ಇಂದು ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಘಟಿಕೋತ್ಸವ

News Desk

ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 2023-24 ನೇ ಸಾಲಿನ 13ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವು ಗುರುವಾರ ಬೆಳಗ್ಗೆ 11 ಗಂಟೆಗೆ ವಿವಿಯ ಬಯಲು ರಂಗಮಂದಿರದ ಆವರಣದಲ್ಲಿ ನಡೆಯಲಿದೆ. ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ. ಎಂ. ಮುನಿರಾಜು ತಿಳಿಸಿದರು.

ನಗರದ ಹೊರವಲಯದ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ಪರೀಕ್ಷಾ ಭವನದಲ್ಲಿ ಏರ್ಪಡಿಸಿದ್ದ ಮಾಧ್ಯಮಗೋಷ್ಟಿಯಲ್ಲಿ ಅವರು ಮಾತನಾಡಿದರು. ಘಟಿಕೋತ್ಸವದಲ್ಲಿ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿ ಥಾವರಚಂದ್ ಗೆಹ್ಲೋಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ನವದೆಹಲಿಯ ಇಂಟರ್ ಯುನಿವರ್ಸಿಟಿ ಎಕ್ಸಲರೇಟರ್​ನ ನಿರ್ದೇಶಕ ಪ್ರೊ. ಅವಿನಾಶ್ ಚಂದ್ರ ಪಾಂಡೆ ಅವರು ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ.

- Advertisement - 

ಉನ್ನತ ಶಿಕ್ಷಣ ಸಚಿವರು ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮ-ಕುಲಾಧಿಪತಿ ಡಾ. ಎಂ.ಸಿ. ಸುಧಾಕರ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ವಾರ್ಷಿಕ ಘಟಿಕೋತ್ಸವದ ನೇತೃತ್ವವನ್ನು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಮುನಿರಾಜು ಅವರು ವಹಿಸಲಿದ್ದಾರೆ. ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರು
, ವಿದ್ಯಾವಿಷಯಕ ಪರಿಷತ್ ಸದಸ್ಯರುಗಳು, ಕುಲಸಚಿವ ನಾಗರಾಜು.ಸಿ ಹಾಗೂ ಕುಲಸಚಿವ (ಮೌಲ್ಯಮಾಪನ) ಪ್ರೊ. ಎನ್.ಎಂ.ಸಾಲಿ ಅವರುಗಳು ಕುಲಪತಿಗಳಿಗೆ ಸಾಥ್ ನೀಡಲಿದ್ದಾರೆ ಎಂದು ಅವರು ತಿಳಿಸಿದರು.

ಘಟಿಕೋತ್ಸದ ವಿಶೇಷತೆಗಳು:
ಈ ಬಾರಿಯ ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಇರ್ಫಾನ್ ರಜಾಕ್
, ಡಾ. ವಸುಂಧರಾ ಭೂಪತಿ, ಬಾವಿಹಳ್ಳಿ ನಾಗನಗೌಡ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತಿದೆ ಎಂದು ಕುಲಪತಿ ಪ್ರೊ. ಎಂ. ಮುನಿರಾಜು ಅವರು ಹೇಳಿದರು.

- Advertisement - 

ಘಟಿಕೋತ್ಸವದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವಿವಿಧ ವಿಭಾಗಗಳ 42 ವಿದ್ಯಾರ್ಥಿಗಳು 51 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಳ್ಳಲಿದ್ದಾರೆ. ವಿವಿಧ ವಿಭಾಗಗಳ ಒಟ್ಟು 59 ಸಂಶೋಧನಾರ್ಥಿಗಳು ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಎಲ್ಲ ವಿಭಾಗಗಳ ಸ್ನಾತಕ ಪದವಿಯ 80 ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿಯಿಂದ 75 ವಿದ್ಯಾರ್ಥಿಗಳು ಸೇರಿ ಒಟ್ಟು 155 ವಿದ್ಯಾರ್ಥಿಗಳು ರ‍್ಯಾಂಕ್ ಪ್ರಮಾಣ ಪತ್ರಗಳನ್ನು ಪಡೆಯಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಫಲಿತಾಂಶ: ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಯಲ್ಲಿ ಒಟ್ಟು 19,179 ಸ್ನಾತಕ ಪದವಿ ವಿದ್ಯಾರ್ಥಿಗಳು ಅಂತಿಮ ಪರೀಕ್ಷೆ ಬರೆದು ತಮ್ಮ ಪದವಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಒಟ್ಟು 1,845 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾಗಿದ್ದಾರೆ ಎಂದು ಅವರು ತಿಳಿಸಿದರು.

ಸಾಧಕರ ಪರಿಚಯ-
ಇರ್ಫಾನ್ ರಜಾಕ್: ಇರ್ಫಾನ್ ರಜಾಕ್ ಅವರು ಮೂಲತಃ ಬೆಂಗಳೂರಿನವರು. ಪ್ರತಿಷ್ಠಿತ ಪ್ರೆಸ್ಟೀಜ್ ಗ್ರೂಪ್‌ನ ಗೌರವಾಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ತಮ್ಮ ಉದ್ಯಮಶೀಲತೆ ಹಾಗೂ ಸಮಾಜಮುಖಿ ಸೇವೆಗಾಗಿ ಖ್ಯಾತಿ ಪಡೆದಿದ್ದಾರೆ. ನಾಲ್ಕು ದಶಕಗಳ ವಾಣಿಜ್ಯ
, ವ್ಯಾಪಾರ ಹಾಗೂ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಯಶಸ್ವಿಯಾಗಿ ಹೂಡಿಕೆ ನಡೆಸಿ ನಾಡಿನ ಖ್ಯಾತ ಉದ್ಯಮಿಗಳಾಗಿ ಮುನ್ನಡೆದಿದ್ದಾರೆ.

ಡಾ.ವಸಂಧರಾ ಭೂಪತಿ:
ಡಾ. ವಸಂಧರಾ ಭೂಪತಿ ಅವರು ರಾಯಚೂರಿನಲ್ಲಿ ಜನಿಸಿದವರು. ತಮ್ಮ ವಿಶಿಷ್ಟ ವೈದ್ಯಕೀಯ ಸೇವೆ
, ಸಾಹಿತ್ಯ, ಸಮಾಜಸೇವೆ ಮತ್ತು ಪತ್ರಿಕಾ ಅಂಕಣಕಾರರಾಗಿ ಗುರುತಿಸಿಕೊಂಡಿದ್ದಾರೆ. ಆರೋಗ್ಯ ಶಿಬಿರ, ವೈದ್ಯಕೀಯ ಸಾಹಿತ್ಯವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅಪಾರ ಸಾಧನೆಗೈದಿದ್ದಾರೆ. ಆರೋಗ್ಯ ಸಂಗತಿ, ಮನೆಯಂಗಳದಲ್ಲಿ ಔಷಧಿವನ ಮುಂತಾದ ಕೃತಿಗಳನ್ನು ರಚಿಸಿದ್ದಾರೆ. 65ಕ್ಕೂ ಹೆಚ್ಚು ಆರೋಗ್ಯ ಕೃತಿಗಳು ಇಂಗ್ಲಿಷ್ ಮತ್ತು ಹಿಂದಿ ಭಾಷೆಗೆ ಅನುವಾದಗೊಂಡಿವೆ.

ಬಾವಿಹಳ್ಳಿ ನಾಗನಗೌಡ:
ಗಣಿನಾಡಿನ ಪ್ರಸಿದ್ಧ ಉದ್ಯಮಿಯಾಗಿರುವ ಇವರು
, ಬಿಕೆಜಿ ಫೌಂಡೇಶನ್ ಮೂಲಕ ಶಿಕ್ಷಣ ಅಭಿವೃದ್ಧಿ, ಸಾಮಾಜಿಕ ಸೇವೆ ಮತ್ತು ಸಾಹಿತ್ಯ-ಸಾಂಸ್ಕೃತಿಕ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆರೋಗ್ಯ ಶಿಬಿರಗಳ ಮೂಲಕ ಕ್ಷಯರೋಗಿಗಳ ಚಿಕಿತ್ಸೆಗೆ ಶ್ರಮಿಸಿದ್ದಾರೆ. ಸಮಾಜಮುಖಿ ಕೆಲಸಗಳ ಮೂಲಕ ಸಮುದಾಯಕ್ಕೆ, ದೇವಸ್ಥಾನಗಳ ಜೀರ್ಣೋದ್ದಾರಕ್ಕೆ, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕೊಡುಗೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕುಲಸಚಿವ ನಾಗರಾಜು. ಸಿ ಹಾಗೂ ಕುಲಸಚಿವ (ಮೌಲ್ಯಮಾಪನ) ಪ್ರೊ. ಎನ್.ಎಂ. ಸಾಲಿ ಉಪಸ್ಥಿತರಿದ್ದರು.

 

Share This Article
error: Content is protected !!
";