ಚಂದ್ರವಳ್ಳಿ ನ್ಯೂಸ್, ಬೆಳಗಾವಿ/ಬೆಂಗಳೂರು:
ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರು, ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯುವ ಕುರಿತ ಸಲಹೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯೆ ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಪ್ರಸ್ತುತ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಮೆಜೆಸ್ಟಿಕ್, ಯಶವಂತಪುರ ಮೆಟ್ರೋ ನಿಲ್ದಾಣ, ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಶಿಶು ಆಹಾರ ಕೇಂದ್ರಗಳು ಇವೆ ಎಂದು ಉತ್ತರಿಸಿದರು.
ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಹಾಗೂ ಅಂಗವಿಕಲರಿಗೆ ಶೌಚಾಲಯಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದರು.

