ಅಕಾಲಿಕ ಮಳೆ ಆರ್ಭಟ: ಸಂತ್ರಸ್ತರ ನೆರವಿಗೆ ಧಾವಿಸಲು ಸರ್ಕಾರಕ್ಕೆ ಆರ್. ಅಶೋಕ್ ಆಗ್ರಹ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿರುವ ಅಕಾಲಿಕ ಮಳೆಯಿಂದ ರೈತರು ಮತ್ತು ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು
, ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯಿಸಿದ್ದಾರೆ.

​ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಮತ್ತು ಬಿರುಗಾಳಿಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಕುರಿತು ಕಳವಳ ವ್ಯಕ್ತಪಡಿಸಿರುವ ಅವರು, ಸರ್ಕಾರದ ವಿಳಂಬ ಧೋರಣೆಯನ್ನು ಖಂಡಿಸಿ ಈ ಕೆಳಗಿನ ತುರ್ತು ಕ್ರಮಗಳಿಗೆ ಆಗ್ರಹಿಸಿದ್ದಾರೆ:

- Advertisement - 

​​ತ್ವರಿತ ಜಂಟಿ ಸಮೀಕ್ಷೆ: ಮಳೆ ಪೀಡಿತ ಪ್ರದೇಶಗಳಲ್ಲಿ ಅಡಿಕೆ, ರಬ್ಬರ್ ಹಾಗೂ ತೆಂಗಿನ ಮರಗಳು ನೆಲಸಮವಾಗಿವೆ. ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ, ಬೆಳೆ ಹಾನಿ ಮತ್ತು ಆಸ್ತಿ ಪಾಸ್ತಿ ನಷ್ಟದ ಬಗ್ಗೆ ನಿಖರ ಸಮೀಕ್ಷೆ ನಡೆಸಬೇಕು.

​ವೈಜ್ಞಾನಿಕ ಪರಿಹಾರ ಘೋಷಣೆ: ವಾಣಿಜ್ಯ ಬೆಳೆಗಳನ್ನು ಕಳೆದುಕೊಂಡು ಕಂಗೆಟ್ಟಿರುವ ರೈತರಿಗೆ ಕೇವಲ ಅಲ್ಪ ಮೊತ್ತದ ಪರಿಹಾರ ನೀಡದೆ, ವೈಜ್ಞಾನಿಕವಾಗಿ ಹೆಚ್ಚಿನ ಪರಿಹಾರವನ್ನು ಸರ್ಕಾರ ತಕ್ಷಣವೇ ಘೋಷಿಸಬೇಕು.

- Advertisement - 

​ವಸತಿ ರಹಿತರಿಗೆ ನೆರವು: ಮಳೆಯಿಂದ ಮನೆ ಕಳೆದುಕೊಂಡ ಕುಟುಂಬಗಳು ಬೀದಿಗೆ ಬಂದಿವೆ. ಅಂತಹ ಕುಟುಂಬಗಳಿಗೆ ತಕ್ಷಣದ ತಾತ್ಕಾಲಿಕ ನೆರವು ಹಾಗೂ ಮನೆಗಳ ಪುನರ್ನಿರ್ಮಾಣಕ್ಕೆ ಅಗತ್ಯ ಧನಸಹಾಯ ನೀಡಬೇಕು.

​ವಿದ್ಯುತ್ ವ್ಯವಸ್ಥೆ ಸರಿಪಡಿಸಿ: ಮರಗಳು ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ. ಇದರಿಂದ ಹಲವು ಹಳ್ಳಿಗಳು ಕತ್ತಲಲ್ಲಿವೆ. ಯುದ್ಧೋಪಾದಿಯಲ್ಲಿ ದುರಸ್ತಿ ಕಾರ್ಯ ನಡೆಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು.

​”ರೈತರು ಮತ್ತು ಜನಸಾಮಾನ್ಯರು ಸಂಕಷ್ಟದಲ್ಲಿರುವಾಗ ಸರ್ಕಾರ ಕಾಲಹರಣ ಮಾಡಬಾರದು. ವಿಳಂಬ ಧೋರಣೆ ಬಿಟ್ಟು ಸಂತ್ರಸ್ತರ ಬೆನ್ನಿಗೆ ನಿಲ್ಲುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು,” ಎಂದು ಆರ್. ಅಶೋಕ್ ಸರ್ಕಾರವನ್ನು ಎಚ್ಚರಿಸಿದ್ದಾರೆ.

 

 

 

Share This Article
error: Content is protected !!
";