ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕಾರ್ಮಿಕರು, ರೈತ ವಿರೋಧಿ ಕಾಯಿದೆಗಳನ್ನು ಹಿಂದಕ್ಕೆ ಪಡೆಯುವಂತೆ ಫೆ.12 ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು, ರೈತರು ವಿವಿಧ ಸಂಘಟನೆಗಳವರು ಪಾಲ್ಗೊಳ್ಳುವಂತೆ ಸಂಯುಕ್ತ ಹೋರಾಟ ಸಮಿತಿಯ ಜೆ.ಯಾದವರೆಡ್ಡಿ ಮನವಿ ಮಾಡಿದರು.
ಮುಷ್ಕರಕ್ಕೆ ಸಂಬಂಧಿಸಿದಂತೆ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅನೇಕ ಮುಖಂಡರುಗಳ ತ್ಯಾಗ ಬಲಿದಾನಗಳಿಂದ ಜಾರಿಗೆ ಬಂದ ಕಾನೂನುಗಳನ್ನು ಕೇಂದ್ರ ಸರ್ಕಾರ ಬುಡಮೇಲು ಮಾಡಲು ಹೊರಟಿರುವುದರಿಂದ ಕಾರ್ಮಿಕರಿಗೆ ಸಾಮಾಜಿಕ ಹಾಗೂ ವೇತನ ಭದ್ರತೆಯಿಲ್ಲದಂತಾಗಿದೆ. ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ವಿಬಿಜಿರಾಮ್ಜಿ ಎಂದು ಬದಲಾಯಿಸಿರುವುದನ್ನು ಕೂಡಲೆ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು.
ನರೇಗಾ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲಿ ನೂರು ದಿನಗಳ ಉದ್ಯೋಗ ನೀಡಬೇಕೆಂದು ಸುಪ್ರೀಂಕೋರ್ಟ್ ಸೂಚಿಸಿದೆ. ರೈತರು ಬೀಜ ಉತ್ಪಾದನೆ ಮಾಡುವಂತಿಲ್ಲ. ಕಂಪನಿಗಳಲ್ಲಿಯೇ ಖರೀಧಿಸಬೇಕೆಂಬ ನಿಯಮ ಹೇರಿರುವುದರಿಂದ ಕಾರ್ಮಿಕರು, ರೈತರ ಬದುಕು ನಾಶವಾಗುತ್ತಿರುವುದನ್ನು ಖಂಡಿಸಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದರು.
ಸಿಪಿಐ. ಜಿಲ್ಲಾ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್ಬಾಬು ಮಾತನಾಡುತ್ತ ವಿಕಸಿತ ಭಾರತವೆಂದು ಹೆಮ್ಮೆಯಿಂದ ಬೀಗುತ್ತಿರುವ ಕೇಂದ್ರ ಸರ್ಕಾರ ರೈತರು, ಕಾರ್ಮಿಕರಿಗೆ ಯಾವುದೇ ಸೌಲಭ್ಯಗಳನ್ನು ನೀಡುತ್ತಿಲ್ಲ. ನಿರುದ್ಯೋಗ ಜಾಸ್ತಿಯಾಗಿದೆ. ಧರ್ಮ, ದೇವರ ಹೆಸರಿನಲ್ಲಿ ಅಧಿಕಾರ ನಡೆಸುತ್ತಿರುವ ಕೋಮುವಾದಿ ಬಿಜೆಪಿ. ಮೊದಲು ಶಿಕ್ಷಣ, ಆರೋಗ್ಯ, ಉದ್ಯೋಗಕ್ಕೆ ಒತ್ತು ಕೊಡಲಿ. ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪುತ್ತಿದ್ದರೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಚಕಾರವೆತ್ತದೆ ಮೌನವಹಿಸಿರುವುದು ನೋವಿನ ಸಂಗತಿ. ಭದ್ರಾ ಮೇಲ್ದಂಡೆ ಯೋಜನೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದರು. ರಾಜ್ಯದ ಸಂಸದರುಗಳು ಕೇಂದ್ರದಲ್ಲಿ ಧ್ವನಿ ಎತ್ತುತ್ತಿಲ್ಲವೆಂದು ಕಿಡಿ ಕಾರಿದರು.
ರೈತ ಮುಖಂಡ ಕೆ.ಪಿ.ಭೂತಯ್ಯ ಮಾತನಾಡಿ ಕಾರ್ಪೊರೇಟ್ ಕಂಪನಿಗಳು ಹಾಗೂ ಉದ್ಯಮಿಗಳ ಪರವಾಗಿರುವ ಆಳುವ ಸರ್ಕಾರಗಳು ಕಾರ್ಮಿಕರು, ರೈತರ ಹಿತವನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಸಲಾಗುತ್ತಿದೆ. ಭದ್ರಾಮೇಲ್ದಂಡೆ ಯೋಜನೆಗೆ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲ್ಲ. ಸಂಕಷ್ಟದಲ್ಲಿರುವ ರೈತರಿಗೆ ಬೆಳೆವಿಮೆ ಕೈಸೇರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ ಮಾತನಾಡುತ್ತ ಅಮೇರಿಕಾದಲ್ಲಿ ಬೆಳೆಯುವ ವಸ್ತುಗಳನ್ನು ನಮ್ಮ ದೇಶಕ್ಕೆ ತರಿಸಿಕೊಳ್ಳುವ ಒಪ್ಪಂದವನ್ನು ಪ್ರಧಾನಿ ಮೋದಿರವರು ಹಿಂದಕ್ಕೆ ಪಡೆಯಬೇಕು. ಇಲ್ಲದಿದ್ದರೆ ರೈತರಿಗೆ ತೊಂದರೆಯಾಗುತ್ತದೆ. ಭದ್ರಾಮೇಲ್ದಂಡೆ ಯೋಜನೆಗೆ ಕೂಡಲೆ ಹಣ ಬಿಡುಗಡೆಗೊಳಿಸುವಂತೆ ಮನವಿ ಮಾಡಿದರು.
ರೈತ ಸಂಘದ ರಾಜ್ಯ ವಲಯ ಉಪಾಧ್ಯಕ್ಷ ಬಸ್ತಿಹಳ್ಳಿ ಜಿ.ಸುರೇಶ್ಬಾಬು ಮಾತನಾಡಿ ಸ್ವಾಮಿನಾಥನ್ ವರದಿ ಜಾರಿಗೊಳಿಸಿ ರೈತರ ಬೆಳೆಗಳಿಗೆ ಬೆಂಬಲ ಬೆಲೆಯನ್ನು ನೀಡಬೇಕೆಂದು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್ ಮಾತನಾಡಿ ರೈತರು ಬೆಳೆಯುವ ಬೆಳೆಗಳನ್ನು ಸರ್ಕಾರಗಳು ಖರೀಧಿ ಮಾಡದ ಕಾರಣ ಅನ್ನದಾತ ರೈತ ಸಂಕಷ್ಟ ಅನುಭವಿಸುವಂತಾಗಿದೆ. ರೈತರ ಫಲವತ್ತಾದ ಕೃಷಿ ಭೂಮಿಗಳನ್ನು ಬಲವಂತವಾಗಿ ಕಸಿದುಕೊಳ್ಳಬಾರದು. ಕೃಷಿ ವಿರೋಧಿ ಕಾನೂನುಗಳನ್ನು ಹಿಂದಕ್ಕೆ ಪಡೆಯಬೇಕೆಂದರು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಮಲ್ಲಾಪುರ ತಿಪ್ಪೇಸ್ವಾಮಿ, ಟಿ.ಶಫಿವುಲ್ಲಾ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

