ಮಕ್ಕಳ ಹಕ್ಕುಗಳು, ಯೋಜನೆಗಳ ತಿಳುವಳಿಕೆ ಅಗತ್ಯ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹದಿನೆಂಟು ವರ್ಷದೊಳಗಿನ ಮಕ್ಕಳು ಹಾಗೂ ವಿಕಲಚೇತನ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳು
, ಯೋಜನೆಗಳು ಹಾಗೂ ಹಕ್ಕುಗಳು ಸಮರ್ಪಕವಾಗಿ ಅನುಷ್ಠಾನವಾಗುತ್ತಿರುವ ಕುರಿತು ಹೆಚ್ಚಿನ ತಿಳುವಳಿಕೆ ಇರುವುದು ಅಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಗ್ರಾಮೀಣ, ನಗರ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ರಕ್ಷಣೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

- Advertisement - 

ಜಿಲ್ಲೆಯಲ್ಲಿ 35,971 ಜನರು ವಿಕಲಚೇತನರು ಇದ್ದು, ಇದರಲ್ಲಿ 10,884 ಮಂದಿ 18 ವರ್ಷದ ವಿಕಲಚೇತನ ಮಕ್ಕಳಿದ್ದಾರೆ. ಈ ಹಿನ್ನಲೆಯಲ್ಲಿ ಮಕ್ಕಳಿಗೆ ಸಂಬಂಧಿಸಿದ ಕಾಯ್ದೆ, ಕಾನೂನು, ಕಾರ್ಯಕ್ರಮಗಳ ಪರಿಚಯ ಬಹಳ ಮುಖ್ಯ. ಒಂದು ವೇಳೆ ಮಕ್ಕಳ ಕಾನೂನುಗಳ ಮಾಹಿತಿ ಇಲ್ಲದಿದ್ದರೆ ಅರ್ಹ ಫಲಾನುಭವಿಗಳಿಗೆ ಮಾಹಿತಿ ಕೊರತೆಯಿಂದಾಗಿ  ಅನೇಕ ಸೌಲಭ್ಯಗಳಿಂದ ವಂಚನೆಯಾಗಲಿದ್ದಾರೆ. ಕಾನೂನು ಮತ್ತು ನೀತಿಗಳ ಪ್ರಕ್ರಿಯೆ ಕೊರತೆಯಾದಾಗ, ಒಂದು ಪ್ರಕರಣದ ಸಂಭವಿಸಿದಾಗ ಅದನ್ನು ನಿರ್ವಹಣೆ ಮಾಡುವಾಗ ಲೋಪದೋಷಗಳು ಆಗುವ ಸಂಭವ ಇರುತ್ತದೆ ಎಂದು ತಿಳಿಸಿದರು.

ಗ್ರಾಮೀಣ, ನಗರ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ವಿಕಲಚೇತನರ ಸಬಲೀಕರಣಕ್ಕಾಗಿ ಹಾಗೂ ವಿಕಲಚೇತನರು ಹಾಗೂ 18 ವರ್ಷದ ಒಳಗಿನ ಮಕ್ಕಳ ಜೊತೆಗೆ ನೀವು ಕಾರ್ಯನಿರ್ವಹಿಸುತ್ತಿದ್ದು, ಅಂತಹ ಮಕ್ಕಳ ಸಂಬಂಧಿತ ಕಾಯ್ದೆಗಳು, ನೀತಿಗಳು, ಪ್ರಸ್ತುತ ದಿನಗಳಲ್ಲಿ ಆಗಿರುವ ಬದಲಾವಣೆಗಳು ಕುರಿತು ನಿಮ್ಮಗಳ ಸಾಮಾಥ್ರ್ಯ ಅಭಿವೃದ್ಧಿ ತರಬೇತಿ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ ಎಂಬುದು ಗಮನಕ್ಕೆ ಬಂದಿದ್ದು, ಈ ಹಿನ್ನಲೆಯಲ್ಲಿ ಪ್ರಸ್ತಕ ವರ್ಷದ ಕ್ರಿಯಾ ಯೋಜನೆಯಲ್ಲಿ ರಾಜ್ಯದ ಎಲ್ಲ ಎಂ.ಆರ್.ಡ್ಲ್ಯೂ, ವಿ.ಆರ್.ಡಬ್ಲ್ಯೂ ಹಾಗೂ ಯು.ಆರ್.ಡಬ್ಲ್ಯೂಗಳಿಗೆ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಕಾನೂನುಗಳ ಕುರಿತು ತರಬೇತಿಯನ್ನು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.

- Advertisement - 

ಸರ್ಕಾರದ ಎಲ್ಲ ಇಲಾಖೆಗಳು ಅಭಿವೃದ್ಧಿ ಅನುದಾನದಲ್ಲಿ ಶೇ.5ರಷ್ಟು ಅನುದಾನವನ್ನು ವಿಕಲಚೇತನರಿಗಾಗಿಯೇ ಬಳಸಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ವರ್ಷಕೊಮ್ಮೆ ಕನಿಷ್ಟ ಒಂದು ಬಾರಿಯಾದರೂ ವಿಕಲಚೇತನರ ಗ್ರಾಮಸಭೆ ನಡೆಸಬೇಕು ಎಂದು ತಿಳಿಸಿದ ಅವರು, ಒಬ್ಬ ಮನುಷ್ಯನ ಸಬಲೀಕರಣದಲ್ಲಿ ಮಾಹಿತಿ ತಿಳುವಳಿಕೆಯೇ ಮೊದಲ ಮೆಟ್ಟಿಲು. ಹಾಗಾಗಿ ಗ್ರಾಮೀಣ, ನಗರ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ತರಬೇತಿ ನೀಡುವ ಮೂಲಕ ಸಾಮಥ್ರ್ಯದ ಅಭಿವೃದ್ಧಿಗೆ ಸಮಯ ನಿಗದಿ  ಹಾಗೂ ಅನುದಾನ ಮೀಸಲಿಡುವಂತೆ ವಿಕಲಚೇತನರ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಆಯೋಗ ಶಿಫಾರಸ್ಸು ಮಾಡಲು ಕ್ರಮ ಕೈಗೊಂಡಿದೆ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್.ವಿಜಯಕುಮಾರ್ ಮಾತನಾಡಿ, ಮಕ್ಕಳ ಹಕ್ಕುಗಳನ್ನು ಗ್ರಾಮ ಮಟ್ಟದಲ್ಲಿ ಜಾರಿಗೆ ತರುವಲ್ಲಿ ಅಗತ್ಯ ಕ್ರಮವಹಿಸಬೇಕು. ಯಾವುದೇ ಕಾರಣಕ್ಕೂ ಮಕ್ಕಳ ಹಕ್ಕುಗಳನ್ನು ಜಾರಿಗೆ ತರುವಲ್ಲಿ ಹಿಂದೇಟು ಹಾಕಬಾರದು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಮಕ್ಕಳ ಕಾವಲು ಸಮಿತಿ ರಚಿಸಲಾಗಿದ್ದು, ಪ್ರತಿ ಮೂರು ತಿಂಗಳಿಗೊಮ್ಮೆ ಮಕ್ಕಳ ಕಾವಲು ಸಮಿತಿ ಸಭೆ ನಡೆಸಬೇಕು ಎಂದು ತಿಳಿಸಿದ ಅವರು, ಮಹಿಳಾ ಮತ್ತು ಮಕ್ಕಳ ರಕ್ಷಣೆಗಾಗಿ ರಚಿಸಲಾಗಿರುವ ಸಮಿತಿ ಸಭೆಗಳನ್ನು ನಿಯಮಿತವಾಗಿ ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ಧಿಗಳ ಸಹಕಾರದೊಂದಿಗೆ ನಡೆಸಬೇಕು ಎಂದು ವಿಆರ್‍ಡಬ್ಲ್ಯೂಗಳಿಗೆ ಸೂಚನೆ ನೀಡಿದರು.

ಜಿಲ್ಲಾ ವಿಕಲಚೇತನರ ಕಲ್ಯಾಣಧಿಕಾರಿ ಜೆ.ವೈಶಾಲಿ ಮಾತನಾಡಿ, ಅಂಗವಿಕಲರ ಪುನರ್ವಸತಿ ಯೋಜನೆಯಡಿ ಜಿಲ್ಲೆಯ ಗ್ರಾಮೀಣ, ನಗರ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಕಾರ್ಯನಿರ್ವಹಿಸುತ್ತಿದ್ದು, ತಳಮಟ್ಟದಲ್ಲಿರುವ ವಿಕಲಚೇತನರಿಗೆ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ವಿಕಲಚೇತನರಿಂದಲೇ ವಿಕಲಚೇತನರಿಗೆ ಅವರ ಮನೆ ಬಾಗಿಲಿಗೆ ಸೌಲಭ್ಯಗಳನ್ನು ದೊರಕಿಸಿಕೊಡುವ ಉದ್ದೇಶದಿಂದ ಅಂಗವಿಕಲರ ಪುನರ್ವಸತಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು.

      ವಿಕಲಚೇತನರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು. ವಿಕಲಚೇತನರನ್ನು ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರನ್ನಾಗಿಸಬೇಕು. ಸಾಮಾಜಿಕ ಭದ್ರತಾ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಈ ನಿಟ್ಟಿನಲ್ಲಿ ಇಲಾಖೆಯ ಬೆನ್ನೆಲುಬಾಗಿ ಜಿಲ್ಲೆಯ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ ಕಾರ್ಯಕರ್ತರು ಕಾರ್ಯನಿರ್ವಹಿಸುತ್ತಿದ್ದು, ವಿಕಲಚೇತನ ಮಕ್ಕಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಸಮನ್ವಯವನ್ನು ಸಾಧಿಸಬೇಕು ಎಂದು ಕಿವಿಮಾತು ಹೇಳಿದರು.

ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಯ ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆ ಪ್ರಾದೇಶಿಕ ಸಂಯೋಜಕ, ಸಂಪನ್ಯೂಲ ವ್ಯಕ್ತಿ ಡಾ.ಕೆ.ರಾಘವೇಂದ್ರ ಭಟ್ ಅವರು ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ರಕ್ಷಣೆ ಕುರಿತು ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಗಂಗಪ್ಪ, ಜಿಲ್ಲಾ ನಿರೂಪಣಾಧಿಕಾರಿ ಡಿ.ಮಂಜುನಾಥ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಿ.ಶೀಲಾ, ಪ್ರಭಾರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಂ.ವಿ.ವೀಣಾ ಹಾಗೂ ಜಿಲ್ಲೆಯ ಎಂ.ಆರ್.ಡ್ಲ್ಯೂ, ವಿ.ಆರ್.ಡಬ್ಲ್ಯೂ ಹಾಗೂ ಯು.ಆರ್.ಡಬ್ಲ್ಯೂಗಳು ಇದ್ದರು.

 

Share This Article
error: Content is protected !!
";