70 ಲಕ್ಷ ಮಾನವ ದಿನ ಸೃಜನೆ ತುಮಕೂರು ರಾಜ್ಯಕ್ಕೆ ಪ್ರಥಮ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
2024-25ನೇ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸುಮಾರು 45 ಸಾವಿರ ಕಾಮಗಾರಿಗಳನ್ನು ಅನುಷ್ಟಾನ ಮಾಡಿ, 70 ಲಕ್ಷ ಮಾನವ ದಿನಗಳನ್ನು ಸೃಜನೆ (50 ಲಕ್ಷ ಗುರಿಗೆ ಶೇ 140 ರಷ್ಟು ಸಾಧನೆ) ಮಾಡುವ ಮೂಲಕ ತುಮಕೂರು ಜಿಲ್ಲೆಯು ರಾಜ್ಯದಲ್ಲಿಯೇ ಪ್ರಥಮ ಸ್ಥಾನವನ್ನು ಪಡೆದಿದೆ ಎಂದು ತುಮಕೂರು ಜಿಲ್ಲಾ ಪಂಚಾಯತ್ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರಭು ಜಿ ರವರು ತಿಳಿಸಿದ್ದಾರೆ.

ಜಿಲ್ಲೆಯ 10 ತಾಲ್ಲೂಕುಗಳ ಪೈಕಿ ಮಧುಗಿರಿ ತಾಲ್ಲೂಕು 14 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡುವ ಮೂಲಕ ಜಿಲ್ಲೆಗೆ ಮೊದಲ ಸ್ಥಾನದಲ್ಲಿದ್ದರೆ, 11 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡುವ ಮೂಲಕ ಪಾವಗಡ ತಾಲ್ಲೂಕು 2ನೇ ಸ್ಥಾನದಲ್ಲಿದೆ.

ತುಮಕೂರು ಜಿಲ್ಲೆಯಲ್ಲಿ 245 ಕೋಟಿ ರೂ.ಗಳಷ್ಟು ಕೂಲಿ ಹಣ ಪಾವತಿಯಾದರೆ, 145 ಕೋಟಿ ರೂ.ಗಳಷ್ಟು ಸಾಮಗ್ರಿ ಹಣ ಪಾವತಿಯಾಗಿರುತ್ತದೆ. ತುಮಕೂರು ಜಿಲ್ಲೆಯಲ್ಲಿ 27534 ವೈಯಕ್ತಿಕ ಕಾಮಗಾರಿಗಳಿಂದ 48.83 ಲಕ್ಷ ಮಾನವ ದಿನಗಳ ಸೃಜನೆಯಾಗಿದ್ದರೆ, 4025 ಜಲ ಸಂರಕ್ಷಣಾ ಕಾಮಗಾರಿಗಳಿಂದ 11.83 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆ. 2782 ಶಾಲಾಭಿವೃದ್ಧಿ ಕಾಮಗಾರಿಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿದ್ದು, ಇದರಿಂದಾಗಿ 3.32 ಲಕ್ಷ ಮಾನವ ದಿನಗಳನ್ನು ಸೃಜಿಸುವ ಮೂಲಕ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಅದೇ ರೀತಿ ತುಮಕೂರು ಜಿಲ್ಲೆಯಲ್ಲಿ 3682 ಚರಂಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಗ್ರಾಮೀಣ ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಇದರಿಂದಾಗಿ 3.11 ಲಕ್ಷ ಮಾನವ ದಿನಗಳು ಸೃಜನೆಯಾಗಿವೆ. ಮುಂದುವರೆದು ಗ್ರಾಮೀಣ ಭಾಗಗಳಲ್ಲಿ 2797 ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಗೊಳ್ಳುವ ಮೂಲಕ 2.81 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆ. ಜಿಲ್ಲೆಯಲ್ಲಿ 130 ಎನ್ಆರ್ಎಲ್ಎಂ ಸಂಜೀವಿನಿ ಭವನಗಳನ್ನು ನಿರ್ಮಿಸುವ ಮೂಲಕ ಮಹಿಳಾ ಸ್ವಸಹಾಯ ಸಂಘಗಳ ಆರ್ಥಿಕ ಬಲವರ್ಧನೆಗೆ ಶ್ರಮಿಸಲಾಗಿದೆ ಎಂದು ಅವರು ತಿಳಿಸಿದರು.

ತುಮಕೂರು ಜಿಲ್ಲೆಯಲ್ಲಿ 330 ಗ್ರಾಮ ಪಂಚಾಯಿತಿಗಳಿಂದ ಒಟ್ಟು 53.51 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆ. ಅಲ್ಲದೆ ಅನುಷ್ಟಾನ ಇಲಾಖೆಗಳಾದ ಕೃಷಿ ಇಲಾಖೆಯಿಂದ 4.05 ಲಕ್ಷ ಮಾನವ ದಿನಗಳ ಸೃಜನೆ, ತೋಟಗಾರಿಕೆ ಇಲಾಖೆಯಿಂದ 5.94 ಲಕ್ಷ ಮಾನವ ದಿನಗಳ ಸೃಜನೆ , ರೇಷ್ಮೇ ಇಲಾಖೆಯಿಂದ 1.61 ಲಕ್ಷ ಮಾನವ ದಿನಗಳ ಸೃಜನೆ , ಅರಣ್ಯ ಇಲಾಖೆಯಿಂದ 4.19 ಲಕ್ಷ ಮಾನವ ದಿನಗಳು ಹಾಗೂ  ಪಂಚಾಯತ್ರಾಜ್ಇಲಾಖೆಯಿಂದ 1.00 ಲಕ್ಷ ಮಾನವದಿನಗಳನ್ನು ಸೃಜನೆ ಮಾಡುವ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗಿದೆ ಎಂದು ಸಿಇಓ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯನ್ನು ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆಯಲು ಸದಾ ಮಾರ್ಗದರ್ಶನ ನೀಡುತ್ತಾ ಬಂದಿರುವ ತುಮಕೂರು ಜಿಲ್ಲೆಯ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ರವರು ಸಹಕಾರ ಸಚಿವರಾದ ಕೆ.ಎನ್‌.ರಾಜಣ್ಣ ರವರು ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಸಕರು, ಉಪಕಾರ್ಯದರ್ಶಿಗಳು(ಅಭಿವೃದ್ಧಿ), ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು(ಗ್ರಾ.), ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು,ಸದಸ್ಯರು,ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದ ತಾಂತ್ರಿಕ ಮತ್ತು ತಾಂತ್ರಿಕೇತರ ಅಧಿಕಾರಿಗಳು ಹಾಗೂ ಎಲ್ಲಾ ಸಿಬ್ಬಂದಿಗಳ ಸಹಕಾರದಿಂದ ಸಾಧನೆ ಸಾಧ್ಯವಾಗಿದೆ ಎಂದು ಪ್ರಭು  ಜಿ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Share This Article
error: Content is protected !!
";