ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿ ಬಿ.ದಯಾನಂದ್ ಸೇರಿದಂತೆ ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ಕರ್ನಾಟಕ ಸರ್ಕಾರ ರದ್ದು ಮಾಡಿ ಆದೇಶ ಮಾಡಿದೆ.
11 ಮಂದಿ ಕಾಲ್ತುಳಿತದ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದ ಭದ್ರತಾ ಲೋಪಕ್ಕೆ ಸರ್ಕಾರ ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ್, ಡಿಸಿಪಿ ಶೇಖರ್, ಡಿವೈಎಸ್ಪಿ ಬಾಲಕೃಷ್ಣ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಗಿರೀಶ್ ಅವರನ್ನು ಅಮಾನತು ಮಾಡಿತ್ತು.
ಐಪಿಎಸ್ ಅಧಿಕಾರಿಗಳಾದ ಬಿ. ದಯಾನಂದ ಮತ್ತು ಶೇಖರ್ ಎಚ್. ತೆಕ್ಕನ್ನವರ್ ಅವರನ್ನು ಅಖಿಲ ಭಾರತ ಸೇವೆಗಳ ನಿಯಮಗಳು 1969ರ ಅಡಿಯಲ್ಲಿ ಅಮಾನತುಗೊಳಿಸಲಾಗಿತ್ತು. ಇದಲ್ಲದೆ, ಡಿವೈಎಸ್ಪಿ ಸಿ ಬಾಲಕೃಷ್ಣ ಮತ್ತು ಪೊಲೀಸ್ ಇನ್ಸ್ಪೆಕ್ಟರ್ ಎಕೆ ಗಿರೀಶ್ ಅವರನ್ನೂ
ಕರ್ನಾಟಕ ರಾಜ್ಯ ಪೊಲೀಸ್ (ಶಿಸ್ತು ಕ್ರಮಗಳು) ನಿಯಮ 1965ರ ಅಡಿಯಲ್ಲಿ ಅಮಾನತುಗೊಳಿಸಲಾಗಿತ್ತು. ಇದೀಗ ಸರ್ಕಾರವು ಅವರ ಅಮಾನತು ಆದೇಶವನ್ನು ರದ್ದುಗೊಳಿಸಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಗೆ ಮರಳಲು ಸರ್ಕಾರ ಸೂಚಿಸಿದೆ. ಆದಾಗ್ಯೂ, ಅವರ ವಿರುದ್ಧದ ಶಿಸ್ತು ಕ್ರಮಗಳ ವಿಚಾರಣೆ ಮುಂದುವರಿಯಲಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

