ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆದಾಯ ತೆರಿಗೆ ಹಾಗೂ ಜಿಎಸ್ಟಿ ಇಲಾಖೆಗಳ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆಯಲ್ಲಿ ದಾಳಿ ನಡೆಸಿ ಸುಮಾರು 100 ಕೋಟಿ ರೂ. ಮೌಲ್ಯದಷ್ಟು ಮರೆಮಾಚಿದ್ದ ವಹಿವಾಟು ಪತ್ತೆ ಮಾಡಿರುವ ಘಟನೆ ಬೆಂಗಳೂರು ನಗರದಲ್ಲಿ ಜರುಗಿದೆ. ನಗರದ ಕೇಂದ್ರ ವಿಭಾಗ ಸೇರಿದಂತೆ ಚಿಕ್ಕಪೇಟೆ, ಅವೆನ್ಯೂ ರಸ್ತೆ, ಬಿವಿಕೆ ರಸ್ತೆ, ಜೆಸಿ ರಸ್ತೆ, ಎಸ್ಪಿ ರೋಡ್ ಪ್ರದೇಶಗಳಲ್ಲಿನ ಹಲವು ವ್ಯಾಪಾರಸ್ಥರ ಮಳಿಗೆಗಳ ಮೇಲೆ ಐಟಿ, ಜಿಎಸ್ ಟಿ ಅಧಿಕಾರಿಗಳು ನಡೆಸಿದ ದಾಳಿ ಸಂದರ್ಭದಲ್ಲಿ ವ್ಯಾಪಕ ತೆರಿಗೆ ವಂಚನೆ ಜಾಲ ಬಯಲಾಗಿದೆ.
ದಾಳಿಯಲ್ಲಿ ಎಲೆಕ್ಟ್ರಾನಿಕ್ಸ್, ವಾಹನ ಬಿಡಿಭಾಗಗಳು, ಗಿಫ್ಟ್ ಐಟಂಗಳು, ಒಣ ಹಣ್ಣುಗಳು ಸೇರಿದಂತೆ ವಿವಿಧ ಸಾಮಗ್ರಿಗಳ ಖರೀದಿ–ಮಾರಾಟದಲ್ಲಿ ತೆರಿಗೆ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪತ್ತೆಯಾದ ಅಕ್ರಮಗಳು-
ತೆರಿಗೆ ಬಿಲ್ಇಲ್ಲದೇ ಸರಕು ಖರೀದಿ, ಖರೀದಿ ಬಿಲ್ಗಳಿಗಿಂತ ಹೆಚ್ಚಾಗಿ ಸರಕು ಖರೀದಿ, ಬಿಲ್ ನೀಡದೆ ಸರಕು ಮಾರಾಟ, ಕಬ್ಬಿಣ, ಉಕ್ಕು, ಹಾರ್ಡ್ವೇರ್, ಸಿಮೆಂಟ್ ವ್ಯಾಪಾರಿಗಳಿಂದ ತೆರಿಗೆ ತಪ್ಪಿಸಲು ಮಾಲುಗಳ ಜತೆಯಲ್ಲದ ನಕಲಿ ಬಿಲ್ಗಳನ್ನು ನೀಡಿರುವುದು ದಾಳಿ ವೇಳೆ ಬೆಳಕಿಗೆ ಬಂದಿದೆ.
ಗುತ್ತಿಗೆದಾರರಿಗೆ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಪಡೆಯಲು ಸಹಾಯಕವಾಗುವ ನಕಲಿ ಬಿಲ್ಜಾಲ, 40 ಲಕ್ಷ ರೂ. ಮೀರಿದ ವಹಿವಾಟು ಇದ್ದರೂ GST ನೋಂದಣಿ ಮಾಡದೇ ವ್ಯವಹಾರ, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1,000 ಚೀಲ ಗುಟ್ಕಾ ಮತ್ತು ಪಾನ್ ಮಸಾಲಾ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ವಶ, ಸರಿಯಾದ ಬಿಲ್ ಇಲ್ಲದೆ ಕಬ್ಬಿಣದ ಸ್ಕ್ರ್ಯಾಪ್ ಸಾಗಿಸುತ್ತಿದ್ದ 75 ವಾಹನಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನಲ್ಲಿ ಐಟಿ, ಜಿಎಸ್ಟಿ ಅಧಿಕಾರಿಗಳು ಕಳೆದ 15 ದಿನಗಳಿಂದ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
500 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿ, 100 ಕೋಟಿ ರೂ. ಮರೆಮಾಚಿದ್ದ ವಹಿವಾಟು ಪತ್ತೆ ಮಾಡಿದ್ದಾರೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ತೆರಿಗೆ ವಂಚನೆ ನಡೆಸಿದ ವ್ಯಾಪಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಹೆಚ್ಚಿನ ದಾಖಲೆಗಳನ್ನು ಪರಿಶೀಲಿಸುವ ಕಾರ್ಯ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

