ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಶಾಸಕರೇ ಇದ್ದು ಅವರಲ್ಲೇ ಒಬ್ಬರಿಗೆ ಸಚಿವ ಸ್ಥಾನ ನೀಡಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಮೂಡಿಗೆರೆ ನಗರದಲ್ಲಿ ನಡೆದ ಹಕ್ಕುಪತ್ರ ವಿತರಣೆ ಹಾಗೂ ಕಂದಾಯ ಗ್ರಾಮ ಘೋಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಈ ವಿಷಯವನ್ನು ನಾನು ಸಿಎಂ ಬಳಿ ಹೇಳಿದ್ದೇನೆ ಎಂದು ತಿಳಿಸಿದರು.
ದಿನದ 24 ಗಂಟೆಯೂ ಜನರ ಮಧ್ಯೆ ಇರುವವರನ್ನೇ ಜಿಲ್ಲಾ ಉಸ್ತುವಾರಿ ಮಾಡಲಿ. ನಾನು ಸಚಿವ ಸ್ಥಾನದಲ್ಲಿ ಇರಲಿ ಅಥವಾ ಇಲ್ಲದಿರಲಿ, ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ತಮಗೆ ವೈಯಕ್ತಿಕ ಹಿತಾಸಕ್ತಿ ಇದೆ ಎಂದು ಸಚಿವರು ಹೇಳಿದರು.
ಸಚಿವ ಸಂಪುಟ ಪುನರ್ ರಚನೆ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ, ಮುಂದಿನ ದಿನಗಳಲ್ಲಿ ಸಂಪುಟ ವಿಸ್ತರಣೆಯಾದಾಗ ಚಿಕ್ಕಮಗಳೂರು ಜಿಲ್ಲೆಯ ಶಾಸಕರಿಗೇ ಸಚಿವ ಸ್ಥಾನ ನೀಡಿ, ಅವರನ್ನೇ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು ಎಂದು ಸಚಿವ ಜಾರ್ಜ್ ಒತ್ತಾಯಿಸಿದ್ದಾರೆ.
ಸಚಿವ ಕೆ.ಜೆ. ಜಾರ್ಜ್ ಹೇಳಿಕೆ ಬೆನ್ನಲ್ಲೇ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಹಾಗೂ ತರೀಕೆರೆ ಶಾಸಕ ಜಿ.ಎಚ್. ಶ್ರೀನಿವಾಸ್ ಇಬ್ಬರು ತಲಾ ಎರಡು ಬಾರಿ ಗೆದ್ದಿದ್ದು ಸಚಿವ ಸ್ಥಾನಕ್ಕೆ ಪೈಪೋಟಿ ಗರಿಗೆದರಿದೆ.
ಜಿಲ್ಲೆಯ ಶಾಸಕರಿಗೇ ಸಚಿವ ಸ್ಥಾನ ಕೊಡುವುದಾದರೇ ಯಾರಿಗೆ ಮಂತ್ರಿಗಿರಿ ಒಲಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

