ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ಮೇರೆಗೆ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ತಾಲೂಕು ಅಂಗನವಾಡಿ ನೌಕರರ ಸಂಘ, ತಾಲೂಕು ಸಿಐಟಿಯು ಸಮಿತಿ ಹಾಗೂ ಗ್ರಾಮ ಪಂಚಾಯಿತಿ ನೌಕರರ ಸಂಘ, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ನಗರದಲ್ಲಿ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.
ತಾಲೂಕು ಸಿಐಟಿಯು ಸಮಿತಿ ಒಳಗೊಂಡ ಸಂಯುಕ್ತ ಹೋರಾಟ ಕರ್ನಾಟಕವು ಸಹ ಮುಷ್ಕರಕ್ಕೆ ಬೆಂಬಲ ನೀಡಿ, ಮೆರವಣಿಗೆಯಲ್ಲಿ ಪಾಲ್ಗೊಂಡಿತ್ತು.
ನಗರದ ಕಚೇರಿವರಿಗೆ ಮೆರವಣಿಗೆಯಲ್ಲಿ ಸಾಗಿದ ಕಾರ್ಮಿಕರು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಲೇಬರ್ ಕೋಡ್, ವಿಬಿ ಜಿರಾಮ್ ಜಿ ಇನ್ನಿತರ ಕಾರ್ಮಿಕ-ರೈತ ವಿರೋಧಿ ನೀತಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.
ತಾಲೂಕು ತಹಶೀಲ್ದಾರ್ ಕಚೇರಿಯ ಮುಂಭಾಗದಲ್ಲಿ ನಡೆದ ಸಭೆಯಲ್ಲಿ ತಾಲೂಕು ಅಂಗನವಾಡಿ ನೌಕರರ ಸಂಘ,ಸಿಐಟಿಯು ಹಾಗೂ ಸಂಯುಕ್ತ ಹೋರಾಟ ಕರ್ನಾಟಕ, ತಾಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಬಿ.ಪಿ ನಿರ್ಮಲ ದೇವರಾಜ್ ಮಾತನಾಡಿ, ಲೇಬರ್ ಕೋಡ್ಗಳಿಂದ ದುಡಿಯುವವರ ಬದುಕು ಬಂಗಾರವಾಗುತ್ತದೆಂದು ಹೇಳಲಾಗುತ್ತದೆ. ಆದರೆ ಮುಷ್ಕರದ ಹಕ್ಕನ್ನು ಕಸಿದುಕೊಳ್ಳುವ, ಕಾರ್ಮಿಕರ ಸಾಮೂಹಿಕ ಚೌಕಾಸಿ ಹಕ್ಕನ್ನು ಮೊಟಕುಗೊಳಿಸುವ, ನಿಗದಿತ ಅವಧಿಗೆ ಉದ್ಯೋಗದ ಮೂಲಕ ಖಾಯಂ ಸ್ವರೂಪದ ಕೆಲಸಗಳಿಗೆ ತಿಲಾಂಜಲಿ ಹಾಡುವ ಹುನ್ನಾರ ಇದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಿನಕ್ಕೆ 12 ತಾಸು ಕೆಲಸದ ಅವಧಿ ಹೆಚ್ಚಿಸಿರುವುದು ಮತ್ತು ಮಹಿಳಾ ಉದ್ಯೋಗಿಗಳಿಗೆ ರಾತ್ರಿ ಪಾಳೀಯಲ್ಲೂ ದುಡಿಸಿಕೊಳ್ಳಲು ಅವಕಾಶ ನೀಡುವ ಈ ಲೇಬರ್ ಕೋಡ್ ಗಳು ಕಾರ್ಮಿಕರ ಆರೋಗ್ಯ, ಭದ್ರತೆ ಬಗ್ಗೆ ಕಿಂಚಿತ್ತೂ ಕಾಳಜಿ ತೋರದೆ, ತ್ಯಾಗ-ಬಲಿದಾನಗಳ ಮೂಲಕ ಗಳಿಸಿಕೊಂಡ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ನಿರ್ಮಲ ಆಕ್ರೋಶ ವ್ಯಕ್ತಪಡಿಸಿದರು.
ಬಂಡವಾಳಶಾಹಿಗಳ ವ್ಯಾಪಾರ ಸುಗಮಗೊಳಿಸುವ ಉದ್ದೇಶದಿಂದ 29 ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಗರಿಷ್ಠ ಲಾಭಗಳಿಸಲು ಅವಕಾಶ ಕಲ್ಪಿಸಿ ಮತ್ತಷ್ಟು ಕಾರ್ಮಿಕರನ್ನು ಶೋಷಿಸಲು ಲೇಬರ್ ಕೋಡ್ಗಳನ್ನು ಜಾರಿಗೊಳಿಸಲಾಗುತ್ತಿದೆ ಅದಕ್ಜಾಗಿ ರಾಜ್ಯ ಸರ್ಕಾರ ಲೇಬರ್ ಕೋಡ್ ಕರ್ನಾಟಕದಲ್ಲಿ ಜಾರಿಗೆ ತರಬಾರದೆಂದು ಅವರು ಆಗ್ರಹಿಸಿದರು.
ನರೇಗಾ ಯೋಜನೆಯನ್ನು ವಿಬಿ-ಜಿ-ರಾಮ್ ಎಂದು ಬದಲಿಸಿ ಉದ್ಯೋಗ ಖಾತ್ರಿಯ ಹಕ್ಕನ್ನೇ ಕಸಿದುಕೊಂಡು, ಹಳ್ಳಿಯ ಬಡಜನರ ಆಸರೆಯನ್ನು ಕಿತ್ತುಕೊಂಡಿದೆ.
ಕೇಂದ್ರ ಸರ್ಕಾರದ ವಿವಿಧ ಸಾಮಾಜಿಕ ಯೋಜನೆಗಳಡಿ ದುಡಿಯುವ ಕೋಟ್ಯಾಂತರ ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಮಿಕರನ್ನು ಸರ್ಕಾರಿ ನೌಕರರ ಸ್ಥಾನಮಾನ ನೀಡದೇ, ಕನಿಷ್ಠ ವೇತನ ಮತ್ತು ಪಿಎಫ್, ಇಎಸ್ಐ, ನಿವೃತ್ತಿ ಪರಿಹಾರಗಳನ್ನು ಒದಗಿಸದೇ ಬಿಡಿಗಾಸಿನಲ್ಲಿ ದುಡಿಸಿಕೊಂಡು ಶೋಷಿಸಲಾಗುತ್ತಿದೆ. ಅದಕ್ಕಾಗಿ ದುಡಿಯುವ ಜನರ ಹಕ್ಕುಗಳನ್ನು ರಕ್ಷಿಸಲು ನಮ್ಮ ಹೋರಾಟ ಅಗತ್ಯ ಎಂದರು.
ಪ್ರತಿಭಟನೆಯಲ್ಲಿ ಸಿಐಟಿಯುವ ಅಧ್ಯಕ್ಷೆ ನಿಂಗಮ್ಮ, ತಾಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ರಂಗನಾಥ್ ಮತ್ತು ಪದಾಧಿಕಾರಿಗಳು ಪಾಲ್ಗೊಂಡಿದ್ದರು.

