![](https://www.chandravallinews.com/wp-content/uploads/2024/06/WhatsApp-Image-2024-06-30-at-6.57.03-AM-1024x456.jpeg)
i
ದಲಿತರ ಸಮಸ್ಯೆ ನಿವಾರಿಸುವಲ್ಲಿ ಕಾಂಗ್ರೆಸ್ ಪಕ್ಷ ಮುಂದು : ಜಿ.ಎಸ್.ಮಂಜುನಾಥ..
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ :
ಕರ್ನಾಟಕದಲ್ಲಿ ಕಳೆದ ಹಲವಾರು ದಶಕಗಳಿಂದ ಆದಿಜಾಂಬವ ಅಭಿವೃದ್ದಿ ನಿಗಮ ಹಲವಾರು ಸಮಸ್ಯೆಗಳಿಂದ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಿಲ್ಲ. ರಾಜ್ಯದ ಆದಿಜಾಂಬವ ಜನಾಂಗದ ಅಭಿವೃದ್ದಿಗಾಗಿ ನಿಗಮ ಸ್ಥಾಪನೆಯಾಗಿದ್ದು, ನಿಗಮದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಿ.ಎಸ್.ಮಂಜುನಾಥ ನಿಗಮದ ಸರ್ವತೋಮುಖ ಅಭಿವೃದ್ದಿಗೆ ಶಕ್ತಿಮೀರಿ ಶ್ರಮಿಸಲಿ ಎಂದು ಶುಭಹಾರೈಸುವುದಾಗಿ ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು. ಅವರು, ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಹಾಗೂ ಸಮಾಜದ ಹಲವಾರು ಮುಖಂಡರೊಡನೆ ಬೆಂಗಳೂರಿನ ಆದಿಜಾಂಬವ ಅಭಿವೃದ್ದಿ ಕಚೇರಿಯಲ್ಲಿ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಜಿ.ಎಸ್.ಮಂಜುನಾಥರವರನ್ನು ಅಭಿನಂದಿಸಿ ಮಾತನಾಡಿದರು. ಚಿತ್ರದುರ್ಗ ಜಿಲ್ಲೆಯಲ್ಲಿ ಆದಿಜಾಂಬವ ಸಮುದಾಯ ಹೆಚ್ಚಿದ್ದು ಜಿಲ್ಲೆಯೂ ಸೇರಿದಂತೆ ರಾಜ್ಯದ ಜನಾಂಗದ ಅಭಿವೃದ್ದಿಗೆ ಒತ್ತು ನೀಡಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಪಕ್ಷದ ಶಕ್ತಿಯನ್ನು ಹೆಚ್ಚಿಸಬೇಕೆಂದರು. ಸಣ್ಣಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ, ಶಾಸಕ ಟಿ.ರಘುಮೂರ್ತಿ, ಜಿ.ಎಸ್.ಮಂಜುನಾಥ ಪಕ್ಷ ಹಲವಾರು ಜವಾಬ್ದಾರಿ ಹೊತ್ತು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ಧಾರೆ. ಆದಿಜಾಂಬವ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವುದು ಹೆಮ್ಮೆಯ ವಿಷಯವಾಗಿದೆ. ಜನಾಂಗದ ಅಭಿವೃದ್ದಿಗೆ ಕೈಗೊಳ್ಳುವ ಎಲ್ಲಾ ಕೆಲಸ ಕಾರ್ಯಗಳಿಗೆ ಸಹಕಾರ ನೀಡುವ ಭರವಸೆ ನೀಡಿದರು. ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಶಾಸಕ ಬಿ.ಟಿ.ಗೋವಿಂದಪ್ಪ ಮಾತನಾಡಿದರು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ನಿಗಮದ ನೂತನ ಅಧ್ಯಕ್ಷ ಜಿ.ಎಸ್.ಮಂಜುನಾಥ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ನಾಡಿನ ದಲಿತ ಸಮುದಾಯದ ಅಭಿವೃದ್ದಿಗೆ ಶ್ರಮಿಸುತ್ತಿದೆ. ಆದರೆ, ಸಮುದಾಯದ ಕೆಲವರು ಮಾತ್ರ ಅಸಮದಾನವನ್ನು ವ್ಯಕ್ತಪಡಿಸುತ್ತಾರೆ. ಕಾಂಗ್ರೆಸ್ ಪಕ್ಷ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಹಸಿರುಕ್ರಾಂತಿಹಾರಿಕಾರ ಬಾಬು ಜಗಜೀವನರಾಮ್ರವರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದೆ ಎಂದರು. ಜಿಲ್ಲಾ ಕೆಪಿಸಿಸಿ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಪ್ಪ, ಜಿಲ್ಲಾ ಕೆಡಿಪಿ ನಾಮಿನಿರ್ದೇಶನ ಸದಸ್ಯ ಒ.ರಂಗಸ್ವಾಮಿ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.