ಚಂದ್ರವಳ್ಳಿ ನ್ಯೂಸ್, ಗುವಾಹಟಿ:
“ಭಾರತದ ಇತಿಹಾಸ ಮತ್ತು ಪ್ರಗತಿಯ ಕೇಂದ್ರಬಿಂದುವಾಗಿ ಕಾಂಗ್ರೆಸ್ ಯಾವಾಗಲೂ ನಿಂತಿದೆ. ಹತ್ತು ವರ್ಷಗಳ ಬಿಜೆಪಿಯ ಆಡಳಿತದ ನಂತರ ಅಸ್ಸಾಂನ ಜನತೆ ಈಗ ಬದಲಾವಣೆಯನ್ನು ಬಯಸುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ,” ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಸ್ಸಾಂನಲ್ಲಿ ತಿಳಿಸಿದ್ದಾರೆ.
ಅಸ್ಸಾಂನ ಗುವಾಹಟಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಅಸ್ಸಾಂ ಉಸ್ತುವಾರಿ) ಜಿತೇಂದ್ರ ಸಿಂಗ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಪ್ರಸ್ತುತ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರದ ವೈಫಲ್ಯ: ಅಸ್ಸಾಂನಲ್ಲಿ ಭ್ರಷ್ಟಾಚಾರ, ಈಡೇರದ ಭರವಸೆಗಳು ಮತ್ತು ನಿರುದ್ಯೋಗ ಸಮಸ್ಯೆಯಿಂದಾಗಿ ಜನರು ತೀವ್ರ ಅಸಮಾಧಾನಗೊಂಡಿದ್ದಾರೆ. ಜನರ ಪ್ರಶ್ನೆಗಳಿಗೆ ಉತ್ತರಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಡಿ.ಕೆ.ಶಿ ವೀರೋಧ ವ್ಯಕ್ತಪಡಿಸಿದರು.
ಅಸ್ಸಾಂಗೆ ಬೇಕಿದೆ ಪಾರದರ್ಶಕತೆ: ರಾಜ್ಯಕ್ಕೆ ಪಾರದರ್ಶಕ ಆಡಳಿತ, ನೈಜ ಅಭಿವೃದ್ಧಿ ಮತ್ತು ಮುಂದಿನ ಪೀಳಿಗೆಯ ಭವಿಷ್ಯವನ್ನು ಭದ್ರಪಡಿಸುವ ಅವಕಾಶಗಳ ಅಗತ್ಯವಿದೆ. ಆದರೆ ಪ್ರಸ್ತುತ ಸರ್ಕಾರ ಈ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಟೀಕಿಸಿದರು.
ಕಾಂಗ್ರೆಸ್ ಮೇಲೆ ವಿಶ್ವಾಸ: ಮುಂಬರುವ ಚುನಾವಣೆಯಲ್ಲಿ ಅಸ್ಸಾಂನ ಜನತೆ ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇಡಲಿದ್ದಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಮತ್ತು ರಾಜ್ಯದ ಉತ್ತಮ ಭವಿಷ್ಯಕ್ಕಾಗಿ ಜನರೊಂದಿಗೆ ಕೈಜೋಡಿಸಲು ಕಾಂಗ್ರೆಸ್ ಸಿದ್ಧವಾಗಿದೆ ಎಂದು ಅವರು ಹೇಳಿದರು.
”ಅಸ್ಸಾಂನ ಜನರು ಬದಲಾವಣೆಗಾಗಿ ಕಾಯುತ್ತಿದ್ದಾರೆ. ನಾವು ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಭರವಸೆಗಳನ್ನು ಈಡೇರಿಸುವ ಮೂಲಕ ರಾಜ್ಯವನ್ನು ಪ್ರಗತಿಯತ್ತ ಕೊಂಡೊಯ್ಯುತ್ತೇವೆ.”
ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿಗಳು.

