![](https://www.chandravallinews.com/wp-content/uploads/2024/05/WhatsApp-Image-2024-05-31-at-6.54.56-PM-1.jpeg)
i
ತಂಬಾಕಿನ ದುಷ್ಪರಿಣಾಮ ಕುರಿತು ಜಾಗೃತಿ ಅಗತ್ಯ-ನ್ಯಾಯಾಧೀಶೆ ಉಜ್ವಲ ವೀರಣ್ಣ ಸಿದಣ್ಣವರ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
13 ರಿಂದ 14 ವರ್ಷದ ಹದಿಹರೆಯದ ಮಕ್ಕಳು ಕುತೂಹಲದಿಂದ ತಂಬಾಕು ಸೇವನೆ ಕಡೆ ಮುಖ ಮಾಡುತ್ತಾರೆ. ಇಂತಹ ಮಕ್ಕಳನ್ನು ಗುರುತಿಸಿ ಚಿಕತ್ಸೆ ನೀಡಿ, ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಉಜ್ವಲ ವೀರಣ್ಣ ಸಿದಣ್ಣವರ್ ಹೇಳಿದರು.
ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ, ಆಯೋಜಿಸಲಾದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಾಮಾನ್ಯ ವ್ಯಕ್ತಿಗಳು ತಂಬಾಕು ಸೇವನೆಯಿಂದಾಗುವ ಪರಿಣಾಮಗಳನ್ನು ಹೇಳಿದರೆ ವ್ಯಸನಿಗಳು ಕೇಳುವುದಿಲ್ಲ. ವೈದ್ಯರು ಹೇಳಿದರೆ ಕೇಳುತ್ತಾರೆ. ಇಂದು ವಿದ್ಯಾರ್ಥಿಗಳಾಗಿರುವ ನೀವು ಮುಂದೆ ವೈದ್ಯರಾಗಿ ರೋಗಿಗಳ ಸೇವೆ ಮಾಡುವಿರಿ. ಈ ಹಿನ್ನಲೆಯಲ್ಲಿ ಆರ್ಯುವೇದ ಕಾಲೇಜಿನಲ್ಲಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ.
ತಂಬಾಕು, ಲಿಕ್ಕರ್, ಸಿಗರೇಟ್ ಸೇವನೆ ಮಾಡುವುದರಿಂದ ಆರೋಗ್ಯ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಎಲ್ಲರಿಗೂ ತಿಳಿದಿದೆ. ಇವುಗಳ ಸೇವನೆಯಿಂದ ಆರೋಗ್ಯ ಹದಗೆಡುತ್ತದೆ. ಈ ಬಗ್ಗೆ ತಂಬಾಕು ಉತ್ಪನ್ನಗಳ ಮೇಲೆ ಚಿತ್ರಗಳ ಸಹಿತ ಬಿತ್ತರಿಸಿದರೂ, ಸೇವನೆ ಮಾಡುತ್ತಿರುವುದು ದುರಂತ.
ಚಲನಚಿತ್ರಗಳ ಪರಿಣಾಮಗಳಿಂದ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಅನೇಕ ಮಕ್ಕಳು ತಂಬಾಕು, ಗಾಂಜಾ ಸೇವನೆ ಮಾಡಿ ಕಾನೂನು ಸಂಘರ್ಷಕ್ಕೆ ಸಿಲುಕುತ್ತಾರೆ. ಇವರನ್ನು ರಕ್ಷಿಸುವುದೇ ಈ ಬಾರಿಯ ವಿಶ್ವ ತಂಬಾಕು ರಹಿತ ದಿನದ ಘೋಷ ವಾಕ್ಯವಾಗಿದೆ. ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸೋಣ ಎಂದರು.
ಜಿಲ್ಲಾಸ್ಪತ್ರೆಯ ದಂತ ವೈದ್ಯಧಿಕಾರಿ ಪ್ರಸನ್ನಕುಮಾರ್ ಮಾತನಾಡಿ, ತಂಬಾಕು ಉತ್ಪನ್ನಗಳನ್ನು ಉಪಯೋಗಿಸುವುದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಗಾಢವಾದ ಪರಿಣಾಮ ಬೀರುತ್ತದೆ. ತಂಬಾಕು ಸೇವನೆ ಸಾಮಾಜಿಕ ಪಿಡುಗು ಎಂದರೆ ತಪ್ಪಾಗಲಾರದು. ತಂಬಾಕು ಹಾಗೂ ಇತರೆ ಗುಟ್ಕಾ ಸೇವನೆ ಕ್ರಮೇಣ ಚಟವಾಗಿ ಮಾರ್ಪಟ್ಟು, ಕ್ಯಾನ್ಸರ್ನಂತಹ ಮಾರಣಾಂತಿಕ ರೋಗಗಳಿಗೆ ತುತ್ತಾಗಬಹುದು. ಆದ್ದರಿಂದ ತಂಬಾಕು ಸೇವನೆಗಳ ಬಗ್ಗೆ ಇನ್ನೂ ಹೆಚ್ಚಿನ ಅರಿವು ಹೊಂದಬೇಕು.
ಈ ದುಶ್ಚಟಗಳಿಂದ ದೂರವಾಗಿಸಲು ಪ್ರತಿ ತಾಲ್ಲೂಕು ಆಸ್ಪತ್ರಗಳಲ್ಲಿ ಹಾಗೂ ಗ್ರಾಮೀಣ ಪ್ರಾಥಮಿಕ ಆರೋಗ್ಯ ಸಮುದಾಯಗಳಲ್ಲಿ ನಿಕೋಟಿನ್ ವ್ಯಸನದಿಂದ ಮುಕ್ತರಾಗಲು ಔಷದ ನೀಡಲಾಗುತ್ತದೆ. ಇದನ್ನು ಸೇವನೆ ಮಾಡಿದರೆ ಕಾಲ ಕ್ರಮೇಣ ದುಶ್ಚಟಗಳಿಂದ ಹೊರಬರಬಹುದಾಗಿದೆ. ಜಿಲ್ಲೆಯು ತಂಬಾಕು ಉತ್ಪನ್ನಗಳ ಬಳಕೆಯಲ್ಲಿ ರಾಜ್ಯದಲ್ಲಿ 2ನೇ ಸ್ಥಾನದಲ್ಲಿದೆ ಹಾಗಾಗಿ ಇದೇ ಸಂದರ್ಭದಲ್ಲಿ ತಂಬಾಕು ಇತರೆ ಉತ್ಪನ್ನಗಳನ್ನು ಜಿಲ್ಲೆಯಲ್ಲಿ ನಿಷೇಧಿಸುವಂತೆ ನ್ಯಾಯಾಧೀಶರಿಗೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಂ. ಅನಿಲ್ ಕುಮಾರ್, ಕಾರ್ಯದರ್ಶಿ ಆರ್.ಗಂಗಾಧರ್, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ.ಚಂದ್ರಶೇಖರ್ ಕಂಬಾಳಿಮಠ, ಜಿ ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ.ಎಂ.ಎಸ್.ಪ್ರಶಾAತ್ ಹಾಗೂ ಅಮೃತ ಆಯುರ್ವೇದಿಕ್ ಕಾಲೇಜ್ ಮತ್ತು ಆಸ್ಪತ್ರೆಯ ವಿದ್ಯಾರ್ಥಿಗಳು ಹಾಗೂ ಇತರೆ ಸಿಬ್ಬಂದಿ ಉಪಸ್ಥತರಿದ್ದರು.