ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳ ಉಪಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರವನ್ನು ಕೇಳಿರುವ ಕೇಂದ್ರ ಚುನಾವಣಾ ಆಯೋಗದ ಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆಯೋಗದ ಈ ನಡೆ ಅದರ ಪಕ್ಷಪಾತಿತನವನ್ನು ಎತ್ತಿ ತೋರಿಸುತ್ತಿದೆ ಎಂದು ಅವರು ಟೀಕಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಚುನಾವಣಾ ಆಯೋಗದ ದ್ವಂದ್ವ ನೀತಿಯನ್ನು ಕಟುವಾಗಿ ಟೀಕಿಸಿದ್ದಾರೆ. “ಮಹಾರಾಷ್ಟ್ರ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ಅಲ್ಲಿನ ಬಿಜೆಪಿ ಸರ್ಕಾರಗಳು ನಗದು ವರ್ಗಾವಣೆ ಯೋಜನೆಗಳನ್ನು ಜಾರಿಗೆ ತಂದಾಗ ಕಣ್ಮುಚ್ಚಿ ಕುಳಿತಿದ್ದ ಆಯೋಗಕ್ಕೆ, ಕರ್ನಾಟಕದಲ್ಲಿ ಕಳೆದ ಎರಡೂ ಮುಕ್ಕಾಲು ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿರುವ ಯೋಜನೆಗಳ ಬಗ್ಗೆ ಈಗ ಮಾಹಿತಿ ಬೇಕೆ?” ಎಂದು ಪ್ರಶ್ನಿಸಿದ್ದಾರೆ.
ಬೆದರಿಕೆಗಳಿಗೆ ಬಗ್ಗುವವರಲ್ಲ:
ಕೇವಲ ರಾಜಕೀಯ ಪ್ರೇರಿತವಾಗಿ ಈ ಮಾಹಿತಿ ಕೇಳಲಾಗುತ್ತಿದೆ ಎಂದು ಆರೋಪಿಸಿದ ಮುಖ್ಯಮಂತ್ರಿಗಳು, “ಗ್ಯಾರಂಟಿ ಯೋಜನೆಗಳ ಲೆಕ್ಕ ಕೇಳುವ ಮೂಲಕ ನಮ್ಮನ್ನು ಬೆದರಿಸಲು ಆಯೋಗ ಹೊರಟಿದೆ. ಇಂತಹ ಗೊಡ್ಡು ಬೆದರಿಕೆಗಳಿಗೆ ಬಗ್ಗುವವರು ನಾವಲ್ಲ. ರಾಜ್ಯದ ಜನತೆಯ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ಈ ಯೋಜನೆಗಳು ನಿರಂತರವಾಗಿ ಮುಂದುವರಿಯಲಿವೆ” ಎಂದು ಸ್ಪಷ್ಟಪಡಿಸಿದ್ದಾರೆ.
ಚುನಾವಣಾ ಆಯೋಗವು ಸಾಂವಿಧಾನಿಕ ಸಂಸ್ಥೆಯಾಗಿ ನಿಷ್ಪಕ್ಷಪಾತವಾಗಿ ಕೆಲಸ ಮಾಡಬೇಕಿತ್ತು. ಆದರೆ ಕರ್ನಾಟಕದ ವಿಚಾರದಲ್ಲಿ ಮಾತ್ರ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

