ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಾತಿಗಣತಿ ಸಮೀಕ್ಷೆಯಲ್ಲಿ ಭಾಗವಹಿಸುವುದು ಕಡ್ಡಾಯವಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು. ಜಾತಿಗಣತಿ ಸಮೀಕ್ಷೆಯಲ್ಲಿ ಸಾರ್ವಜನಿಕರು ನೀಡುವ ಮಾಹಿತಿಯ ಗೌಪ್ಯತೆ ಕಾಪಾಡಬೇಕು.
ಈ ಎರಡೂ ಅಂಶಗಳ ಬಗ್ಗೆ ಸ್ವತಃ ಮಾನ್ಯ ಹೈಕೋರ್ಟ್ ಸ್ಪಷ್ಟನೆ ನೀಡಿದ್ದರೂ ಸಹ ನ್ಯಾಯಾಲಯದ ಆದೇಶವನ್ನು ಗಾಳಿಗೆ ತೂರಿ ವರ್ತಿಸುವ ಮೂಲಕ ಕರ್ನಾಟಕ ಕಾಂಗ್ರೆಸ್ ಸರ್ಕಾರ ನ್ಯಾಯಾಂಗ ನಿಂದನೆ ಎಸಗುತ್ತಿದೆ.
ಬೆಂಗಳೂರಿನಲ್ಲಿ ಹದಗೆಟ್ಟಿರುವ ರಸ್ತೆಗಳ ಬಗ್ಗೆ ಖ್ಯಾತ ಉದ್ಯಮಿಗಳು ದನಿ ಎತ್ತಿದಾಗ, “ನಿಮ್ಮ ಸಿಎಸ್ಆರ್ ನಿಧಿಯಲ್ಲಿ ನೀವೇ ರಸ್ತೆಗುಂಡಿ ಮುಚ್ಚಿ”, “ನಿಮ್ಮ ಸಿಎಸ್ಆರ್ ನಿಧಿಯ ಲೆಕ್ಕಕೊಡಿ” ಎಂದು ಬೆದರಿಸಿ ಅವಮಾನ ಮಾಡಿದ್ದ ಕಾಂಗ್ರೆಸ್ ನಾಯಕರು ಈಗ ಒಂದು ಹೆಜ್ಜೆ ಮುಂದೆ ಹೋಗಿ “ಇನ್ಫೋಸಿಸ್ ನವರು ಬೃಹಸ್ಪತಿಗಳಾ?”, “ಜಾತಿಗಣತಿ ಸಮೀಕ್ಷೆಯಲ್ಲಿ ಭಾಗವಹಿಸದವರು ದೇಶದ್ರೋಹಿಗಳು” ಎಂದು ನಿಂದಿಸುವ ಮೂಲಕ ಮತ್ತೊಮ್ಮೆ ದರ್ಪ, ದುರಹಂಕಾರ ಮೆರೆದಿದ್ದಾರೆ ಎಂದು ಅಶೋಕ್ ವಾಗ್ದಾಳಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ನವರೇ, ಸಮೀಕ್ಷೆಯಲ್ಲಿ ಸಾರ್ವಜನಿಕರು ನೀಡುವ ಮಾಹಿತಿಯ ಗೌಪ್ಯತೆಯನ್ನು ಕಾಪಾಡುತ್ತೇವೆ ಎಂದು ನಿಮ್ಮ ಸರ್ಕಾರ ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದೆ. ಆದರೂ ಶ್ರೀಮತಿ ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ ಕುಟುಂಬದವರು ನೀಡಿರುವ ಮಾಹಿತಿ ಹೇಗೆ ಬಹಿರಂಗವಾಯಿತು?
ಮಾಹಿತಿ ಸೋರಿಕೆ ಮಾಡಿದ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳ ಮೇಲೆ ಕ್ರಮ ಜರುಗಿಸುತ್ತೀರಾ? ಮಾನ್ಯ ಉಚ್ಚ ನ್ಯಾಯಾಲಯವೇ ಈ ಸಮೀಕ್ಷೆ ಕಡ್ಡಾಯವಲ್ಲ ಅಂತ ಸ್ಪಷ್ಟವಾಗಿ ಹೇಳಿರುವಾಗ ಈ ಸಮೀಕ್ಷೆಯಲ್ಲಿ ಭಾಗವಹಿಸದವರು ದೇಶದ್ರೋಹಿಗಳು ಹೇಗಾಗುತ್ತಾರೆ ಬಿ.ಕೆ ಬಹಿಪ್ರಸಾದ್ ಅವರೇ? ಎಂದು ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
ನಮ್ಮ ನಾಡಿನ, ದೇಶದ ಖ್ಯಾತ ಉದ್ಯಮಿಗಳನ್ನ ನಿಂದಿಸುವ, ಲಕ್ಷಾಂತರ ಜನಕ್ಕೆ ಉದ್ಯೋಗ ಕೊಟ್ಟು ದೇಶದ ಆರ್ಥಿಕತೆಗೆ ಶಕ್ತಿ ತುಂಬಿರುವ ಉದ್ಯಮಿಗಳ ಬಗ್ಗೆ ನಾಲಿಗೆ ಹರಿಬಿಡುವ ಕಾಂಗ್ರೆಸ್ ನಾಯಕರಿಗೆ ನಿಜಕ್ಕೂ ನಾಚಿಕೆಯಾಗಬೇಕು ಎಂದು ತಿಳಿಸಿದ್ದಾರೆ.

