ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಕೋಟ್ಯಾಂತರ ರೂ. ಲಂಚ ಆರೋಪ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ವಿರುದ್ಧ ದೂರು ದಾಖಲಾಗಿದ್ದು, ಇದರ ಬೆನ್ನಲ್ಲೇ ಸಿಸಿಬಿ ಪೊಲೀಸ್ ಅಧಿಕಾರಿಗಳು ಸ್ನೇಹಮಹಿ ಕೃಷ್ಣ ಅವರನ್ನು ಬಂಧಿಸಿದ್ದಾರೆ.
ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್ ಬಡ್ತಿ ಪಡೆಯಲು ಲಂಚ ನೀಡಿದ್ದಾರೆ ಎಂದು ಸ್ನೇಹಮಯಿಕೃಷ್ಣ ಗಂಭೀರ ಆರೋಪ ಮಾಡಿದ್ದರು.
ಈ ಆರೋಪ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ನಟೇಶ್ ದೂರು ನೀಡಿದ್ದು, ಈ ದೂರಿನ ಅನ್ವಯ ಸಿಸಿಬಿಯ ಸೈಬರ್ ಕ್ರೈಮ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಧ್ವನಿ ಸೃಷ್ಟಿಸಿ ಹಾಕಿ ಅಪಪ್ರಚಾರ ಮಾಡಿದ್ದ ಆರೋಪ ಮೇಲೆ ಮೊದಲು ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೊಳಪಡಿಸಿದೆ. ಬಳಿಕ ಅವರನ್ನು ಅರೆಸ್ಟ್ ಮಾಡಿದೆ. ಮತ್ತೊಂದೆಡೆ ನ್ಯಾಯಾಲಯದಲ್ಲಿ ಸರ್ಚ್ ವಾರಂಟ್ ಪಡೆದು, ಸ್ನೇಹಮಯಿ ಕೃಷ್ಣ ಅವರ ಮೈಸೂರು ನಿವಾಸದ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಸಿಸಿಬಿ ಪತ್ರಿಕಾ ಪ್ರಕಟಣೆ-
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಬಗ್ಗೆ ಸಿಸಿಬಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸ್ನೇಹಮಯಿ ಕೃಷ್ಣನನ್ನು ಅರೆಸ್ಟ್ ಮಾಡಲಾಗಿದೆ ಎಂದು ತಿಳಿಸಿದೆ.
ದೂರದಾರರಾದ ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಈ ಹಿಂದೆ ಮುಡಾ ಆಯುಕ್ತರಾದ ಡಿ.ಬಿ ನಟೇಶ್ ನೀಡಿದ ದೂರಿನ ಮೇರೆಗೆ, ಮೈಸೂರು ನಿವಾಸಿ ಸ್ನೇಹಮಯಿ ಕೃಷ್ಣ ಎಂಬವರು ತಮ್ಮ ಫೇಸ್ಬುಕ್ ಖಾತೆಯ ಮೂಲಕ ದೂರದಾರರ ಫೋಟೋ ಹಾಗೂ ನಕಲಿ ದಾಖಲೆಗಳನ್ನು ಹಾಗೂ ಧ್ವನಿ ಕ್ಲಿಪ್ ಅನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಿ ದೂರದಾರರನ್ನು ಗುರಿಯಾಗಿಸಿ ಕಿರುಕುಳ ನೀಡುತ್ತಿರುವ ಕುರಿತು ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಿನಾಂಕ 18.02.2026 ರಂದು ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿದೆ.
ತನಿಖೆ ವೇಳೆ ತನಿಖಾಧಿಕಾರಿಗಳು ದೂರದಾರರಿಂದ ಹಾಗೂ ಸಾಮಾಜಿಕ ಜಾಲತಾಣದಿಂದ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿ ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿದ್ದ ಧ್ವನಿ ಕ್ಲಿಪ್ ಕುರಿತು ತನಿಖೆ ನಡೆಸಿದ್ದಾರೆ.
ಮಾನ್ಯ ನ್ಯಾಯಾಲಯದಿಂದ ಶೋಧನಾ ವಾರಂಟ್ ಪಡೆದು ಆರೋಪಿಯ ಮನೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳ ಶೋಧ ಕಾರ್ಯ ನಡೆಸಲಾಗಿದೆ. ಇದಲ್ಲದೆ, ಈ ಪ್ರಕರಣದ ಆರೋಪಿ ಸ್ನೇಹಮಯಿ ಕೃಷ್ಣ ಮೈಸೂರು ಅವರಿಗೆ ನೋಟಿಸ್ ಜಾರಿ ಮಾಡಿ ಆರೋಪಿಯನ್ನು ಠಾಣೆಗೆ ಹಾಜರುಪಡಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಸಿಸಿಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಏನಿದು ಪ್ರಕರಣ:
ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ಬಡ್ತಿ ಪಡೆಯುವುದಕ್ಕಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ಗೆ ಲಂಚ ನೀಡಿದ್ದಾರೆಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು. ಈ ಸಂಬಂಧ ನಟೇಶ್ ದೂರು ನೀಡಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ತನ್ನದಲ್ಲದ ಧ್ವನಿಯನ್ನು ಮೈಸೂರಿನಲ್ಲಿ ನಕಲಿ ಆಡಿಯೋ ಸೃಷ್ಟಿಸಿ ಜಾಲತಾಣದಲ್ಲಿ ಹಾಕಿ ಅಪಪ್ರಚಾರ ಮಾಡಿದ್ದಾರೆಂದು ಆರೋಪಿಸಿ ಸಿಸಿಬಿಗೆ ದೂರು ನೀಡಿದ್ದರು.
ಈ ಸಂಬಂಧ ಬಿಎನ್ಎಸ್ 335, 336, 340 & 66ಡಿ, 66ಸಿ ಐಟಿ ಆ್ಯಕ್ಟ್ ಅಡಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

