ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಹಯೋಗದಲ್ಲಿ ಇದೇ ಆಗಸ್ಟ್ 22 ರಿಂದ 24 ರವರೆಗೆ ಮೂರು ದಿನಗಳ ಕಾಲ ನಗರದ ಪತ್ರಿಕಾಭವನ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ “ಯುವ ಪತ್ರಕರ್ತರಿಗೆ ಕನ್ನಡ ಸಾಹಿತ್ಯಾಭಿರುಚಿ” ಶಿಬಿರ ಆಯೋಜಿಸಲಾಗಿದೆ.
ಈ ಶಿಬಿರದ ನಿರ್ದೇಶಕರಾಗಿ ಪ್ರೊ. ಎಂ. ಅಬ್ದುಲ್ ರೆಹಮಾನ್ ಪಾಷ, ಸಹ-ನಿರ್ದೇಶಕರಾಗಿ ನಾಕಿಕೆರೆ ತಿಪ್ಪೆಸ್ವಾಮಿ ಹಾಗೂ ಮಮತಾ ಅರಸೀಕೆರೆ ಅವರು ಸಂಯೋಜಕರಾಗಿ ಎಂ.ಎನ್. ಅಹೋಬಳಪತಿ ಹಾಗೂ ವಿರೇಶ್ ವಿ ಚಳ್ಳಕೆರೆ ಇವರು ಶಿಬಿರ ನಡೆಸಿಕೊಡಲಿದ್ದಾರೆ.
ಈ ಶಿಬಿರದ ಉದ್ಘಾಟನೆಯನ್ನು ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ ಮಟ್ಟು ಅವರು ನೆರವೇರಿಸಲಿದ್ದಾರೆ. ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಅವರು ವಹಿಸಿಕೊಳ್ಳಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಿ.ದಿನೇಶ್ ಗೌಡಗೆರೆ, ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲ ಡಾ.ಜೆ.ಕರಿಯಪ್ಪ ಮಾಳಿಗೆ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಎಂ.ಎನ್.ಅಹೋಬಳಪತಿ ಉಪಸ್ಥಿತರಿರುವರು.
ಈ ಮೂರು ದಿನಗಳ ಕಾಲ ಕನ್ನಡ ಸಾಹಿತ್ಯ, ಭಾಷಾ ಹಾಗೂ ಪತ್ರಿಕೋದ್ಯಮ ಈ ವಿಷಯಗಳ ಕುರಿತು ನಾಡಿನ ಗಣ್ಯ ವಿದ್ವಾಂಸರಿಂದ ಉಪನ್ಯಾಸಗಳು ನಡೆಯಲಿವೆ.
ಸಮಾರೋಪ ನುಡಿಗಳನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ಎ ಪ್ರಭಾಕರ್ ಆಡಲಿದ್ದಾರೆ. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಿ.ದಿನೇಶ್ ಗೌಡಗೆರೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.
ಶಿಬಿರದಲ್ಲಿ ನಾಡಿನಾದ್ಯಂತ ಸುಮಾರು 50 ಜನ ಪತ್ರಕರ್ತರು ಶಿಬಿರಾರ್ಥಿಗಳಾಗಿ ಭಾಗವಹಿಸಲಿದ್ದಾರೆ. ಈ ಶಿಬಿರದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರದರ್ಶನ ಮತ್ತು ಶೇ.50ರ ರಿಯಾಯಿತಿ ದರದಲ್ಲಿ ಮಾರಾಟದ ವ್ಯವಸ್ಥೆ ಇರುತ್ತದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಎನ್.ಕರಿಯಪ್ಪ ತಿಳಿಸಿದ್ದಾರೆ.

