ಚಂದ್ರವಳ್ಳಿ ನ್ಯೂಸ್, ಮೈಸೂರು:
“ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ ಮತ್ತು ಮಾನವೀಯತೆ ಅತ್ಯಂತ ಮುಖ್ಯ. ಸಮಾಜದ ದೀನದಲಿತರು, ಅಶಕ್ತರು ಮತ್ತು ಮಹಿಳೆಯರ ರಕ್ಷಣೆ ಮಾಡುವುದು ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯ ಆದ್ಯ ಕರ್ತವ್ಯವಾಗಿದೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಮೈಸೂರಿನ ಪೊಲೀಸ್ ತರಬೇತಿ ಶಾಲೆಯಲ್ಲಿ ನಡೆದ 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಮಹಿಳೆಯರ ಸುರಕ್ಷತೆ ಮತ್ತು ಸ್ವಾತಂತ್ರ್ಯ:
ಮಧ್ಯರಾತ್ರಿಯಲ್ಲಿ ಮಹಿಳೆಯರು ನಿರ್ಭೀತಿಯಿಂದ ಓಡಾಡುವಂತಾದಾಗ ಮಾತ್ರ ನಿಜವಾದ ಸ್ವಾತಂತ್ರ್ಯ ಸಿಕ್ಕಂತೆ ಎಂಬ ಮಹಾತ್ಮ ಗಾಂಧೀಜಿಯವರ ಮಾತನ್ನು ಸ್ಮರಿಸಿದ ಸಿಎಂ, ಮಹಿಳೆಯರ ರಕ್ಷಣೆಗೆ ಪೊಲೀಸರು ಹೆಚ್ಚಿನ ಒತ್ತು ನೀಡಬೇಕು ಎಂದು ಸೂಚಿಸಿದರು.
ಖಾಲಿ ಹುದ್ದೆಗಳ ಭರ್ತಿ: ಕಳೆದ ಮೂರು ವರ್ಷಗಳಲ್ಲಿ 4,911 ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಬಜೆಟ್ನಲ್ಲಿ ಘೋಷಿಸಿದಂತೆ ಶೀಘ್ರದಲ್ಲೇ ಉಳಿದ 8,000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಮಾದಕ ವಸ್ತು ಮುಕ್ತ ಸಮಾಜ:
ಯುವ ಜನಾಂಗವನ್ನು ಹಾಳು ಮಾಡುತ್ತಿರುವ ಮಾದಕ ವಸ್ತುಗಳ ತಯಾರಿಕೆ ಮತ್ತು ಮಾರಾಟ ಜಾಲವನ್ನು ಮಟ್ಟಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸರ ಪ್ರಾಮಾಣಿಕ ಪ್ರಯತ್ನ ಅಗತ್ಯ ಎಂದರು.
ತಂತ್ರಜ್ಞಾನದ ಬಳಕೆ:
ಸೈಬರ್ ಅಪರಾಧಗಳನ್ನು ತಡೆಯಲು ಪೊಲೀಸರಿಗೆ ಸೂಕ್ತ ತರಬೇತಿ ನೀಡಲಾಗಿದೆ. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಅಪರಾಧಗಳನ್ನು ನಿಗ್ರಹಿಸಬೇಕು ಎಂದು ಕರೆ ನೀಡಿದರು.
ಅಮಿಷಗಳಿಗೆ ಒಳಗಾಗಬೇಡಿ:
“ಶ್ರೀಮಂತರು ಹಣಬಲದಿಂದ ಕಾನೂನನ್ನು ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸಬಹುದು. ಆದರೆ ಪೊಲೀಸರು ಯಾವುದೇ ಆಮಿಷಗಳಿಗೆ ಒಳಗಾಗದೆ, ಧೈರ್ಯದಿಂದ ನ್ಯಾಯವನ್ನು ಎತ್ತಿಹಿಡಿಯಬೇಕು,” ಎಂದು ಎಚ್ಚರಿಸಿದರು.
ಮುಖ್ಯಮಂತ್ರಿಗಳ ಕಿವಿಮಾತು:
“ಅಪರಾಧಿಗಳ ವಿಷಯದಲ್ಲಿ ಕರುಣೆ ಬೇಡ, ಆದರೆ ನಿರಪರಾಧಿಗಳ ವಿಷಯದಲ್ಲಿ ಮಾನವೀಯತೆ ಇರಲಿ. ಪೊಲೀಸರು ಸರ್ಕಾರದ ಪ್ರತಿನಿಧಿಗಳಾಗಿ ಕೆಲಸ ಮಾಡುವುದಕ್ಕಿಂತ ಹೆಚ್ಚಾಗಿ, ಕಾನೂನು ಸುವ್ಯವಸ್ಥೆ ಕಾಪಾಡುವ ರಕ್ಷಕರಾಗಿ ಕೆಲಸ ಮಾಡಬೇಕು.”

