ಚಂದ್ರವಳ್ಳಿ ನ್ಯೂಸ್, ದೇವನಹಳ್ಳಿ:
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಹಾಕಿದ ಪ್ರಯಾಣಿಕ ಅಬು ಅಕಿಲ್ ಅಜರ್ ಚಾದ್ ಎಂಬಾತನನ್ನು ಬಂಧಿಸಲಾಗಿದೆ. ಬ್ಯಾಗ್ ತಪಾಸಣೆಯಿಂದ ಅಸಮಾಧಾನಗೊಂಡಿದ್ದ ಈತ, ತನ್ನ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದು ಸುಳ್ಳು ಹೇಳಿದ್ದ. ಪರಿಶೀಲನೆಯಲ್ಲಿ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ. ಸದ್ಯ, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರಿನಿಂದ ಅಹಮದಾಬಾದ್ಗೆ ಹೊರಟಿದ್ದ ವಿಮಾನದ ಪ್ರಯಾಣಿಕನೊಬ್ಬ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಹಾಕಿದ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ.
ಪರಿಣಾಮ ಕೆಲ ಕಾಲ ಏರ್ಪೋರ್ಟ್ನಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಯಿತು. ಸದ್ಯ, ಬಾಂಬ್ ಬೆದರಿಕೆ ಹಾಕಿದ ಬೆಂಗಳೂರು ಮೂಲದ ಅಬು ಅಕಿಲ್ ಅಜರ್ ಚಾದ್ ಎಂಬಾತನನ್ನು ಏರ್ಪೋರ್ಟ್ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಆಗಮಿಸಿದ್ದ ಅಬು ಅಕಿಲ್, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವೇಶದ ವೇಳೆ ತಪಾಸಣೆಗೆ ಒಳಗಾಗಿದ್ದ. ಈ ವೇಳೆ ಭದ್ರತಾ ನಿಯಮಾನುಸಾರ ಎರಡು ಹಂತಗಳಲ್ಲಿ ಬ್ಯಾಗ್ ಪರಿಶೀಲನೆ ನಡೆಸಲಾಗಿತ್ತು. ಇದರಿಂದ ಅಸಮಾಧಾನಗೊಂಡ ಅಬು ಅಕಿಲ್, ತನ್ನ ಬ್ಯಾಗ್ನಲ್ಲಿ ಎರಡು ಸಣ್ಣ ಬಾಂಬ್ಗಳಿವೆ ಎಂದು ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಬೆದರಿಕೆ ವಿಚಾರ ತಿಳಿದ ಕೂಡಲೇ ಎಚ್ಚೆತ್ತ ಏರ್ಪೋರ್ಟ್ ಭದ್ರತಾ ಸಿಬ್ಬಂದಿ, ಆರೋಪಿಯನ್ನು ತಕ್ಷಣ ವಶಕ್ಕೆ ಪಡೆದು, ಬ್ಯಾಗ್ ಅನ್ನು ಸಂಪೂರ್ಣವಾಗಿ ಪರಿಶೀಲಿಸಿದರು.
ಪರಿಶೀಲನೆಯಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಆದರೂ ಬಾಂಬ್ ಬೆದರಿಕೆ ಹಾಕಿದ ಕಾರಣ ಆರೋಪಿಯನ್ನು ಕೆಂಪೇಗೌಡ ಏರ್ಪೋರ್ಟ್ ಪೊಲೀಸ್ ಠಾಣೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಈ ಸಂಬಂಧ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಇಂತಹ ಬೆದರಿಕೆಗಳನ್ನು ಲಘುವಾಗಿ ಪರಿಗಣಿಸಲಾಗುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

