ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬುಡಕಟ್ಟು ಸಮುದಾಯಗಳ ಜನರ ಜೀವನ ಸುಧಾರಿಸಲು ಪೌಷ್ಠಿಕ ಆಹಾರ ಒದಗಿಸುವ ಯೋಜನೆಯಲ್ಲಿ ಮುಗ್ಗಲು ಹಿಡಿದ ಬೆಳೆಗಳು, ಕಳಪೆ ಆಹಾರಗಳ ವಿತರಣೆಯಾಗುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಬುಡಕಟ್ಟು ಸಮುದಾಯದ ಕುಟುಂಬಗಳ ಕುರಿತು ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕಿರುವ ತಾತ್ಸಾರ ಧೋರಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಿಸಿದ್ದಾರೆ.
ರಾಜ್ಯದ ಸುಮಾರು 47,859 ಬುಡಕಟ್ಟು ಸಮುದಾಯಗಳ ಕುಟುಂಬಗಳಿಗೆ ಪೌಷ್ಠಿಕ ಆಹಾರ ಪೂರೈಕೆ ಮಾಡಲು ರಾಜ್ಯ ಸರ್ಕಾರ ವಾರ್ಷಿಕವಾಗಿ 120 ಕೋಟಿ ರೂ ವ್ಯಯಿಸುತ್ತಿದ್ದರೂ ಆದಿವಾಸಿ ಸುಮುದಾಯದ ಬಡವರಿಗೆ ಗುಣಮಟ್ಟದ ಆಹಾರ ಪೂರೈಕೆಯಾಗದಿರುವುದು ಸರ್ಕಾರದ ಆಡಳಿತ ಯಂತ್ರಕ್ಕೆ ತುಕ್ಕು ಹಿಡಿದಿರುವುದನ್ನು ಸಾಕ್ಷೀಕರಿಸುತ್ತದೆ.
ಕಳಪೆ ಆಹಾರಗಳ ಸೇವನೆಯಿಂದ ಅನಾರೋಗ್ಯ ಸಮಸ್ಯೆಗಳು ಉದ್ಭವಿಸಿದಲ್ಲಿ ಇದಕ್ಕೆ ಯಾರು ಹೊಣೆ? ದಪ್ಪ ಚರ್ಮದ ರಾಜ್ಯ ಸರ್ಕಾರ ಈ ಕೂಡಲೇ ಅಪೌಷ್ಟಿಕ ಆಹಾರ ತಲುಪಿಸುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಉತ್ತಮ ಪೌಷ್ಟಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ಮುಂಜಾಗ್ರತೆ ವಹಿಸಲಿ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

