ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಹೆಸರು ಸೇರ್ಪಡೆಗೆ ನವೆಂಬರ್-6 ರವರೆಗೆ ಅವಕಾಶ- ಜಿಲ್ಲಾಧಿಕಾರಿ ವೆಂಕಟೇಶ್

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಮತದಾರ ಪಟ್ಟಿ ತಯಾರಿಕೆ ಪ್ರಕ್ರಿಯೆ ಆರಂಭವಾಗಿದೆ. ನಮೂನೆ-18 ರಲ್ಲಿ  ಮತಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನವೆಂಬರ್ 6 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

- Advertisement - 

ಭಾರತ ಚುನಾವಣಾ ಆಯೋಗದ ಸೂಚನೆಯಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಮತದಾರ ಪಟ್ಟಿ ತಯಾರಿಕೆಗೆ ವೇಳಾಪಟ್ಟಿ ನಿಗಧಿಪಡಿಸಿದ್ದಾರೆ. 1 ನವೆಂಬರ್ 2025 ಕ್ಕೆ ಇದ್ದಂತೆ ಮತದಾರರ ಪಟ್ಟಿ ಸಿದ್ದಪಡಿಸಲಾಗವುದು. ಈ ಸಂಬಂಧ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು, ನಗರಸಭೆ ವ್ಯಾಪ್ತಿಯಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ ಹಾಗೂ ನಿರ್ಧಿಷ್ಟಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಮತದಾರ ಪಟ್ಟಿ ತಯಾರಿಕೆಗೆ ಸೆ.30 ರಂದು ಅಧಿಸೂಚನೆ  ಹೊರಡಿಸಲಾಗಿದೆ. ಅಕ್ಟೋಬರ್ 15 ರಂದು ಮೊದಲ ಬಾರಿಗೆ ಹಾಗೂ 25 ರಂದು ಎರಡನೇ ಬಾರಿಗೆ ಅಧಿಸೂಚನೆಯನ್ನು ಪತ್ರಿಕೆಗಳಲ್ಲಿ ಪ್ರಕಟಣೆ ನೀಡಲಾಗುವುದು. ನಮೂನೆ-18 ರಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 6 ಕಡೆಯ ದಿನವಾಗಿದೆ. ನವೆಂಬರ್ 20 ವರೆಗೆ ಕರಡು ಮತದಾರರ ಪಟ್ಟಿ ಸಿದ್ದಪಡಿಸಲಾಗುವುದು.

- Advertisement - 

ನವೆಂಬರ್ 25 ರಂದು ಕರಡು ಪ್ರತಿ ಪ್ರಕಟಿಸಿ ಆಕ್ಷೇಪಣೆ ಆಹ್ವಾನಿಸಲಾಗುವುದು. ಡಿಸೆಂಬರ್ 10 ಆಕ್ಷೇಪಣೆಗಳನ್ನು ಸಲ್ಲಿಸಲು ಕಡೆಯ ದಿನವಾಗಿದೆ. ಡಿಸೆಂಬರ್ 25ರ ಒಳಗೆ ಆಕ್ಷೇಪಣೆಗಳ ವಿಲೇವಾರಿಗೆ ಕ್ರಮ ವಹಿಸಲಾಗುವುದು. ಡಿಸೆಂಬರ್ 30 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಹೆಸರು ನೊಂದಾಯಿಸಲು ಇಚ್ಛಿಸುವವರು ಪದವಿಧರ ಕ್ಷೇತ್ರದ ಸಾಮಾನ್ಯ ನಿವಾಸಿಯಾಗಿರಬೇಕು.  1 ನವೆಂಬರ್ 2025 ನಿರ್ಧಿಷ್ಟಪಡಿಸಿದ ಅರ್ಹ ದಿನಾಂಕವಾಗಿದ್ದು, ಇದಕ್ಕೂ ಕನಿಷ್ಟ 3 ವರ್ಷಗಳ ಮೊದಲು ರಾಜ್ಯ ಸರ್ಕಾರ ಅಧಿಸೂಚಿಸಿರುವ ವಿಶ್ವ ವಿದ್ಯಾಲಯದಿಂದ ಪದವಿ ಅಥವಾ ಅದಕ್ಕೆ ಸಮಾನವಾದ ವಿದ್ಯಾರ್ಹತೆ ಹೊಂದಿರಬೇಕು.

ವಿದ್ಯಾರ್ಹತೆಯ ಪ್ರಮಾಣ ಪತ್ರಗಳೊಂದಿಗೆ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾಸ್ ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಬ್ಯಾಂಕ್, ಕಿಸಾನ್ ಅಥವಾ ಅಂಚೆ ಕಚೇರಿ ಚಾಲ್ತಿ ಖಾತೆಯ ಪಾಸ್ ಬುಕ್ ಅಥವಾ ಚುನಾವಣೆ ಆಯೋಗ ನಿಗದಿಪಡಿಸಿದ ಇತರೆ ದಾಖಲೆಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ನಮೂನೆ-18 ಅರ್ಜಿಯೊಂದಿಗೆ ವಾಸಸ್ಥಳ ವ್ಯಾಪ್ತಿಯ ಸಹಾಯಕ ಮತದಾರರ ನೋಂದಣಾಧಿಕಾರಿ ಅಥವಾ ನಿರ್ದಿಷ್ಟಪಡಿಸಿದ ಅಧಿಕಾರಿಗಳಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ನಮೂನೆಯನ್ನು ಚುನಾವಣಾ ಆಯೋಗದ ವೆಬ್‍ಸೈಟ್ http://eci.gov.in/files/category/356-forms-for-registration-in-eroll/   ರಾಜ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್‍ಸೈಟ್https://ceo.karnataka.gov.in/20/download-forms/en  ಮೂಲಕ ಡೌನ್‍ಲೋಡ್ ಮಾಡಿಕೊಳ್ಳಬಹುದು. ಜಿಲ್ಲಾಧಿಕಾರಿ ಹಾಗೂ ಎಲ್ಲಾ ತಹಶೀಲ್ದಾರ್ ಕಚೇರಿಗಳಲ್ಲಿಯೂ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಸಹಾಯ ಕೇಂದ್ರಗಳ ಕಛೇರಿ ದೂರವಾಣಿ ಸಂಖ್ಯೆ:
ಮತದಾರರ ಪಟ್ಟಿ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಂಖ್ಯೆ 08194-220720, ಉಪವಿಭಾಗಾಧಿಕಾರಿ ಕಚೇರಿ ಸಂಖ್ಯೆ 08194-200342, ಮೊಳಕಾಲ್ಮೂರು ತಾಲ್ಲೂಕು ಕಚೇರಿ ಸಂಖ್ಯೆ 08198-229234, ಚಳ್ಳಕೆರೆ ತಾಲ್ಲೂಕು ಕಚೇರಿ ಸಂಖ್ಯೆ 08195-250648, ಚಿತ್ರದುರ್ಗ ತಾಲ್ಲೂಕು ಕಚೇರಿ ಸಂಖ್ಯೆ 08914-222416, ಹಿರಿಯೂರು ತಾಲ್ಲೂಕು ಕಚೇರಿ ಸಂಖ್ಯೆ 08193-263226, ಹೊಸದುರ್ಗ ತಾಲ್ಲೂಕು ಕಚೇರಿ ಸಂಖ್ಯೆ 08199-230224, ತಾಲ್ಲೂಕು ಕಚೇರಿ ಸಂಖ್ಯೆ 0891-200013 ಕರೆ ಮಾಡಬಹುದು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ಚುನಾವಣೆ ತಹಶೀಲ್ದಾರ್ ನಾಗವೇಣಿ, ಚುನಾವಣೆ ಶಿರಸ್ತೇದಾರ್ ಮಲ್ಲಿಕಾರ್ಜುನ ನಾಯಕ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಕಾರ್ಯದರ್ಶಿ ಸಿ.ಜೆ.ನಾಸೀರುದ್ದೀನ್ ಮುಖಂಡ ಪ್ರಕಾಶ್ ರಮಾನಾಯ್ಕ್, ಜಿಲ್ಲಾ ಜೆಡಿಎಸ್ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಬಿ.ಜೆ.ಪಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಯಶವಂತ್ ಕುಮಾರ್ ಇದ್ದರು.

 

 

Share This Article
error: Content is protected !!
";