*ಮತ್ತೆ ಬಂದಿದೆ “ಯುಗಾದಿ”*
*ಯುಗಾದಿ ಎಂಬ ಹೊಸ ವರ್ಷ… ಏನಿದರ ಮಹತ್ವ?*
ಚಂದ್ರವಳ್ಳಿ ನ್ಯೂಸ್, ಉಡುಪಿ:
ಪಕ್ಷಿಗಳಲ್ಲಿ ನವಿಲು, ಪ್ರಾಣಿಗಳಲ್ಲಿ ಮಾನವ, ಋತುಗಳಲ್ಲಿ ವಸಂತ ಋತು ಶ್ರೇಷ್ಠವಾದಂತೆ ಎಲ್ಲ ಹಬ್ಬಗಳಲ್ಲಿ ಯುಗಾದಿಯು ಶ್ರೇಷ್ಠ. ಈ ಹಬ್ಬವನ್ನು ಭಾರತ ಪರ್ವದಲ್ಲಿ ಬೇರೆ-ಬೇರೆ ಹೆಸರಿನಿಂದ, ಸಾಮಾನ್ಯವಾಗಿ ಎಲ್ಲರೂ ಆಚರಿಸುವರು. ಹಬ್ಬಗಳಲ್ಲಿ ಶ್ರೇಷ್ಠವಾದ ಪ್ರಸಿದ್ಧವಾದ ಯುಗಾದಿ ಮತ್ತೆ ಬಂದಿದೆ.ಇದು ಹಿಂದೂಗಳ ಪಾಲಿಗೆ ಹೊಸ ವಷ೯ ಕೂಡ ಹೌದು.
*ಯುಗಾದಿಯ ಅರ್ಥ* ಬಗ್ಗೆ ತಿಳಿಯು ದಾದರೆ ‘ಯುಗದ ಆದಿ’. ‘ಯುಗಾದಿ’ ಎಂಬ ಶಬ್ದ ಸಂಸ್ಕೃತದ ‘ಯುಗ’ ಮತ್ತು ‘ಆದಿ’ ಎಂಬ ಎರಡು ಶಬ್ದಗಳಿಂದ ಕೂಡಿದೆ. ಯುಗವೆಂದರೆ ಸೃಷ್ಟಿಯ ಕಾಲಮಾನ. ಅರ್ಥಾತ್ ಹೊಸ ವರ್ಷ; ಆದಿ ಎಂದರೆ ಆರಂಭ. ಯುಗಾದಿ ತತ್ಸಮ ಪದವಾದರೆ ಉಗಾದಿ ತದ್ಭವ, ಯುಗಾದಿ ಹಬ್ಬವು ಪೌರಾಣಿಕ ಹಾಗೂ ಐತಿಹಾಸಿಕ ವಿಶೇಷತೆಗಳ ದಿನವಾಗಿದೆ. ಇದು ಬ್ರಹ್ಮದೇವನ ಸೃಷ್ಟಿಯ ದಿನ. ಚೈತ್ರಶುದ್ಧ ಪಾಡ್ಯದಂದು ಸೂರ್ಯೋದಯವಾಗುತ್ತಿರುವಾಗ ಬ್ರಹ್ಮನು ವಿಶ್ವವನ್ನು ಸೃಷ್ಟಿಸಿದನೆಂದೂ, ಅಂದಿನಿಂದ ಕಾಲಗಣನೆಗಾಗಿ ಗ್ರಹ-ನಕ್ಷತ್ರ-ಮಾಸ-ಋತು-ವರ್ಷ ಇವುಗಳನ್ನು ಏರ್ಪಡಿಸಿದನೆಂದೂ ವ್ರತಖಂಡದಲ್ಲೂ ಪುರಾಣಗಳಲ್ಲೂ ಉಲ್ಲೇಖವಿದೆ.
ಎಲ್ಲ ಶಾಸ್ತ್ರ, ಗ್ರಂಥಗಳಲ್ಲಿ ಯುಗಾದಿಯನ್ನು ಕುರಿತು ಹೇಳಲಾಗಿದೆ. ಶ್ರೀರಾಮನು ರಾವಣನನ್ನು ಸಂಹರಿಸಿ ಬಂದಾಗ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪಟ್ಟಾಭಿಷೇಕವಾದ ದಿನ. ಅಲ್ಲದೆ ಮಹಾಭಾರತದಲ್ಲಿ ಬರುವ ಚೀದಿರಾಜ್ಯದ ಅರಸು ವಸುವಿನ ಉಗ್ರ ತಪಸ್ಸಿಗೆ ಮೆಚ್ಚಿದ ಇಂದ್ರನು ವೈಜಯಂತಿ ಮಾಲೆಯನ್ನು ಅವನಿಗೆ ಕೊಟ್ಟು, ಚಿನ್ನದ ಕಲಶವುಳ್ಳ ಚಕ್ರಾಧಿಪತ್ಯದ ಧ್ವಜವನ್ನು ರಾಜನ ತಲೆಯ ಮೇಲೆ ಇಟ್ಟಿರುವ ದಿನ ಎಂದು ನಂಬಿಕೆಯಿದೆ.
*ಇತಿಹಾಸದಲ್ಲಿ ಯುಗಾದಿ…*
ದಕ್ಷಿಣ ಭಾರತವನ್ನು ಆಳಿದ ಶಾಲಿವಾಹನನು ಚೈತ್ರಶುದ್ಧ ಪಾಡ್ಯಮಿಯಂದು ಶಾಲಿವಾಹನ ರಾಜ ಸಿಂಹಾಸನಾರೂಢನಾದನೆಂದೂ, ಆಗಿನಿಂದ ಶಾಲಿವಾಹನ ಶಕೆ ಆರಂಭವಾಯಿತೆಂದೂ ಹೇಳಲಾಗುತ್ತದೆ. ಹಿಂದುಗಳು ಶಾಲಿವಾಹನ ಶಕೆಯ ಸಂವತ್ಸರಗಳನ್ನಾಧರಿಸಿ ಆಯಾ ಸಂವತ್ಸರವನ್ನು ಚೈತ್ರ ಮಾಸದ ಪ್ರತಿಪದೆಯಿಂದ ಆರಂಭಿಸುವರು. ಯುಗಾದಿಯು ಚಂದ್ರಮಾನದ ಸಂವತ್ಸರದ ಆರಂಭದ ದಿನ.
ಈ ಹಬ್ಬವನ್ನು ಭಾರತದಲ್ಲಿ ಬೇರೆ-ಬೇರೆ ಹೆಸರಿನಿಂದ ಆಚರಿಸುವರು. ಕರ್ನಾಟಕದಲ್ಲಿ ‘ಯುಗಾದಿ’, ಮಹಾರಾಷ್ಟ್ರದಲ್ಲಿ ‘ಗುಢಿಪಾಡವಾ’, ಆಂಧ್ರ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ‘ಹೊಸ ವರ್ಷದ ಹಬ್ಬ’ವೆಂದು, ಉತ್ತರ ಭಾರತದಲ್ಲಿ ‘ಬೈಸಾಖಿ’ ಎಂದು ಇದು ಆಚರಿಸಲ್ಪಡುತ್ತದೆ.
ಹೊಸ ವರ್ಷದ ಪ್ರಾರಂಭದ ಸಂಕೇತವಾದ ಯುಗಾದಿಯನ್ನು ಬಡವ-ಬಲ್ಲಿದರೆಂಬ ತಾರತಮ್ಯವಿಲ್ಲದೇ ಎಲ್ಲಾ ಹಿಂದೂಗಳೂ ಆಚರಿಸುತ್ತಾರೆ. ರೈತರು ಎತ್ತುಗಳನ್ನು ಶೃಂಗರಿಸಿ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಾರೆ. ವ್ಯಾಪಾರಿಗಳು ಹಾಗೂ ಇನ್ನಿತರರು ಕೂಡ ಅಂದಿನ ದಿನವೇ ಶುಭ ಕಾರ್ಯವನ್ನು ಮಾಡುತ್ತಾರೆ.
*ನಿಸರ್ಗದ ಮೈತುಂಬಿ… ಮಧು ಮಗಳಂತೆ ಶೃಂಗರಿಸುವ ದಿನ* :-
‘ಯುಗಾದಿ’ ಬಂದಿತೆಂದರೆ ಎಲ್ಲಡೆಯಲ್ಲಿ ಸಂತೋಷ, ಸಂಭ್ರಮ ತುಂಬಿ ತುಳುಕುತ್ತಿರುತ್ತದೆ. ಚೈತ್ರಮಾಸದಿಂದ ವಸಂತ ಋತು ಶುರುವಾಗುತ್ತದೆ. ವನಗಳೆಲ್ಲ ಚಿಗುರಿ ಹೂ ಬಿಟ್ಟು ಯುಗಾದಿಯ ಹರ್ಷವನ್ನು ಬೀರುವವು. ಎಲ್ಲಿ ನೋಡಿದರೂ ಮರಗಿಡಬಳ್ಳಿಗಳು ಹಸಿರಾಗಿ ನಳನಳಿಸುತ್ತಿರುವುದು.
ಯುಗಾದಿಯ ದಿನ ಮುಂಜಾನೆ ಬೇವು ಮಿಶ್ರಿತ ನೀರಿನಿಂದ ಸ್ನಾನ ಮಾಡಿ, ಹೊಸಬಟ್ಟೆ ಧರಿಸಿ ತಂತಮ್ಮ ದೇವರನ್ನು ಪೂಜಿಸಿ, ಬೇವು ಬೆಲ್ಲವನ್ನು ಸೇವನೆ ಮಾಡುತ್ತಾರೆ. ಈ ಬೇವು-ಬೆಲ್ಲವು ಸುಖ-ದುಃಖ, ರಾತ್ರಿ-ಹಗಲು ಇವುಗಳ ಸಂಕೇತಗಳಾಗಿವೆ. ಮಾನವರ ಬದುಕಿನಲ್ಲಿ ಸುಖ-ದುಃಖಗಳು ಅವಿಭಾಜ್ಯ ಅಂಶಗಳು. ಇವೆಲ್ಲವುಗಳೊಂದಿಗೆ ಸಮತೋಲನ ಕಾಯ್ದುಕೊಂಡೇ ಮನುಷ್ಯ ಬದುಕಬೇಕು. ಜೀವನ ಕಷ್ಟ-ಸುಖ. ನೋವು ನಲಿವುಗಳ ಸಮ್ಮಿಶ್ರಣವಾಗಿದೆ. ಇವೆರಡೂ ಒಟ್ಟಿಗೆ ಇರುವವು. ಎರಡನ್ನೂ ಸಮದೃಷ್ಟಿಯಿಂದ ಸವಿಯುವುದನ್ನು ಕಲಿಯಲೆಂದೇ ಯುಗಾದಿಯಂದು ಬೇವು-ಬೆಲ್ಲವನ್ನು ತಿನ್ನಿಸುವರು.ಈ ತತ್ವ ವನ್ನು ನಾವೆಲ್ಲರೂ ಜೀವನದಲ್ಲಿ ಪಾಲನೆ ಮಾಡಬೇಕಾಗಿದೆ.
ನೋವು ನಲಿವು ಎರಡಕ್ಕೂ ನಾವು ಸ್ವಾಗತ ನೀಡಬೇಕು.
ನಾವು ಬೇವಿನ ಸಮಾನವಾದ ದು:ಖ, ಅಶಾಂತಿಯ, ಪ್ರಪಂಚದಲ್ಲಿದ್ದರೂ ಬೆಲ್ಲದ ಸಮಾನವಾದ ಶಾಂತಿ, ಅತೀಂದ್ರಿಯ ಸುಖ, ಆತ್ಮೀಯತೆ, ಸ್ನೇಹ, ಮಧುರತೆಯ ಅನುಭವ ಮಾಡುವುದು ಎಂಬ ನಿಜ ಅರ್ಥವಾಗಿದೆ.
*ಆರೋಗ್ಯದ ಮಹತ್ವ* :-
ಬೇವಿನ ಎಲೆಯೂ ಮಾನವನ ಆರೋಗ್ಯಕ್ಕೆ ಸಹಕಾರಿಯಾಗುವುದು. ‘ಶತಾಯುರ್ವಜ್ರ ದೇಹಾಯ ಸರ್ವಸಂಪತ್ಕರಾಯಚ ಸರ್ವಾರಿಷ್ಟವಿನಾಶಾಯ ನಿಂಬಕಂ ದಳ ಭಕ್ಷಣಂ’ ಎಂದು ಆಯುರ್ವೇದವು ಬೇವಿನ ಮಹಿಮೆಯನ್ನು ಸಾರಿದೆ.
ಯುಗಾದಿಯಂದು ಇಷ್ಟದೇವತೆಯ ಪೂಜೆ ಮಾಡುತ್ತಾರೆ. ಈ ದಿನ ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಕೆಲವು ಊರುಗಳಲ್ಲಿ ಪಂಚಾಂಗ ಶ್ರವಣವನ್ನು ಏರ್ಪಡಿಸುವರು. ಎಲ್ಲಾ ರಾಶಿಗಳ ಫಲಾಫಲಗಳನ್ನು ವಿವರಿಸುವರು. ಪ್ರತಿವರ್ಷದಲ್ಲೂ ಬರುವ ಕಷ್ಟ-ನಷ್ಟ, ಮಳೆ-ಬೆಳೆ ವಿಚಾರವನ್ನು ಜನರು ವರ್ಷದ ಪ್ರಾರಂಭದಲ್ಲೇ ತಿಳಿದುಕೊಳ್ಳಬಹುದು.
ವಿವಿಧ ರಾಜ್ಯಗಳಲ್ಲಿ ಯುಗಾದಿ ಪರ್ವ ಆಚರಣೆ :
ಗುಜರಾತ್, ಮತ್ತು ಮಹಾರಾಷ್ಟ್ರದಲ್ಲಿ ಯುಗಾದಿಯ ದಿನ ಪ್ರತಿಯೊಂದು ಮನೆಯ ಮುಂದೆಯೂ ಗುಡಿಯನ್ನು ನಿಲ್ಲಿಸುವ ಪದ್ಧತಿ ಇರುವುದರಿಂದ ಯುಗಾದಿಯನ್ನು ‘ಗುಡಿಪಾಡ್ಯ’ ಎಂದು ಕರೆಯುವರು. ಗುಡಿ ಎಂದರೆ ದ್ವಜ. ಒಂದು ಕೋಲಿನ ತುದಿಗೆ ರೇಷ್ಮೆ ಬಟ್ಟ ಏರಿಸಿ, ಅದರ ಮೇಲೆ ಬೆಳ್ಳಿ ಅಥವಾ ಹಿತ್ತಾಳೆಯ ಸಣ್ಣ ಬಿಂದಿಗೆಯನ್ನು ಕಟ್ಟಿ ಬೇವು ಮತ್ತು ಮಾವಿನ ಎಲೆಗಳಿಂದ ಅಲಂಕರಿಸುವರು. ಮಹಾಭಾರತದಲ್ಲಿ ಇದರ ಪ್ರಸ್ತಾಪವಿದೆ.
ಯುಗಾದಿಯು `ಭಕ್ತರಿಗಾಗಿ, ವಿಶಾಲ ಹೃದಯದ ಶಿವ ಶರಣೆಯರಿಗಾಗಿ, ಮುಕ್ತಿ ಬಯಸುವ ಆರಾಧಕರಿಗಾಗಿ, ಶಿವನು ಭಕ್ತರ ಕರೆಗೆ ಓಗೊಟ್ಟು, ಅವರ ಭಕ್ತಿಯ ಫಲವನ್ನು ನೀಡಲು ಧರೆಗೆ ಬಂದಿದ್ದಾನೆ’ ಎಂಬ ಪರಮ ಸಂದೇಶವನ್ನು ನೀಡುವ ಮಹಾನ್ ಪರ್ವವಾಗಿದೆ.
“ಯುಗ ಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ.
ಹೊಸ ವರುಷಕೆ ಹೊಸ ಹರುಷದ
ಹೊಸತು ಹೊಸತು ತರುತಿದೆ’
ಎಂದು ಹೇಳುತ್ತಾ ನಾವು ಎಲ್ಲರೂ ಯುಗಾದಿಯ ನಿಜ ಅರ್ಥ ತಿಳಿದು ಆಚರಿಸೋಣ.
ಈ ಯುಗಾದಿಯು ಪ್ರಪಂಚದಲ್ಲಿ ಉಂಟಾದ ಯುದ್ಧದ ಕಾರ್ಮೋಡ ದೂರ ಮಾಡಲಿ ಪ್ರಪಂಚದಲ್ಲಿ ಶಾಂತಿ , ಆರೋಗ್ಯ ಸುವ್ಯವಸ್ಥೆ ಸ್ಥಾಪನೆಯಾಗಲಿ ಎಂಬ ಶುಭ ಹಾರೈಕೆಯೊಂದಿಗೆ
ಯುಗಾದಿಯ ತತ್ವಗಳನ್ನು ಅದರ ಆಚರಣೆಯ ಹಿಂದಿರುವ ಸತ್ಯವನ್ನು ನಮ್ಮ ಜೀವನದಲ್ಲಿ ಪಾಲಿಸೋಣ.
ಲೇಖನ: ರಾಘವೇಂದ್ರ ಪ್ರಭು,ಕರ್ವಾಲು
*

