ದೇಶನ ನೀಡಿರುವ ವಿಷಯವನ್ನು ಸಚಿವರಿಗೆ ಸಂಸದರು ವಿವರಿಸಿದ್ದಾರೆ. ಅಲ್ಲದೇ ಸದರಿ ಶಾಲೆ ಸ್ಥಾಪನೆಯಿಂದ ಶೈಕ್ಷಣಿಕವಾಗಿ ಅತಿ ಹಿಂದುಳಿದಿರುವ ಚಿತ್ರದುರ್ಗ ಜಿಲ್ಲೆಗೆ ಯಾವ ರೀತಿ ಅನುಕೂಲವಾಗಲಿದೆ ಎಂಬದನ್ನೂ ಸಹ ಸಂಸದರು ಸಚಿವರಿಗೆ ಮನದಟ್ಟು ಮಾಡಿಕೊಟ್ಟಿದ್ದಾರೆ.
ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಸಚಿವರು ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ.