i
ಕೆಂಪೇಗೌಡ ಜಯಂತ್ಯೋತ್ಸವ ಸಾನ್ನಿಧ್ಯ ನಿರ್ಮಲಾನಂದನಾಥ ಸ್ವಾಮೀಜಿ..
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 2024ನೇ ಜೂನ್ 27ರಂದು ಬೆಳಿಗ್ಗೆ 10 ಗಂಟೆಗೆ “ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯೋತ್ಸವ” ಸಮಾರಂಭವನ್ನು ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದು, ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಸ್ಫಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಂಜಾವಧೂತ ಸ್ವಾಮೀಜಿ ಹಾಗೂ ಬೆಂಗಳೂರು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಗಳು ಸಮಾರಂಭದ ದಿವ್ಯ ಸಾನಿಧ್ಯ ವಹಿಸಲಿರುವರು.
ಕೇಂದ್ರ ಹಣಕಾಸು ಹಾಗೂ ಕಾರ್ಪೋರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ, ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ, ಸಭಾಪತಿ ಬಸವರಾಜ್ ಎಸ್ ಹೊರಟ್ಟಿ ಹಾಗೂ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಪರೀಧ್ ಅವರು ಘನ ಉಪಸ್ಥಿತರಿರುವರು.
ಕಂದಾಯ ಸಚಿವರು ಹಾಗೂ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೃಷ್ಣ ಭೈರೇಗೌಡ, ಸಾರಿಗೆ ಹಾಗೂ ಮುಜರಾಯಿ ಸಚಿವರು ಹಾಗೂ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ರಾಮಲಿಂಗಾರೆಡ್ಡಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಮತ್ತು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಪದನಿಮಿತ್ತ ಸದಸ್ಯ ಶಿವರಾಜ ಎಸ್ ತಂಗಡಗಿ ಗೌರವ ಉಪಸ್ಥಿತರಿರುವರು. ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್ ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು.
ಸಮಾರಂಭದ ಉದ್ಘಾಟನೆಗೂ ಮುನ್ನ ವಿವಿಧ ಭಾಗಗಳಿಂದ ಬೆಳಿಗ್ಗೆ 7 ಗಂಟೆಗೆ ನಾಡಪ್ರಭು ಕೆಂಪೇಗೌಡರ ಪುರಜ್ಯೋತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರಿಗೆ ಹಾಗೂ ಮುಜರಾಯಿ ಸಚಿವರು ಮತ್ತು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ಮಾಗಡಿಯ ಕೆಂಪಾಪುರದಲ್ಲಿರುವ ನಾಡಪ್ರಭು ಕೆಂಪೇಗೌಡರ ಸಮಾದಿಯಿಂದ ಪುರಜ್ಯೋತಿಗೆ ಚಾಲನೆ ನೀಡಲಿರುವರು. ಮಾಗಡಿ ವಿಧಾನಸಭಾ ಕ್ಷೇತ್ರ ಶಾಸಕ ಹೆಚ್.ಸಿ. ಬಾಲಕೃಷ್ಣ ಘನ ಉಪಸ್ಥಿತಿ ವಹಿಸಲಿರುವರು.
ವಸತಿ, ವಕ್ಫ್ ಹಾಗೂ ಅಲ್ಪಸಂಕ್ಯಾತರ ಕಲ್ಯಾಣ ಸಚಿವ ಜಿ. ಝಡ್. ಜಮೀರ್ ಅಹ್ಮದ್ ಖಾನ್ ಅವರು ಕೆಂಪಾಂಬೂದಿ ಕೆರೆ ಗಡಿ ಗೋಪುರದಿಂದ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಅವರು ಲಾಲ್ಬಾಗ್ ಗಡಿ ಗೋಪುರದಿಂದ, ನಗರಾಭಿವೃದ್ಧಿ ಮತ್ತು ಮತ್ತು ನಗರ ಯೋಜನೆ ಸಚಿವ ಸುರೇಶ್ ಬಿ.ಎಸ್ ಮೇಖ್ರಿ ವೃತ್ತ ಗಡಿ ಗೋಪುರದಿಂದ, ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಹಲಸೂರು ಕೆರೆ ಗಡಿ ಗೋಪುರದಿಂದ, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಆವತಿಯ ಚೆನ್ನಕೇಶವ ದೇವಾಲಯದ ಆವರಣದಿಂದ ಹಾಗೂ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಹುತ್ರಿದುರ್ಗದ ಬಯಲು ಬಿಸಿಲು ಬಸವಣ್ಣನ ಸ್ಥಳದಿಂದ ಪುರಜ್ಯೋತಿಗೆ ಚಾಲನೆ ನೀಡಲಿರುವರು. ಕುಣಿಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಹೆಚ್.ಡಿ. ರಂಗನಾಥ್ ಅವರು ಘನ ಉಪಸ್ಥಿತಿ ವಹಿಸಲಿರುವರು.
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಕಂದಾಯ ಸಚಿವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಪುರಜ್ಯೋತಿ ಸ್ವೀಕರಿಸಲಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.