ಚಂದ್ರವಳ್ಳಿ ನ್ಯೂಸ್, ಬೀದರ್:
ಪತ್ರಕರ್ತರ ಮಹಾ ಸಂಗಮವಾಗಲಿರುವ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಪತ್ರಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.
ಬಹುತೇಕ ಪತ್ರಕರ್ತರು ಎರಡು ದಿನ ನಡೆಯಲಿರುವ ವಿವಿಧ ಗೋಷ್ಠಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅನೇಕರು ಒಂದು ದಿನ ಬಂದು ಹೋಗಲಿದ್ದಾರೆ. ಒಟ್ಟಾರೆ ಐದು ಸಾವಿರಕ್ಕೂ ಹೆಚ್ಚು ಪತ್ರಕರ್ತರು ಸಮ್ಮೇಳನದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ ಎಂದು ಹೇಳಿದರು.
ಸಮ್ಮೇಳನಕ್ಕೆ ಆಗಮಿಸುವ ಪತ್ರಕರ್ತರಿಗೆ ವಸತಿ, ಸಾರಿಗೆ, ಆಹಾರ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಸಮ್ಮೇಳನ ಅಂಗವಾಗಿ ನಾಲ್ಕು ಗೋಷ್ಠಿಗಳು ನಡೆಯಲಿವೆ ಎಂದು ತಿಳಿಸಿದರು.
11 ರಂದು ಬೆಳಿಗ್ಗೆ 11ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಇದಕ್ಕೂ ಮುನ್ನ ಬೆಳಿಗ್ಗೆ 9ಕ್ಕೆ ಬಸವೇಶ್ವರ ವೃತ್ತದಿಂದ ಸಮ್ಮೇಳನ ಸ್ಥಳ ಝೀರಾ ಕನ್ವೆನ್ಶನ್ ಹಾಲ್ವರೆಗೆ ಭವ್ಯ ಮೆರವಣಿಗೆ ಜರುಗಲಿದೆ. 40ನೇ ಸಮ್ಮೇಳನದ ಸವಿನೆನಪಿಗಾಗಿ ಮೆರವಣಿಗೆಯಲ್ಲಿ 40 ಬೃಹತ್ ಕೊಡೆಗಳು ಇರಲಿವೆ. ವಿವಿಧ ಕಲಾ ತಂಡಗಳು ಮೆರವಣಿಗೆಯ ವೈಭವ ಹೆಚ್ಚಿಸಲಿವೆ ಎಂದು ಹೇಳಿದರು.

