ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಕಪ್ ತನ್ನದಾಗಿಸಿಕೊಂಡು ಸಂಭ್ರಮಾಚರಣೆಗೆ ಬಂದಿದ್ದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರಿ ನೂಕುನುಗ್ಗಲು, ಕಾಲ್ತುಳಿತ ಸಂಭವಿಸಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿ, 30ಕ್ಕೂ ಹೆಚ್ಚಿನ ಅಭಿಮಾನಿಗಳು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ಬುಧವಾರ ಸಂಜೆ ಜರುಗಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸಭೆ ನಡೆಸಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂಗೆ ಆಟಗಾರರನ್ನು ಹತ್ತಿರದಿಂದ ನೋಡಿ ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದು ಬಂದಿತ್ತು. ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರಿಂದ ದೊಡ್ಡ ಪ್ರಮಾಣದಲ್ಲಿ ನೂಕುನುಗ್ಗಲು ಹಾಗೂ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸಾವಿನ ಸಂಖ್ಯೆ ಏರಿಕೆ ಆಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
7 ಜನ ಸಾವು: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ 19 ಗಾಯಾಳುಗಳ ಪೈಕಿ 7 ಜನ ಮೃತಪಟ್ಟಿದ್ದಾರೆ. ಇನ್ನೂ ವೈದೇಹಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ 8 ಜನ ಗಾಯಾಳುಗಳ ಪೈಕಿ ನಾಲ್ವರು ಮೃತಪಟ್ಟಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಸೂಕ್ತ ಭದ್ರತೆಗೆ ಸಿಎಂ ಸೂಚನೆ:
ಕಾವೇರಿ ನಿವಾಸದಲ್ಲಿ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಹಾಗೂ ನಗರ ಪೊಲೀಸ್ ಆಯುಕ್ತರ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು.
ವಿದ್ಯಾರ್ಥಿಗಳು, ಯುವಕರು, ಯುವತಿಯರು ಮನೆಗೆ ಸೇಫಾಗಿ ತೆರಳಲು ವ್ಯವಸ್ಥೆ ಮಾಡಲು ಸೂಚಿಸಿದರು.
ವಿಧಾನಸೌಧ, ಸ್ಟೇಡಿಯಂನ ಸುತ್ತ ಸಂಚಾರ ತೆರವುಗೊಳಿಸಿ ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಹಾಗೂ ಅಗತ್ಯ ಭದ್ರತೆ ಕಲ್ಪಿಸಲು ಸೂಚಿಸಿದರು.
ಸಿಎಂ ಸಂತಾಪ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಸಿಎಂ ಹಾರೈಸಿದ್ದಾರೆ.
ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಇಂತಹದ್ದೊಂದು ನೂಕುನುಗ್ಗಲು ನಡೆದು ಜನಸಂದಣಿಯನ್ನು ನಿಯಂತ್ರಣ ಮಾಡಲಾಗದೆ ಅಹಿತಕರ ಘಟನೆ ನಡೆಯಬಹುದೆಂಬ ನಿರೀಕ್ಷೆಯಿಂದಲೇ ತಂಡದ ವಿಜಯಯಾತ್ರೆಗೆ ಅವಕಾಶ ನೀಡದೆ ಮುಂಜಾಗ್ರತೆ ವಹಿಸಲಾಗಿತ್ತು.
ಪರಿಸ್ಥಿತಿ ಹೀಗಿದ್ದರೂ ಕ್ರೀಡಾಂಗಣದ ಬಳಿ ಜನ ಕಿಕ್ಕಿರಿದು ಸಾಗರದಂತೆ ಜನ ಸೇರಿದ್ದ ಕಾರಣ ನೂಕುನುಗ್ಗಲು ನಡೆದು ಕಾಲ್ತುಳಿತದಿಂದ ಈ ಅವಘಡ ಸಂಭವಿಸಿದೆ. ಪ್ರೀತಿ – ಅಭಿಮಾನ ಈ ಎಲ್ಲಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಅರ್ಥ ಮಾಡಿಕೊಂಡು, ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದು ಸಿಎಂ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಡಿಸಿಎಂ ಪ್ರತಿಕ್ರಿಯೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಕುರಿತು ನಿಖರ ಮಾಹಿತಿ ಇಲ್ಲ. ಎಲ್ಲ ಮಾಹಿತಿಯನ್ನು ನಿಮಗೆ ತಿಳಿಸುತ್ತೇನೆ ಎಂದು ತಿಳಿಸಿದರು.
ಜನರ ಕ್ಷಮೆ ಯಾಚಿಸುವೆ:ಡಿಸಿಎಂ
ಐಪಿಎಲ್ ಕಪ್ ಖುಷಿಯಿಂದಾಗಿ ವಿಜಯಯಾತ್ರೆ ನಡೆಸಲು ಉದ್ದೇಶಿಸಿದ್ದೆವು. ಆದರೆ, ಭದ್ರತೆ ಹಿನ್ನೆಲೆಯಿಂದಾಗಿ ವಿಜಯಯಾತ್ರೆ ರದ್ದು ಮಾಡಲಾಯಿತು. ಪೊಲೀಸರು ಮರೆವಣಿಗೆ ಮಾಡುವುದು ಅಪಾಯಕಾರಿ ಎಂದ ತಿಳಿಸಿದ ಕಾರಣ ಕೈಬಿಟ್ಟೆವು ಎಂದು ತಿಳಿಸಿದರು.
ಮಳೆ ಬಂದ ಕಾರಣ ಜನಸಂದಣಿಯನ್ನು ನಿಯಂತ್ರಣ ಮಾಡಲು ಅಸಾಧ್ಯವಾಯಿತು. ಯುವಕರ ಮೇಲೆ ಲಾಠಿ ಪ್ರಹಾರ ಮಾಡಲು ಸಾಧ್ಯವಿಲ್ಲ. ಈ ದುರಂತದಿಂದಾಗಿ ಸಾಕಷ್ಟು ನೋವು ಆಗಿದ್ದು ರಾಜ್ಯದ ಜನರ ಕ್ಷಮೆಯಾಚಿಸುತ್ತೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಸಂಬಂಧಿಕರ ಆಕ್ರಂದನ:
ಆರ್ ಸಿಬಿ ಆಟಗಾರರು ಆಗಮಿಸುವ ಗೇಟ್ ನಂಬರ್ 12ರ ಬಳಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದ ವೇಳೆ ಭಾರಿ ನೂಕು ನುಗ್ಗಲು ಉಂಟಾಗಿದೆ.
ಈ ವೇಳೆ ಗಂಭೀರವಾಗಿ ಅಸ್ವಸ್ಥರಾಗಿದ್ದ ಮಹಿಳಾ ಅಭಿಮಾನಿಯನ್ನು ಕಾರಿನಲ್ಲಿ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ತನ್ನವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಗೇಟ್ ನಂಬರ್ 6 ರ ಬಳಿ ಯುವಕನೋರ್ವ ಗೇಟ್ ಹತ್ತಲು ಹೋಗಿ ಕಾಲು ಮುರಿದುಕೊಂಡಿರುವುದಾಗಿ ವರದಿಯಾಗಿದೆ. ಭಾರಿ ಜನ ಹಾಗೂ ವಾಹನ ದಟ್ಟಣೆಯಿಂದಾಗಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿ ಜನ ಜೀವನ ಅಸ್ತವ್ಯಸ್ತವಾಗಿತ್ತು.