ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಮುರುಘಾರಾಜೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ರೆಡ್ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಸ್ವಯಂಸೇವಕರು ಇದೇ ಮೊದಲ ಬಾರಿಗೆ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದರು.
ಯುವ ಜನತೆಯಲ್ಲಿ ಶಿಸ್ತು, ರಾಷ್ಟ್ರಭಕ್ತಿ ಹಾಗೂ ಸೇವಾ ಮನೋಭಾವನೆಯ ಮೌಲ್ಯಗಳ ಬೆಳೆಸುವ ನಿಟ್ಟಿನಲ್ಲಿ ರೆಡ್ಕ್ರಾಸ್ ಸಂಸ್ಥೆ ಮಹತ್ವದ ಪಾತ್ರ ವಹಿಸುತ್ತಿದ್ದು, ಪಥಸಂಚಲನದಲ್ಲಿ ಪಾಲ್ಗೊಂಡ ಸ್ವಯಂ ಸೇವಕರ ಶಿಸ್ತುಬದ್ಧ ನಡಿಗೆಯು ನೆರೆದಿದ್ದ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು.
ಅಂತರಾಷ್ಟ್ರೀಯ ಮಟ್ಟದಲ್ಲಿ ನಾಲ್ಕು ಬಾರಿ ನೊಬೆಲ್ ಶಾಂತಿ ಪ್ರಶಸ್ತಿ ಪಡೆದಿರುವ ಹೆಗ್ಗಳಿಕೆ ರೆಡ್ ಕ್ರಾಸ್ ಸಂಸ್ಥೆಯದ್ದು. ತುರ್ತು ಪರಿಸ್ಥಿತಿಗಳು, ವಿಪತ್ತು ನಿರ್ವಹಣೆ, ರಕ್ತದಾನ ಮತ್ತು ಆರೋಗ್ಯ ರಕ್ಷಣೆಯಂತಹ ಮಾನವೀಯ ಕಾರ್ಯಗಳಲ್ಲಿ ಸಂಸ್ಥೆ ಮುಂಚೂಣಿಯಲ್ಲಿದೆ.

