ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೆಡಿಎಸ್ ಪಕ್ಷದ ವತಿಯಿಂದ ಏಪ್ರಿಲ್ 11ರಂದು ಬೆಂಗಳೂರಿನ ಕೊಮ್ಮಘಟ್ಟ ನೈಸ್ ಗ್ರೌಂಡ್ನಲ್ಲಿ ಹಮ್ಮಿಕೊಳ್ಳಲಾಗಿರುವ ‘ಜನತಾ ಸಮಾವೇಶ’ ಹಾಗೂ ಪಕ್ಷದ ಬೆಳ್ಳಿ ಹಬ್ಬದ ಸಂಭ್ರಮದ ಪ್ರಯುಕ್ತ ಸಿದ್ಧತೆಗಳು ಚುರುಕುಗೊಂಡಿವೆ. ಈ ಸಂಬಂಧ ಜೆಡಿಎಸ್ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಜೆ.ಪಿ. ನಗರದ ಕಚೇರಿಯಲ್ಲಿ ಶನಿವಾರ ಪೂರ್ವಭಾವಿ ಸಭೆ ನಡೆಸಿದರು.
ಸಭೆಯಲ್ಲಿ ಸಮಾವೇಶದ ಯಶಸ್ವಿಗಾಗಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ಪೂರ್ವತಯಾರಿ ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸುವ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಸಮಾವೇಶಕ್ಕೆ ಆಗಮಿಸುವ ಜನರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಲು ಮತ್ತು ಕಾರ್ಯಕ್ರಮ ವ್ಯವಸ್ಥಿತವಾಗಿ ರೂಪಿಸಲು ನಿಖಿಲ್ ಕುಮಾರಸ್ವಾಮಿ ಅವರು ಮುಖಂಡರಿಗೆ ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.
ಪ್ರಮುಖ ಮುಖಂಡರ ಉಪಸ್ಥಿತಿ:
ಈ ಸಂದರ್ಭದಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣಾರೆಡ್ಡಿ, ಹಿರಿಯ ಮುಖಂಡ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ಕೆ.ಎಂ. ತಿಪ್ಪೇಸ್ವಾಮಿ, ವಿಧಾನಪರಿಷತ್ ಸದಸ್ಯ ಟಿ.ಎನ್. ಜವರಾಯಿಗೌಡ ಹಾಗೂ ಟಿ.ಎ. ಶರವಣ್ ಉಪಸ್ಥಿತರಿದ್ದರು.

ಅಲ್ಲದೆ, ಗ್ರೇಟರ್ ಬೆಂಗಳೂರು ಅಧ್ಯಕ್ಷ ರಮೇಶ್ ಗೌಡ, ಬೆಂಗಳೂರು ದಕ್ಷಿಣ ಅಧ್ಯಕ್ಷ ಹೆಚ್.ಸಿ. ಕೃಷ್ಣ, ಬೆಂಗಳೂರು ಉತ್ತರ ಅಧ್ಯಕ್ಷ ಇ. ಕೃಷ್ಣಪ್ಪ, ಬೆಂಗಳೂರು ಪೂರ್ವ ಅಧ್ಯಕ್ಷ ನಾಗರಾಜ್ ಗಂಗಾಧರ, ಬೆಂಗಳೂರು ಪಶ್ಚಿಮ ಅಧ್ಯಕ್ಷ ಟಿ. ತಿಮ್ಮೇಗೌಡ ಹಾಗೂ ಬೆಂಗಳೂರು ಕೇಂದ್ರ ಅಧ್ಯಕ್ಷ ಆರ್. ಪ್ರಕಾಶ್ ಸೇರಿದಂತೆ ಪಕ್ಷದ ಪ್ರಮುಖ ಪದಾಧಿಕಾರಿಗಳು ಭಾಗವಹಿಸಿದ್ದರು.

