ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಲಮಟ್ಟಿ ಎತ್ತರ ಹೆಚ್ಚಳಕ್ಕೆ ದಿಟ್ಟ ಹೆಜ್ಜೆ – ರೈತರಿಗೆ ಪರಿಹಾರ ವಿತರಣೆ ಆರಂಭ ಮಾಡಲಾಗಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ–3ರ ವ್ಯಾಪ್ತಿಯಲ್ಲಿ ಭೂಸ್ವಾಧೀನಗೊಳ್ಳಲಾದ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆ ಪ್ರಕ್ರಿಯೆಗೆ ಬಾಗಲಕೋಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚಾಲನೆ ನೀಡಿದೆ.
ಈ ಯೋಜನೆಯಡಿ ಆಲಮಟ್ಟಿ ಜಲಾಶಯದ ಎತ್ತರವನ್ನು 519.60 ಮೀಟರ್ ನಿಂದ 524.256 ಮೀಟರ್ ಗೆ ಹೆಚ್ಚಿಸಲಾಗುವುದು. ಇದರಿಂದ ಹೆಚ್ಚುವರಿ ಸುಮಾರು 130 ಟಿಎಂಸಿ ನೀರನ್ನು ನೀರಾವರಿ ಹಾಗೂ ಕುಡಿಯುವ ನೀರಿಗಾಗಿ ಬಳಸಿಕೊಳ್ಳಲಾಗುವುದು ಎಂದು ಪಾಟೀಲ್ ಹೇಳಿದರು.
ಈ ಮಹತ್ವಾಕಾಂಕ್ಷಿ ಯೋಜನೆಗೆ ಭೂಮಿ ನೀಡುವ ರೈತರಿಗೆ ನ್ಯಾಯಯುತ ಪರಿಹಾರ ಕೊಡಬೇಕು ಎಂಬ ನಮ್ಮೆಲ್ಲರ ಮನವಿಗೆ ಮುಖ್ಯಮಂತ್ರಿಗಳು ಸ್ಪಂದಿಸಿ, ನೀರಾವರಿ ಭೂಮಿ ಪ್ರತಿ ಎಕರೆಗೆ 40 ಲಕ್ಷ ಹಾಗೂ ಒಣಭೂಮಿ ಪ್ರತಿ ಎಕರೆಗೆ 30 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದರು.
ತಾವು ನುಡಿದಂತೆ ನಡೆದು ಇಂದು ಸಾಂಕೇತಿಕವಾಗಿ ಪರಿಹಾರ ವಿತರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.ಮುಂದಿನ ದಿನಗಳಲ್ಲಿ ಈ ಯೋಜನೆಗಾಗಿ ಭೂಮಿ ನೀಡಿದ ಎಲ್ಲ ರೈತರಿಗೆ ಪರಿಹಾರವನ್ನು ವಿತರಿಸಲಾಗುವುದು.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಖಾತೆ ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸಹೋದ್ಯೋಗಿಗಳು, ಶಾಸಕ ಮಿತ್ರರು, ಮುಖಂಡರು, ಅಧಿಕಾರಿಗಳು, ರೈತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

