ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಕ್ಷಯ ರೋಗವು ಮಾರಣಾಂತಿಕವಲ್ಲ, ನಿಗದಿತ ಅವಧಿಯವರೆಗೆ ಸರಿಯಾದ ಚಿಕಿತ್ಸೆ ಪಡೆದರೆ ಇದನ್ನು ಸಂಪೂರ್ಣವಾಗಿ ಗುಣಪಡಿಸಬಹುದು ಎಂದು ಮೀರಾಸಾಬಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಎಚ್.ಸಿ.ಗುರುಪ್ರಸಾದ್ ತಿಳಿಸಿದರು.
ಚಳ್ಳಕೆರೆ ತಾಲ್ಲೂಕಿನ ಮೀರಸಾಬಿಹಳ್ಳಿಯಲ್ಲಿ ಮಂಗಳವಾರ ವಿಶ್ವ ಕ್ಷಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡದ್ದ ಅರಿವು ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆಯನ್ನು ಸಂಪೂರ್ಣ ಉಚಿತವಾಗಿ ನೀಡಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡದಂತೆ ಆರು ತಿಂಗಳ ಕಾಲ ಚಿಕಿತ್ಸೆ ನೀಡಲಾಗುವುದು. ಅಲ್ಲದೆ, ಚಿಕಿತ್ಸೆ ಪಡೆಯುವ ರೋಗಿಗಳ ಪೌಷ್ಟಿಕ ಆಹಾರಕ್ಕಾಗಿ ಸರ್ಕಾರವು ಪ್ರತಿ ತಿಂಗಳು 1000 ರೂ.ಗಳನ್ನು ನೇರ ನಗದು ವರ್ಗಾವಣೆ ಮೂಲಕ ರೋಗಿಗಳ ಖಾತೆಗೆ ಜಮೆ ಮಾಡುತ್ತಿದೆ ಎಂದರು.
ಎರಡು ವಾರಗಳಿಗಿಂತ ಹೆಚ್ಚು ಕಾಲ ನಿರಂತರ ಕೆಮ್ಮು, ಸಂಜೆ ವೇಳೆ ಜ್ವರ ಬರುವುದು ಮತ್ತು ತೂಕ ಇಳಿಕೆ, ದೈಹಿಕ ದೌರ್ಬಲ್ಯ ಮತ್ತು ಹಸಿವು ಕಡಿಮೆಯಾಗುವುದು, ಇಂತಹ ಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಉಚಿತ ಸಹಾಯವಾಣಿ 104 ಅಥವಾ ನಿಕ್ಷಯ್ ಸಹಾಯವಾಣಿ 1800 11 6666 ಅನ್ನು ಸಂಪರ್ಕಿಸಬಹುದು. ಕ್ಷಯರೋಗ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಸಿ.ಎನ್.ನವೀನ್ ಕುಮಾರ್, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಅರುಣ ಕುಮಾರಿ, ಸಮುದಾಯ ಆರೋಗ್ಯ ಅಧಿಕಾರಿ ಸ್ನೇಹ, ನರ್ಸಿಂಗ್ ಅಧಿಕಾರಿ ಚಾಂದ್ ಬಿ, ಬ್ಯಾಂಕ್ ಮ್ಯಾನೇಜರ್ ದಿಲೀಪ್ ಕುಮಾರ್, ಆಶಾ ಕಾರ್ಯಕರ್ತೆಯರಾದ ಸರೋಜಮ್ಮ, ರಾಧಮ್ಮ, ಆರೋಗ್ಯ ಸಿಬ್ಬಂದಿ ಪೂರ್ಣ ಸಾಗರ್ ಸೇರಿದಂತೆ ಗ್ರಾಮದ ಪ್ರಮುಖರು ಹಾಗೂ ಗ್ರಾಮಸ್ಥರು ಇದ್ದರು.

