ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ರೈತರ ದಶಕಗಳ ಕನಸಾದ 16 ಕೆರೆಗಳು ಮತ್ತು ಗಾಯತ್ರಿ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆಗೆ ವೇಗ ಸಿಕ್ಕಿದೆ. ಈ ಸಂಬಂಧ ಸುಮಾರು ರೂ. 266.75 ಕೋಟಿ ಮೊತ್ತದ ವಿವರವಾದ ಯೋಜನಾ ವರದಿ (DPR) ಸಿದ್ಧವಾಗಿದ್ದು, ಈ ಕುರಿತು ಸಣ್ಣ ನೀರಾವರಿ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಲಾಯಿತು.
ಯೋಜನೆಯ ಪ್ರಮುಖ ಮುಖ್ಯಾಂಶಗಳು:
ಒಟ್ಟು ವೆಚ್ಚ: 266.75 ಕೋಟಿ. ವ್ಯಾಪ್ತಿ: ಜವನಗೊಂಡನಹಳ್ಳಿ ಹೋಬಳಿಯ 16 ಕೆರೆಗಳು ಹಾಗೂ ಗಾಯತ್ರಿ ಜಲಾಶಯ ಸೇರಿದಂತೆ ಒಟ್ಟು 17 ಜಲಮೂಲಗಳು.ಪೈಪ್ಲೈನ್ ಉದ್ದ: ಒಟ್ಟು 86.11 ಕಿ.ಮೀ. ಉದ್ದದ ಪೈಪ್ಲೈನ್ ಅಳವಡಿಸುವ ಮೂಲಕ ಕುಡಿಯುವ ನೀರು ಮತ್ತು ಅಂತರ್ಜಲ ಅಭಿವೃದ್ಧಿಗಾಗಿ ನೀರು ಸರಬರಾಜು ಮಾಡಲಾಗುತ್ತದೆ.
ತಾಂತ್ರಿಕ ಸಮಿತಿ ಸಭೆಗೆ ಸೂಚನೆ:
ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಯೋಜನೆಯ ಅಂದಾಜು ಪಟ್ಟಿಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಈ ಯೋಜನೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು, ಬರುವ ಏಪ್ರಿಲ್-09ರಂದು ಸರ್ಕಾರದ ಮಟ್ಟದಲ್ಲಿ ನಡೆಯಲಿರುವ ‘ತಾಂತ್ರಿಕ ಸಲಹಾ ಸಮಿತಿ‘ (TAC) ಸಭೆಯಲ್ಲಿ ಕಡ್ಡಾಯವಾಗಿ ಮಂಡಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಈ ಮಹತ್ವದ ಸಭೆಯಲ್ಲಿ ಕೆಪಿಸಿಸಿ ಸದಸ್ಯರು ಹಾಗೂ ತಾಲ್ಲೂಕು ಶಿಕ್ಷಣ ಸುಧಾರಣಾ ಸಮಿತಿ ಅಧ್ಯಕ್ಷ ಎ.ಎಂ ಅಮೃತೇಶ್ವರ ಸ್ವಾಮಿ, ಸಚಿವರ ಆಪ್ತ ಸಹಾಯಕ ಕೆ. ಪ್ರಕಾಶ್, ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಕೃಷ್ಣ, ಎಇಇ ಅಣ್ಣಪ್ಪ, ಎಇ ಪರಶುರಾಮ್ ಹಾಗೂ ಡಿಪಿಆರ್ ಸಿದ್ಧಪಡಿಸಿದ ಕನ್ಸಲ್ಟೆನ್ಸಿ ಇಂಜಿನಿಯರ್ಗಳು ಉಪಸ್ಥಿತರಿದ್ದರು.
ಈ ಯೋಜನೆಯು ಜಾರಿಯಾದಲ್ಲಿ ಜವನಗೊಂಡನಹಳ್ಳಿ ಹೋಬಳಿಯ ಭಾಗದಲ್ಲಿ ಅಂತರ್ಜಲ ಮಟ್ಟ ವೃದ್ಧಿಯಾಗುವುದಲ್ಲದೆ, ಕೃಷಿ ಮತ್ತು ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.

