ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು.
ರಾಜ್ಯದಲ್ಲಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಂತೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಭೆ ನಡೆಸಿ, ಈ ಸಮಸ್ಯೆ ಇತ್ಯರ್ಥ ಪಡಿಸಲು ಇರುವ ಪರಿಹಾರಗಳು ಮತ್ತು ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಿದರುವು. ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಲೇವಾದೇವಿದಾರರ ಕಿರುಕುಳದಿಂದ ಸಾಲಗಾರರ ಹಿತ ಕಾಪಾಡಲು ಶೀಘ್ರದಲ್ಲೇ ಕಾನೂನು ರೂಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮೈಕ್ರೋ ಫೈನಾನ್ಸ್ಗಳಿಂದ ಸಾಲ ಪಡೆಯುವವರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು. ಆದಷ್ಟು ಬೇಗನೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದರು. ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ, ಸ್ವಯಂಪ್ರೇರಿತ ದೂರು ದಾಖಲು ಸೇರಿದಂತೆ ಮತ್ತಿತರ ನಿಯಮಗಳನ್ನು ಕಾನೂನಿನಲ್ಲಿ ಸೇರಿಸಲಾಗುತ್ತದೆ. ಈಗಿರುವ ಕಾನೂನು ಇನ್ನಷ್ಟು ಬಲಪಡಿಸಲು ಕ್ರಮವಹಿಸಲಾಗುತ್ತದೆ. ಇದರಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲಾಗುತ್ತದೆ. ನೋಂದಣಿಯಾಗದ ಲೇವಾದೇವಿಗಾರರ ಮೇಲೆ ನಿಯಂತ್ರಣಕ್ಕೆ ಹೊಸ ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಆಯಾಯ ಜಿಲ್ಲೆಗಳ ಜಿಲ್ಲಾಧಿಕಾರಿ, ಪೊಲೀಸ್ವರಿಷ್ಠಾಧಿಕಾರಿಗಳಿಂದ ಸಭೆ ನಡೆಸಿ ಅಗತ್ಯ ಕ್ರಮ ಕೈಗಳ್ಳಲು ಅವರು ಸೂಚಿಸಿದು.
ಸಭೆಯಲ್ಲಿ ಭಾಗಿಯಾಗಿದ್ದ ಆರ್ಬಿಐ, ನಬಾರ್ಡ್ ಅಧಿಕಾರಿಗಳಿಂದಮೈಕ್ರೋ ಫೈನಾನ್ಸ್ ಕುರಿತು ಮಾಹಿತಿ ಕೇಳಿ ಪಡೆಯಲಾಗಿದೆ. ಫೈನಾನ್ಸ್ ಸಂಘದವರಿಂದ ಹಾಗೂ ಆರ್ಬಿಐ ಪ್ರತಿನಿಧಿಗಳಿಂದ ಅಭಿಪ್ರಾಯ ಕೇಳಿದ್ದೇನೆ.ಅವರ ಅಭಿಪ್ರಾಯ ಕೇಳಿದ ಮೇಲೆ ಯಾರೂ ಕೂಡ ಸಾಲ ಕೊಡಬೇಡಿ, ವಸೂಲು ಮಾಡಬೇಡಿ ಅಂತ ಹೇಳಲ್ಲ. ಆದರೆ, ಸಾಲ ವಸೂಲು ಮಾಡುವಾಗ ಕಿರುಕುಳ ನೀಡಬಾರದು, ವಸೂಲಿ ಮಾಡುವಾಗ ಆರ್ಬಿಐ ನಿಯಮ ಪಾಲಿಸಲು ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದರು.
ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿಗಳು ಸಭೆ ನಡೆಸಿ ಈ ಕುರಿತ ಜನರಿಗೆ ಸೂಕ್ತ ತಿಳಿವಳಿಕೆ ಹಾಗೂ ಮೈಕ್ರೋ ಫೈನಾನ್ಸ್ನವರಿಗೆ ಎಚ್ಚರಿಕೆ ನೀಡಬೇಕು ಎಂದರು.
ಮೀಟರ್ ಬಡ್ಡಿ-
ಕಾನೂನು ಮೀರಿ ಬಡ್ಡಿ ಮೊತ್ತ ಕೇಳಬಾರದು. ಸಂಜೆ 5 ಗಂಟೆ ಬಳಿಕ ಸಾಲ ವಸೂಲಿ ಮಾಡಬಾರದು. ಹೊರಗುತ್ತಿಗೆ ಮೂಲಕ ವಸೂಲಿ ಮಾಡಬಾರದು ಎಂದು ಸೂಚನೆ ನೀಡಿದ್ದೇನೆ. ಆ ಮೂಲಕ ರೌಡಿಗಳ ಬಳಕೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಮನಿ ಲ್ಯಾಂಡ್ರಿಗ್ ಕಾನೂನಿಗೆ ಕೂಡಲೇ ತಿದ್ದುಪಡಿ ಮಾಡುತ್ತೇವೆ. ಅದರ ಜೊತೆಗೆ ಕೂಡಲೇ ಹೊಸ ಕಾನೂನು ರೂಪಿಸುತ್ತೇವೆ. ಸಾಲಗಾರರ ಹಿತರಕ್ಷಣೆಗಾಗಿ ಈ ಕಾನೂನು ತರುತ್ತಿದ್ದೇವೆ. ಬೇರೆ ರಾಜ್ಯಗಳಲ್ಲಿನಕಾನೂನುಗಳನ್ನು ಪರಿಶೀಲಿಸಲಿದ್ದೇವೆ. ಆಂಧ್ರದಲ್ಲಿನ ಕಾನೂನು ನೋಡಿ, ಕೂಡಲೇ ಕಠಿಣ ಕಾನೂನು ರಚಿಸಿ ಆ ಸಂಬಂಧ ಸುಗ್ರೀವಾಜ್ಞೆ ಹೊರಡಿಸುತ್ತೇವೆ ಎಂದರು.
ಸಹಾಯವಾಣಿ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಒಂದು ಸಹಾಯವಾಣಿ ತೆರೆಯಲಾಗುವುದು. ಸಂತ್ರಸ್ತರು ಅಲ್ಲಿಗೆ ದೂರು ಕೊಡಬಹುದಾಗಿದೆ. ದೂರಿನ ಮೇಲೆ ಅಥವಾ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿ ಕ್ರಮ ತೆಗೆದುಕೊಳ್ಳುವ ಕೆಲಸ ಮಾಡಲಾಗುತ್ತದೆ. ಗೂಂಡಾಗಳನ್ನು ಬಳಸಿ, ಹೆದರಿಸಿ ಬೆದರಿಸಿ ಸಾಲ ವಸೂಲಿ ಮಾಡುವ ಪ್ರಕರಣ ಸಂಬಂಧ ಕಾನೂನು ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.
ಕೇಂದ್ರಕ್ಕೆ ಪತ್ರ:
ಖಾಸಗಿ ಫೈನಾನ್ಸ್ ಅವರ ಕಿರುಕುಳ ತಪ್ಪಿಸಲು ಕಾನೂನು ಮಾಡುವಂತೆ ಕೇಂದ್ರ ಸರ್ಕಾರಕ್ಕೂ ಒತ್ತಾಯ ಮಾಡುತ್ತೇವೆ. ಏಕೆಂದರೆ ಆರ್ಬಿಐ ಅಡಿ ಮೈಕ್ರೋ ಫೈನಾನ್ಸ್ಗಳು ಬರುತ್ತವೆ. Banning of unregulated lending Activities ಕುರಿತು ಕೇಂದ್ರ ಸರ್ಕಾರ ಕರಡು ಸಿದ್ಧಪಡಿಸಿದೆ. ಈ ಕುರಿತು ಸಮಗ್ರ ಸಮಾಲೋಚನೆ ನಡೆಸಿ, ಸಾಲದ ಸುಳಿಯಲ್ಲಿ ಸಿಲುಕಿರುವವರ ಹಿತ ಕಾಪಾಡಲು ಕ್ರಮ ಕೈಗೊಳ್ಳಬೇಕು. ಕಿರುಕುಳ ತಪ್ಪಿಸಲು ಸೂಕ್ತ ಕಾನೂನು ರಚಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಸಿಎಂ ತಿಳಿಸಿದರು.
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಕೇವಲ 20,000 ರೂ. ಮಾತ್ರ ಸಾಲ ಕೊಡಲು ಅವಕಾಶ ಇದೆ. ಆದರೆ, ಮೈಕ್ರೋ ಫೈನಾನ್ಸ್ಗಳು 17.07% ಬಡ್ಡಿ ವಿಧಿಸಲು ಆರ್ಬಿಐ ನಿಯಮಇದೆ. ಅದನ್ನು ಮೀರಿ ಬಡ್ಡಿ ಹಾಕಲಾಗುತ್ತಿದೆ. ಇದನ್ನು ನಿಯಂತ್ರಿಸಲು ಹೊಸ ಕಾನೂನು ತರಲಾಗುವುದು. ಆರ್ಬಿಐ ಮೈಕ್ರೋ ಫೈನಾನ್ಸ್ ಅನ್ನು ನಿಯಂತ್ರಣ ಮಾಡದೇ ಇದ್ದರೆ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಲಿದೆ ಎಂದು ಅವರು ಹೇಳಿದರು.
59,367.76 ಕೋಟಿ ರೂ.ಗೂ ಹೆಚ್ಚು ಸಾಲ ವಸೂಲಿ ಬಾಕಿ ಇದೆ ಎಂದು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಮಾಹಿತಿ ನೀಡಿದ್ದಾರೆ. 1,09,88,332 ಸಾಲ ನೀಡಿದ ಖಾತೆಗಳಿವೆ. ರಾಜ್ಯದಲ್ಲಿ ಸುಮಾರು 3,090 ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಾಗೂ ಬ್ರಾಂಚ್ಗಳು ಇವೆ. ನೋಂದಣಿಯಾಗಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು 31 ಇವೆ. ಆದರೆ ಅನಧಿಕೃತ ಮೈಕ್ರೋ ಫೈನಾನ್ಸ್ ಸಂಸ್ಥೆಗಳೇ ಹೆಚ್ಚಿವೆ. ಈಗಾಗಲೇ 7 ಪ್ರಕರಣಗಳು ದಾಖಲಾಗಿವೆ. ಕೂಡಲೇ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ. ಕಿರುಕುಳದಿಂದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಆರ್ಬಿಐ ಪರವಾನಗಿ ಪಡೆದಿರುವ ಕಂಪನಿಗಳು ನಿಯಮಬಾಹಿರ ವಸೂಲಿಗೆ ಇಳಿದಿಲ್ಲ. ಆ ರೀತಿ ಮಾಡುತ್ತಿರುವುದು ಪರವಾನಗಿ ಇಲ್ಲದ ಕಂಪನಿಗಳು ಎಂದು ಮೈಕ್ರೋ ಫೈನಾನ್ಸ್ನವರು ಸಮಜಾಯಿಷಿ ನೀಡಿದರು.
ಇದಕ್ಕೆ ಸಚಿವ ಕೃಷ್ಣಬೈರೇಗೌಡರು, ಹೆಚ್.ಕೆ.ಪಾಟೀಲ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಕರಾರು ವ್ಯಕ್ತಪಡಿಸಿ, ಪರವಾನಗಿ ಇದ್ದವರೇ ಈ ರೀತಿ ಮಾಡುತ್ತಿದ್ದಾರೆ ಎನ್ನುವ ವರದಿ ನಮ್ಮ ಗ್ರೌಂಡ್ ರಿಪೋರ್ಟ್ನಲ್ಲಿ ಬಂದಿದೆ. ಆದ್ದರಿಂದ ಬಡ ಜನರ ಹಿತಕಾಯಲು ನಿಯಮ ಉಲ್ಲಂಘಿಸುವ ಕಂಪನಿ ಎಂಡಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಚಿವರು ಸಭೆಯಲ್ಲಿಎಚ್ಚರಿಸಿದರು.
ಮಹಿಳೆಯರ, ವೃದ್ಧರ ಮೇಲೆ ದಬ್ಬಾಳಿಕೆ ನಡೆಸಿರುವ ಪತ್ರಿಕಾ ವರದಿಗಳೂ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ಜನರ ರಕ್ಷಣೆಗೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲೇ ಕಠಿಣ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಎಸಿಎಸ್ ಅತೀಕ್ ಅಹಮದ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಗೃಹ ಇಲಾಖೆ, ಒಳಾಡಳಿತ, ಕಂದಾಯ ಮತ್ತು ಗುಪ್ತಚರ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

