ಮಹಾನಗರ ಪಾಲಿಕೆಗಳ ಚುನಾವಣೆ ನಂತರ ರಾಜ್ಯದಲ್ಲಿ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಿಬಿಎ ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆ ನಡೆಯಲಿದ್ದು, ಆ ಚುನಾವಣೆ ಮುಗಿಯುವವರೆಗೆ ಮತದಾರರ ಸಮಗ್ರ ಪಟ್ಟಿ ಪರಿಷ್ಕರಣೆ (SIR) ಮುಂದೂಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯ ಚುನಾವಣಾ ಆಯೋಗ ಮನವಿ ಮಾಡಿದೆ.
ರಾಜ್ಯ ಚುನಾವಣಾ ಆಯೋಗ ಈ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು ಸ್ಥಳೀಯಸಂಸ್ಥೆ ಚುನಾವಣೆ ಹಿನ್ನೆಲೆ ಮತದಾರರ ಪಟ್ಟಿ ಪರಿಷ್ಕರಣೆ ಮುಂದೂಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಕೋರಿದ್ದಾರೆ.
ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಮಾಧ್ಯಮಗಳೊಂದಿಗೆ ಮಾತನಾಡಿ, ಕೇಂದ್ರ ಚುನಾವಣಾ ಮುಖ್ಯ ಆಯುಕ್ತರಿಗೆ ಮಂಗಳವಾರ ಇ-ಮೇಲ್ ಕಳುಹಿಸಿದ್ದೇನೆ. ಬೆಂಗಳೂರು ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆ ನಡೆಸಬೇಕಿದೆ. ನ.1ರಿಂದ ಜಿಬಿಎ ಚುನಾವಣೆ ಸಂಬಂಧ ಕೆಲಸ ಶುರು ಮಾಡಬೇಕು. ಈ ಸಮಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡೋದು ಸರಿಯಲ್ಲ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಈಗಾಗಲೇ ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು ಆ ಸಮೀಕ್ಷೆ ಕಾರ್ಯಕ್ಕೆ ಮ್ಯಾನ್ ಪವರ್ ನೀಡಲಾಗಿದೆ. ಇದರಿಂದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗಳಿಗೆ ಮ್ಯಾನ್ ಪವರ್ ಸಮಸ್ಯೆ ಆಗಲಿದೆ. ಹಾಗಾಗಿ ಮತದಾರರ ಪಟ್ಟಿ ಪರಿಷ್ಕರಣೆಗೆ ಮ್ಯಾನ್ ಪವರ್ ಇಲ್ಲದೆ ಕಷ್ಟ ಆಗಲಿದೆ ಎಂದು ತಿಳಿಸಿದರು.
ಸ್ಥಳೀಯ ಸಂಸ್ಥೆ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಕೆ ಮಾಡುವ ಕುರಿತು ಸರ್ಕಾರ ನಿರ್ಧಾರ ಕೈಗೊಂಡಿದೆ. ಇದರ ಬಗ್ಗೆಯೂ ಆಯೋಗವು ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕಿದೆ. ಹೀಗಾಗಿ ಮುಂದೂಡಿಕೆ ಮಾಡಿ ಅಂತ ಪತ್ರದ ಮೂಲಕ ಹೇಳಿದ್ದೇನೆ ಎಂದು ಅವರು ತಿಳಿಸಿದರು.
ಸುಪ್ರಿಂಕೋರ್ಟ್ಗೆ ನ.3ರಂದು ಕಂಪ್ಲಾಯನ್ಸ್ ಅಫಿಡವಿಟ್ ನೀಡಬೇಕು. ಜಿಬಿಎ ಡಿಲಿಮಿಟೇಷನ್ ವರದಿಯನ್ನ ಸರ್ಕಾರ ಕೊಡಬೇಕು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ತಿಳಿಸಿದರು.

