ಚಂದ್ರವಳ್ಳಿ ನ್ಯೂಸ್, ಮೈಸೂರು:
ರಾಜ್ಯದಲ್ಲಿ ಹುಸಿ ಬಾಂಬ್ ಬೆದರಿಕೆ ಇ-ಮೇಲ್ಗಳು ಹೆಚ್ಚಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಭೇಟಿ ಸಂದರ್ಭದಲ್ಲೇ ಸರಗೂರು ತಾಲೂಕು ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವುದು ಆತಂಕ ಸೃಷ್ಟಿಸಿದೆ. ಪೊಲೀಸರು ಬಾಂಬ್ ಬೆದರಿಕೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಟ ಅಜಿತ್ ಕುಮಾರ್ ಹೆಸರು ಇ-ಮೇಲ್ನಲ್ಲಿ ಉಲ್ಲೇಖ–
ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿರುವ ಸಂದರ್ಭದಲ್ಲೇ ಮೈಸೂರಿನ ಸರಗೂರು ತಾಲ್ಲೂಕು ಕಚೇರಿಗೆ ಆರ್ಡಿಎಕ್ಸ್ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಬಂದಿದೆ.
ಮಧ್ಯಾಹ್ನ 1 ಗಂಟೆಗೆ ಸ್ಫೋಟಗೊಳ್ಳುವ ಎಚ್ಚರಿಕೆ ನೀಡಲಾಗಿದ್ದು, ಅಧಿಕಾರಿಗಳು ಹಾಗೂ ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ನಟ ಅಜಿತ್ ಕುಮಾರ್ ಹೆಸರನ್ನೂ ಸಹ ಮೇಲ್ನಲ್ಲಿ ಉಲ್ಲೇಖಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ.
ಹುಸಿ ಬೆದರಿಕೆ–
ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಡಿ.12ರಂದು ಬಂದ ಬಾಂಬ್ ಬೆದರಿಕೆ ಇಮೇಲ್ ಕೆಲಕಾಲ ಆತಂಕ ಸೃಷ್ಟಿಸಿತ್ತು. ಜಿಲ್ಲಾಡಳಿತ ಹಾಗೂ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಶೋಧ ನಡೆಸಿದ್ದು, ತಮಿಳುನಾಡಿನ 13 ವರ್ಷದ ಬಾಲಕಿಯಿಂದ ಬಂದ ಹುಸಿ ಬೆದರಿಕೆ ಎಂದು ತಿಳಿದುಬಂದಿತ್ತು. ಡಿ.15ರಂದು ಗದಗ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಪಾಕ್ನ ಐಎಸ್ಐ ಮತ್ತು ಎಲ್ಟಿಟಿಇ ಕಾರ್ಯಕರ್ತರ ಜೊತೆ ಸೇರಿ 5 ಬಾಂಬ್ಗಳಿಂದ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಕಿಡಿಗೇಡಿಗಳು ಧಮ್ಕಿ ಹಾಕಿದ್ದರು.
ಅಲ್ಲದೇ ಉತ್ತರ ಕನ್ನಡದ ಭಟ್ಕಳ ಮತ್ತು ತುಮಕೂರಿನ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರ ಅಧಿಕೃತ ಇ-ಮೇಲ್ ಐಡಿಗೂ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ತಕ್ಷಣ ಪೊಲೀಸರು ಡಿಸಿ ಕಚೇರಿಗೆ ಧಾವಿಸಿ ಒಳಭಾಗದಲ್ಲಿ ತೀವ್ರ ತಪಾಸಣೆ ನಡೆಸಿದ್ದರು. ಈ ಎಲ್ಲಾ ಇ-ಮೇಲ್ಗಳೂ ಹುಸಿ ಬೆದರಿಕೆಗಳೆಂದು ತಿಳಿದುಬಂದಿದ್ದವು. ಮೈಸೂರಿಗೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಗೊಂದಲ ಸೃಷ್ಟಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಠಿಸಿದೆ.

