![](https://www.chandravallinews.com/wp-content/uploads/2023/12/MLA-Sudhakar.jpeg)
i
ಕೆಕೆ ಪ್ರದೇಶಾಭಿವೃದ್ಧಿಗೆ ಪ್ರತ್ಯೇಕ ಎಂಜಿನಿಯರಿಂಗ್ ವಿಭಾಗ: ಸಚಿವ ಸುಧಾಕರ್…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ ಸುವರ್ಣಸೌಧ:
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ತ್ವರಿತ ಗತಿಯಲ್ಲಿ ಅಭಿವೃದ್ದಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪ್ರತ್ಯೇಕ ಎಂಜಿನಿಯರಿಂಗ್ ವಿಭಾಗವನ್ನು ಆರಂಭಿಸುವ ಚಿಂತನೆ ಇದೆ ಎಂದು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ಹೇಳಿದರು.ವಿಧಾನ ಪರಿಷತ್ನಲ್ಲಿ ಸದಸ್ಯ ಡಾ.ತಳವಾರ್ ಸಾಬಣ್ಣ ಅವರು ನಿಯಮ 72ರಡಿ ಕೋರಿದ್ದ ಗಮನ ಸೆಳೆಯುವ ಸೂಚನೆಗೆ ಪ್ರತಿಕ್ರಿಯಿಸಿದ ಸಚಿವರು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಗೆ 2013-14 ನೇ ಸಾಲಿನಿಂದ 2022-23ನೇ ಸಾಲಿನವರೆಗೆ 11878.33 ಕೋಟಿ ರೂ ಅನುದಾನ ನಿಗಧಿಪಡಿಸಿದ್ದು, 10228.8 ಕೋಟಿ ರೂ ಅನುದಾನ ಮಂಡಳಿಗೆ ಬಿಡುಗಡೆ ಮಾಡಲಾಗಿದೆ. ಈ ಪೈಕಿ 8333.37 ಕೋಟಿ ರೂ ಅನುದಾನ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು. ಇದೇ ಅವಧಿಯಲ್ಲಿ 29,246 ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದು, 24,996 ಕಾಮಗಾರಿಗಳು ಪೂರ್ಣಗೊಂಡಿವೆ. 3186 ಕಾಮಗಾರಿಗಳು ಪ್ರಗತಿಯಲ್ಲಿದ್ದು, 1064 ಕಾಮಗಾರಿಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.2023-24ನೇ ಸಾಲಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ಕ್ರಿಯಾಯೋಜನೆ ರೂಪಿಸಲು ರಾಜ್ಯಪಾಲರು ಅನುಮೋದನೆ ನೀಡಿದ್ದು, ಮಂಡಳಿಯಲ್ಲಿ ಕ್ರಿಯಾಯೋಜನೆ ಸಿದ್ಧಪಡಿಸುವ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು ಶೀಘ್ರದಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದರು. ಮಂಡಳಿಯಿಂದ ಅನುಮೋದನೆಗೊಂಡ ಕಾಮಗಾರಿಗಳನ್ನು ವಿವಿಧ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಕಾಮಗಾರಿಗಳನ್ನು 3ನೇ ತಪಾಸಣಾ ತಂಡದಿಂದ, ಇಂಜಿನಿಯರಿಂಗ್ ಕಾಲೇಜುಗಳಿಂದ, ಲೋಕೋಪಯೋಗಿ ಗುಣ ಭರವಸೆ ನಿಯಂತ್ರಣ ವಿಭಾಗ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಗುಣ ಭರವಸೆ ನಿಯಂತ್ರಣ ವಿಭಾಗ, ಸಣ್ಣ ನೀರಾವರಿ ಗುಣ ಭರವಸೆ ನಿಯಂತ್ರಣ ವಿಭಾಗ, ಇತ್ಯಾದಿ ಗುಣ ಭರವಸೆ ನಿಯಂತ್ರಣ ವಿಭಾಗಗಳಿಂದ ಪರಿಶೀಲಿಸಿ ದೃಢೀಕರಣ ಪಡೆಯಲಾಗುತ್ತಿದೆ ಎಂದರು.ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಗೆ ಪ್ರತಿ ವರ್ಷ 5000 ಕೋಟಿ ರೂ.ಅನುದಾನ ನೀಡುವ ಬಗ್ಗೆ ಈಗಾಗಲೇ ಘೋಷಣೆ ಮಾಡಿದ್ದು, ಈ ಅನುದಾನಕ್ಕೆ ಕ್ರಿಯಾಯೋಜನೆ ರೂಪಿಸಿ ತ್ವರಿತ ಗತಿಯಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಅನುಕೂಲವಾಗುವಂತೆ ಪ್ರತ್ಯೇಕ ಎಂಜಿನಿಯರಿಂಗ್ ವಿಭಾಗವನ್ನು ಆರಂಭಿಸುವ ಚಿಂತನೆ ಇದ್ದು, ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ವೆಚ್ಚ ಮಾಡಲಾಗುವುದು ಎಂದರು. ಗಮನ ಸೆಳೆಯುವ ಈ ಸೂಚನೆಯಲ್ಲಿ ಸಚಿವ ಈಶ್ವರ ಖಂಡ್ರೆ, ವಿಧಾನ ಪರಿಷತ್ ಶಾಸಕರಾದ ತೇಜಸ್ವಿನಿ ಗೌಡ, ರಘುನಾಥ್ರಾವ್ ಮಲ್ಕಾಪುರೆ, ವೆಂಕಟೇಶ, ಬೋಜೇಗೌಡ, ತಿಪ್ಪಣ್ಣ, ರವಿಕುಮಾರ್, ಸತೀಶ್, ನಮೋಶಿ ಮತ್ತಿತರರು ಮಾತನಾಡಿದರು.