ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಹಾತ್ಮಾ ಗಾಂಧೀಜಿ ಜಯಂತಿ ಅಂಗವಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಚಿತ್ರದುರ್ಗ ತಾಲ್ಲೂಕು ಚವಲಿಹಳ್ಳಿ ಗೊಲ್ಲರಹಟ್ಟಿಯ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ತನುಜ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.
ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಗಾಂಧೀಜಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಮತ್ತು ಸ್ನಾತಕೊತ್ತರ ಪದವಿ ವಿಭಾಗಗಳಿಗೆ ಪ್ರತ್ಯೇಕವಾಗಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಚಿತ್ರದುರ್ಗ ತಾಲ್ಲೂಕು ಚವಲಿಹಳ್ಳಿ ಗೊಲ್ಲರಹಟ್ಟಿಯ ಸರ್ಕಾರಿ ಪ್ರೌಢಶಾಲೆ 10 ನೇ ತರಗತಿಯ ವಿದ್ಯಾರ್ಥಿನಿ ತನುಜ “ಸ್ವಚ್ಛತೆಯ ಪಾಠ-ಗಾಂಧೀಜಿಯವರ ಸಂದೇಶ” ವಿಷಯ ಕುರಿತು ಬರೆದ ಪ್ರಬಂಧಕ್ಕೆ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದರು. ವಿಭಾಗವಾರು ಪ್ರಥಮ ಬಹುಮಾನ ಪಡೆದಿದ್ದ ಪ್ರಬಂಧಗಳನ್ನು ಜಿಲ್ಲೆಯಿಂದ ರಾಜ್ಯ ಮಟ್ಟದ ಸ್ಪರ್ಧೆಗೆ ಕಳುಹಿಸಿಕೊಡಲಾಗಿತ್ತು.
ಇದೀಗ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದ್ದು, ಚಿತ್ರದುರ್ಗ ಜಿಲ್ಲೆಯ ವಿದ್ಯಾರ್ಥಿನಿ ತನುಜ ಅವರು ಪ್ರೌಢಶಾಲಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಹುಮಾನವು 11,000 ರೂ. ಗಳ ನಗದು ಹಾಗೂ ಪ್ರಮಾಣ ಪತ್ರ ಒಳಗೊಂಡಿರುತ್ತದೆ ಎಂದು ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಅವರು ತಿಳಿಸಿದ್ದಾರೆ.

