ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
76ನೇ ಗಣರಾಜ್ಯೋತ್ಸವವನ್ನು ನಾವೆಲ್ಲರೂ ಒಂದಾಗಿ ಸಂಭ್ರಮಿಸುವ ಜೊತೆಯಲ್ಲಿ, ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ಘೋಷಿಸಿಕೊಂಡ 75 ವರ್ಷಗಳ ನಂತರವೂ ದೇಶದಲ್ಲಿ ಅಸಮಾನತೆ, ಅಸ್ಪೃಶ್ಯತೆ, ತಾರತಮ್ಯ, ಬಡತನ ಯಾಕೆ ಜೀವಂತವಾಗಿದೆ ಎನ್ನುವ ಬಗ್ಗೆಯೂ ಆತ್ಮಾವಲೋಕನ ಮಾಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
76ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜರೋಹಣ ಮಾಡಿ ಮಾತನಾಡಿ, ತಾರತಮ್ಯ ಹಾಗೂ ಅಸಮಾನತೆ ಹೆಚ್ಚಾದಂತೆಲ್ಲ ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ದುರ್ಬಲಗೊಂಡು,ಅಧಿಕಾರ ಹಾಗೂ ಅವಕಾಶಗಳು ಉಳ್ಳವರ ಪಾಲಾಗುತ್ತದೆ ಎನ್ನುವ ವಾಸ್ತವವನ್ನು ಅರ್ಥಮಾಡಿಕೊಳ್ಳೋಣ ಎಂದು ಅವರು ಕರೆ ನೀಡಿದರು.
ಗಣರಾಜ್ಯೋತ್ಸವ ಎಂದರೆ ಸಂಭ್ರಮದಲ್ಲಿ ಮೈಮರೆಯುವ ದಿನವಲ್ಲ, ಸಂವಿಧಾನದ ಆಶಯಗಳು ಎಷ್ಟರ ಮಟ್ಟಿಗೆ ಈಡೇರಿವೆ ಎನ್ನುವುದನ್ನು ಮೌಲ್ಯಮಾಪನ ಮಾಡಬೇಕಾದ, ಜನರು ತಮ್ಮ ಹಕ್ಕು ಮತ್ತು ಕರ್ತವ್ಯಗಳ ಕಡೆಗೆ ಜಾಗೃತರಾಗಬೇಕಾದ ದಿನ ಎಂದು ಸಿದ್ದರಾಮಯ್ಯ ಎಚ್ಚರಿಸಿದರು. ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಾತಂತ್ರ್ಯ, ಸಮಾನತೆ ಹಾಗೂ ಘನತೆಯ ಬದುಕನ್ನು ಸಂಭ್ರಮಿಸುವಂತಹ ಕಲ್ಯಾಣ ರಾಜ್ಯವನ್ನು ಕಟ್ಟಲು ನಾವೆಲ್ಲ ಕೂಡಿ ಪ್ರಯತ್ನಿಸೋಣ ಎಂದು ಹೇಳಿದರು.
ಸಂವಿಧಾನ ಜಾರಿಗೊಳಿಸಿ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಘೋಷಣೆ ಮಾಡಿಕೊಂಡ 75 ವರ್ಷಗಳ ನಂತರವೂ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಹೋರಾಟ ನಡೆಸಬೇಕಾದ ವಿಷಾದನೀಯ ಸ್ಥಿತಿಯಲ್ಲಿ ಗಣರಾಜ್ಯೋತ್ಸವವನ್ನು ನಾವು ಆಚರಿಸುತ್ತಿದ್ದೇವೆ.
ಇದು ಗತವೈಭವದಲ್ಲಿ ಮೈಮರೆಯದೆ ವರ್ತಮಾನದ ವಾಸ್ತವಗಳಿಗೆ ಮುಖಾಮುಖಿಯಾಗುವ ಕಾಲ. ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳೆಂಬ ಸಂವಿಧಾನದ ಮೂರು ಮುಖ್ಯ ಆಧಾರ ಸ್ಥಂಭಗಳು ಭದ್ರವಾಗಿದ್ದು ಆರೋಗ್ಯಕರವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಸಂವಿಧಾನದ ಪಾಲನೆಯಾಗುತ್ತಿದೆ ಮತ್ತು ಪ್ರಜಾಪ್ರಭುತ್ವ ಸುರಕ್ಷಿತವಾಗಿದೆ ಎಂದು ಅರ್ಥ ಎಂದರು.
ಕಟುವಾದ ಸತ್ಯ ಏನೆಂದರೆ ಸರ್ವಾಧಿಕಾರದ ದಂಡದಡಿ ನಮ್ಮ ಕಾರ್ಯಾಂಗ ಕರ್ತವ್ಯ ಭ್ರಷ್ಟಗೊಳ್ಳುತ್ತಿದೆ, ಶಾಸಕಾಂಗವನ್ನು ಖರೀದಿಸಲಾಗುತ್ತಿದೆ ಮತ್ತು ನ್ಯಾಯಾಂಗಕ್ಕೆ ಬೆದರಿಕೆ ಒಡ್ಡಿ ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ಷಡ್ಯಂತ್ರ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಆತಂಕ ವ್ಯಕ್ತಪಡಿಸಿದರು.
ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳೆಂಬ ಆಧಾರ ಸ್ತಂಭಗಳು ದುರ್ಬಲಗೊಂಡು ಶಕ್ತಿಹೀನವಾದಾಗ ಸಂವಿಧಾನವೇ ಅಪ್ರಸ್ತುತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲಾಗುವ ಸಾಧ್ಯತೆಗಳಿವೆ ಎಂದು ಸಿದ್ದರಾಮಯ್ಯ ಎಚ್ಚರಿಸಿದರು.
ಇಂತಹದ್ದೊಂದು ಅಪಾಯದ ಸ್ಥಿತಿಯಲ್ಲಿ ಭಾರತ ಇಂದು ನಿಂತಿದೆ. ಪ್ರಜಾಪ್ರಭುತ್ವವನ್ನು ಉಳಿಸುವ ದೊಡ್ಡ ಜವಾಬ್ದಾರಿ ಪ್ರತಿಯೊಬ್ಬ ಪ್ರಜೆಯ ಹೆಗಲ ಮೇಲಿದೆ.
ಜಾತಿ, ಮತ, ಪಂಥ, ಪ್ರದೇಶದ ಭೇದಗಳನ್ನು ಮರೆತು ಇಡೀ ದೇಶ ಒಂದಾಗಿ ಹೊರಗಿನ ಶತ್ರುಗಳನ್ನು ಹೊಡೆದೋಡಿಸಲು ಹೇಗೆ ಸ್ವಾತಂತ್ರ್ಯಹೋರಾಟ ನಡೆಸಲಾಯಿತೋ, ಅಂತಹದ್ದೇ ಒಂದು ಹೋರಾಟವನ್ನು ದೇಶದೊಳಗಿನ ಸಂವಿಧಾನ ವಿರೋಧಿ ಶತ್ರುಗಳ ವಿರುದ್ಧ ನಡೆಸಬೇಕಾಗಿದೆ ಎಂದು ಸಿಎಂ ಅಭಿಪ್ರಾಯ ವ್ಯಕ್ತಪಡಿಸಿದರು.
ಇದಕ್ಕಾಗಿ ಎರಡನೇ ಸ್ವಾತಂತ್ರ್ಯ ಹೋರಾಟ ನಡೆಯದೆ ಹೋದರೆ ಮುಂದಿನ ಪೀಳಿಗೆಗೆ ಬದುಕುಳಿಯಲು ಪ್ರಜಾಪ್ರಭುತ್ವ ಇರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.
ಇದೊಂದು ಜೀವನ್ಮರಣದ ಪ್ರಶ್ನೆಯಾಗಿದ್ದು, ಗಣರಾಜ್ಯೋತ್ಸವದ ದಿನವಾದ ಇಂದು ನಾವೆಲ್ಲರೂ ಒಗ್ಗೂಡಿ ದೃಢಚಿತ್ತದಿಂದ ಸಂವಿಧಾನವನ್ನು ಉಳಿಸುವ ಸಂಕಲ್ಪ ಮಾಡಬೇಕಾಗಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಮೂಲಕ ನಮ್ಮ ಭಾರತವನ್ನು ರಕ್ಷಿಸುವ ಹೋರಾಟಕ್ಕೆ ನಮಗಿರುವ ಅಸ್ತ್ರಗಳೆಂದರೆ ಗಾಂಧೀಜಿ ಮತ್ತು ಅಂಬೇಡ್ಕರ್ ಅವರ ಚಿಂತನೆಗಳು ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದ ನಮ್ಮ ಕಾಂಗ್ರೆಸ್ ಪಕ್ಷ ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ ಎಂಬ ಅಭಿಯಾನವನ್ನು ಪ್ರಾರಂಭಿಸಿದೆ.
ನಾಡ ಬಾಂಧವರೆಲ್ಲರೂ ಪಕ್ಷ, ಪಂಥ, ಜಾತಿ-ಧರ್ಮಗಳ ಎಲ್ಲೆಯನ್ನು ಮೀರಿ ಈ ಅಭಿಯಾನದಲ್ಲಿ ಕೈ ಜೋಡಿಸಬೇಕೆಂದು ಸಿಎಂ ಸಾರ್ವಜನಿಕರಲ್ಲಿ ಮನವಿ ಮಾಡಿದರು.

