ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಶಾಲಾ-ಕಾಲೇಜು ವಿದ್ಯಾರ್ಥಿಗಳು ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ದುಃಖಕರ ಸಂಗತಿ. ಈ ನಿಟ್ಟಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ನೆರೆಯ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವಂತೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಾಲಚಂದ್ರನಾಯ್ಕ ತಿಳಿಸಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯಿಂದ ಚಂದ್ರವಳ್ಳಿಯಲ್ಲಿ ಮೂರು ದಿನಗಳ ಕಾಲ ನಡೆದ ಬ್ಯಾಡ್ಜ್ ವರ್ಕ್ ತರಬೇತಿಯ ಟ್ರಕ್ಕಿಂಗ್ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಶಿಕ್ಷಣದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ. ಜೀವನದಲ್ಲಿ ಸಿಟ್ಟಿಗಿಂತ ಶಿಸ್ತು ಮುಖ್ಯ. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಶಿಕ್ಷಣವನ್ನು ಪಡೆದುಕೊಂಡು ಸಮಾಜದಲ್ಲಿ ಸತ್ಪ್ರೆಜೆಗಳಾಗಬೇಕು. ಮೊಬೈಲ್ನಿಂದ ಹದಿಹರೆಯದವರ ಭವಿಷ್ಯ ವಿನಾಶದ ಅಂಚಿಗೆ ತಲುಪುತ್ತಿರುವುದರಿಂದ ವಿದ್ಯಾರ್ಜನೆಗೆ ಅಡ್ಡಿಯಾಗುತ್ತಿದೆ. ಮಾದಕ ವ್ಯಸನ, ಮೊಬೈಲ್ಗಳಿಂದ ದೂರವಿದ್ದು, ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಕರೆ ನೀಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಮಿತಿ ಸದಸ್ಯ ಬಸವರಾಜಪ್ಪ ಮಾತನಾಡಿ ಶಿಸ್ತಿನ ಸಂಸ್ಥೆಯಲ್ಲಿ ಸೇರ್ಪಡೆಗೊಂಡು ಶಿಕ್ಷಣ ಪಡೆಯುತ್ತಿರುವ ನೀವುಗಳು ನಿಜಕ್ಕೂ ಪುಣ್ಯವಂತರು. ವಾಸವಿ ಶಾಲೆಯ ಸ್ಕೌಟ್ ಮಾಸ್ಟರ್ ಸುರೇಶ್ಬಾಬು ನಿರಂತರವಾಗಿ ಸೇವೆ ಸಲ್ಲಿಸುತ್ತಿರುವುದು ಖುಷಿ ತಂದಿದೆ. ಇಡಿ ವಿಶ್ವವೇ ಕೋವಿಡ್ನಿಂದ ತಲ್ಲಣಿಸುತ್ತಿದ್ದ ಸಮಯದಲ್ಲಿ ಇವರು ಅನುಪಮ ಸೇವೆ ಸಲ್ಲಿಸಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಅವರ ಸುದೀರ್ಘ ಸೇವೆಯನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಅರ್ಥಪೂರ್ಣ. ಮುಂದೆ ನೀವುಗಳು ಇದೆ ರೀತಿ ಪರೋಪಕಾರದ ಗುಣ ಮೈಗೂಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.
ಜಿಲ್ಲಾ ಸ್ಥಾನಿಕ ಆಯುಕ್ತರಾದ ಪಿ.ವೈ.ದೇವರಾಜ್ಪ್ರಸಾದ್, ಶಿಕ್ಷಕರಾದ ರವಿ, ವಿಶ್ವನಾಥ, ಮುರುಗೇಶ್, ಲಿಂಗರಾಜ್, ಶೇಖರ್ನಾಯ್ಕ, ಸ್ವಾಮಿ, ಕಾಂತರಾಜ್ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

