ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು 2026ನೇ ಫೆಬ್ರವರಿ 09 ರಂದು ಬೆಳಿಗ್ಗೆ 11.00 ಗಂಟೆಗೆ ಕಾವೇರಿ ಸಭಾಂಗಣದಲ್ಲಿ ಐ.ಎ.ಎಸ್. ಮತ್ತು ಕೆ.ಎ.ಎಸ್ ಪರೀಕ್ಷೆಗಳ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದು, ಮೈಸೂರು ಆಡಳಿತ ತರಬೇತಿ ಸಂಸ್ಥೆಯ ಜಂಟಿ ನಿರ್ದೇಶಕಿ ಶ್ರೀಮತಿ ಸಾಧನಾ ಎ. ಪೋಟಿ. ಅವರು ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ “ಪರೀಕ್ಷಾ ತಯಾರಿ ಕ್ರಮದ” ಬಗ್ಗೆ ಮಾರ್ಗದಶನ ನೀಡಲಿದ್ದಾರೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕುಲಸಚಿವ ಪ್ರೊ. ನವೀನ್ ಕುಮಾರ್ ಎಸ್.ಕೆ. ಅವರು ಉಪಸ್ಥಿತರಿರುತ್ತಾರೆ.
ಈ ತರಬೇತಿ ಶಿಬಿರದಲ್ಲಿ 50 ದಿನಗಳ ವರೆಗೆ ಶಿಬಿರಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸುವ ಬಗ್ಗೆ ತರಬೇತಿಯನ್ನು ನೀಡಲಿದೆ ಎಂದು ಕೇಂದ್ರ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣ ಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

