ಬಾಕಿ ಬಿಲ್ ಕೊಡಿ ಎಂದು ಕೇಳಿದರೆ “ಧಮ್ಕಿ” ಹೇಗಾಗುತ್ತೇ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಾಕಿ ಬಿಲ್ ಕೊಡಿ ಎಂದು ಕೇಳಿದರೆ ಅದು “ಧಮ್ಕಿ” ಹೇಗೆ ಆಗುತ್ತದೆ ಡಿಸಿಎಂ ಡಿ.ಕೆ ಶಿವಕುಮಾರ ಅವರೇ? ಎಂದು ವಿಪಕ್ಷ ನಾಯಕ ಆರ್.ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
ಬಾಕಿ ಬಿಲ್ ಕೊಡದಿದ್ದರೆ ತಮ್ಮ ಹಕ್ಕಿಗಾಗಿ ಮುಷ್ಕರ ಮಾಡಬೇಕಾಗುತ್ತದೆ ಎಂದು ಹೇಳುವುದು “ಧಮ್ಕಿ” ಹೇಗೆ ಆಗುತ್ತದೆ ಉಪಮುಖ್ಯಮಂತ್ರಿಗಳೇ?
ಬಹುಶಃ ರಾಹುಲ್ ಗಾಂಧಿ ಅವರು ಜೇಬಿನಲ್ಲಿ ಇಟ್ಟುಕೊಂಡು ಓಡಾಡುವ ಸಂವಿಧಾನ ಪುಸ್ತಕದಲ್ಲಿ ನಾಗರೀಕರಿಗೆ ಮುಷ್ಕರ, ಹೋರಾಟ ಮಾಡುವ ಹಕ್ಕಿಲ್ಲ ಅನ್ನಿಸುತ್ತೆ. ಆದರೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ನಾಗರಿಕರು, ಗುತ್ತಿಗೆದಾರರು ತಮ್ಮ ಹಕ್ಕಿಗಾಗಿ ಸರ್ಕಾರವನ್ನು ಪ್ರಶ್ನಿಸಲೂ ಬಹುದು, ಮುಷ್ಕರ ಮಾಡಬಹುದು, ಹೋರಾಟವನ್ನೂ ಮಾಡಬಹುದು.
ಇಷ್ಟಕ್ಕೂ ಗುತ್ತಿಗೆದಾರರ ಬಿಲ್ ಯಾಕೆ ಕ್ಲಿಯರ್ ಮಾಡುತ್ತಿಲ್ಲ? ಒಂದಾ ಪಾಪರ್ ಸರ್ಕಾರದ ಬಳಿ ದುಡ್ಡಿಲ್ಲದೆ ಸಂಪೂರ್ಣವಾಗಿ ದಿವಾಳಿ ಆಗಿರಬೇಕು. ಇಲ್ಲಾ ನಿಮ್ಮ ಕಮಿಷನ್ ಬೇಡಿಕೆ ಈಡೇರಿಸಲಾಗದೆ ಗುತ್ತಿಗೆದಾರರು ನೀವು ಕೇಳುತ್ತಿರುವ ಪರ್ಸೆಂಟೇಜ್ ಗೆ ಒಪ್ಪದೇ ಇರಬಹುದು.
ರಸ್ತೆಗುಂಡಿಗಳ ದುಸ್ಥಿತಿ ಬಗ್ಗೆ ದನಿ ಎತ್ತಿದ ಉದ್ಯಮಿಗಳಿಗೆ ಧಮ್ಕಿ ಹಾಕಿ ಅವಮಾನ ಮಾಡಿದ್ದಾಯ್ತು, ಈಗ ಗುತ್ತಿಗೆದಾರರಿಗೆ ಧಮ್ಕಿ ಹಾಕುತ್ತಿದೆ ಈ ಲಜ್ಜೆಗೆಟ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರ.
ಪರಿಸ್ಥಿತಿ ಹೀಗೆ ಮುಂದುವರೆದರೆ ಕರ್ನಾಟಕಕ್ಕೆ ಯಾವ ಉದ್ಯಮಗಳೂ ಬರುವುದಿಲ್ಲ, ಯಾವ ಗುತ್ತಿಗೆದಾರರು ಸರ್ಕಾರದ ಕೆಲಸ ಮಾಡುವುದಿಲ್ಲ ಎಂದು ಆರ್.ಅಶೋಕ್ ಎಚ್ಚರಿಸಿದ್ದಾರೆ.

