ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿವಾದಿತ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಫೀಡರ್ ಯೋಜನೆಯಿಂದ ತುಮಕೂರು ಭಾಗದ ರೈತರಿಗೆ ಅನ್ಯಾಯ ಆಗುತ್ತಿದ್ದು, ತಕ್ಷಣವೇ ಈ ಯೋಜನೆಯ ಕಾಮಗಾರಿಯನ್ನು ನಿಲ್ಲಿಸುವಂತೆ ಸಾಕಷ್ಟು ಭಾರಿ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಾಗ್ಯೂ, ಅವರು ಈ ಬಗ್ಗೆ ಗಮನಹರಿಸದಿರುವುದು ಹಾಗೂ ಈ ಅನ್ಯಾಯದ ವಿರುದ್ಧ ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ಪ್ರಕರಣ ದಾಖಲಿಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವುದು ವಿಷಾದನೀಯ ಸಂಗತಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅವರು ರಾಜ್ಯ ಸರ್ಕಾರದ ಕ್ರಮಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು,ಈ ಯೋಜನೆಯಿಂದ ರೈತರಿಗೆ ಆಗುತ್ತಿರುವ ಅನ್ಯಾಯ, ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಲು ಈ ಭಾಗದ ಎಲ್ಲಾ ಜನಪ್ರತಿನಿಧಿಗಳ ಸಭೆಯನ್ನು ಉಪ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರ ಉಪಸ್ಥಿತಿಯಲ್ಲಿ ಏರ್ಪಡಿಸುವಂತೆ ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಕೋರುತ್ತೇನೆ ಎಂದು ಸೋಮಣ್ಣ ತಿಳಿಸಿದರು.
ವಿವಾದಿತ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಫೀಡರ್ ಯೋಜನೆಯನ್ನು ಕೂಡಲೇ ನಿಲ್ಲಿಸಿ, ಹೋರಾಟ ಮಾಡಿದ್ದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಿರಿ ಎಂದು ಕೇಂದ್ರ ಸಚಿವರು ತಾಕೀತು ಮಾಡಿದರು.
ವಿವಾದಿತ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಫೀಡರ್ ಯೋಜನೆಯಿಂದ ತುಮಕೂರು ಭಾಗದ ರೈತರಿಗೆ ಅನ್ಯಾಯ ಆಗುತ್ತಿದ್ದು, ತಕ್ಷಣವೇ ಈ ಯೋಜನೆಯ ಕಾಮಗಾರಿ ಸ್ಥಗಿತ ಮಾಡಬೇಕು ಎಂದು ಅವರು ಒತ್ತಾಯಿಸಿದರು. ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ ಅವರು ಸಹ ಪ್ರಸ್ತುತ ಬೆಳವಣಿಗೆಯ ಬಗ್ಗೆ ದೂರವಾಣಿ ಮುಖಾಂತರ ಚರ್ಚಿಸಿದ್ದು, ಅತ್ಯಂತ ಕಳವಳವನ್ನು ವ್ಯಕ್ತಪಡಿಸಿದ್ದಾರೆ.
ಆದಾಗ್ಯೂ ಈ ಭಾಗದ ಜನರ ಹಿತದೃಷ್ಟಿಯಿಂದ ಹಾಗೂ ರೈತರ ಜೀವನಾಡಿ ನೀರಿಲ್ಲದೇ ಬದುಕು ಇಲ್ಲ ಎಂಬುದರ ಸಾಧಕ ಬಾಧಕಗಳ ಬಗ್ಗೆ ರೈತರ, ಮಠಾಧೀಶರ ಹಾಗೂ ಜನಸಾಮಾನ್ಯರ ಮೇಲಿನ ದೌರ್ಜನ್ಯ ನಿವಾರಣೆಗೊಳಿಸಲು ಮತ್ತು ವಿವಾದಿತ ಯೋಜನೆಯ ನಿಜವಾದ ತಾಂತ್ರಿಕ ಅಂಶಗಳ ಮೇಲೆ ಚರ್ಚಿಸಲು ಈ ಯೋಜನಾ ವ್ಯಾಪ್ತಿಯಲ್ಲಿ ಬರುವ ಸಂಬಂಧಪಟ್ಟ ಎಲ್ಲಾ ಜನಪ್ರತಿನಿಧಿಗಳ ಸಭೆಯನ್ನು ಉಪ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರ ಉಪಸ್ಥಿತಿಯಲ್ಲಿ ತಕ್ಷಣ ಏರ್ಪಡಿಸುವಂತೆ ಒತ್ತಾಯಿಸಿದ್ದಾರೆ.
ಈ ಸಭೆಗೆ ತಾಂತ್ರಿಕ ತಜ್ಞರನ್ನು ಮತ್ತು ಈ ಹಿಂದೆ ಯೋಜನೆಯ ಕಾರ್ಯಸಾಧ್ಯತೆ ಇಲ್ಲವೆಂದು ಈಗ ಯೋಜನೆಯ ಕಾರ್ಯಸಾಧ್ಯತೆಯ ಬಗ್ಗೆ ಒಪ್ಪಿಗೆ ನೀಡಿರುವ ಅಧಿಕಾರಿಗಳನ್ನು ಸಹ ಈ ಸಭೆಯಲ್ಲಿ ಹಾಜರಿರುವಂತೆ ಸೋಮಣ್ಣ ಅವರು ಮನವಿ ಮಾಡಿದ್ದಾರೆ.