ಚಂದ್ರವಳ್ಳಿ ನ್ಯೂಸ್, ನವದೆಹಲಿ:
ರಾಜ್ಯ ನಾಯಕತ್ವ ಬದಲಾವಣೆ ಕುರಿತ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಅವರು ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಬದಲಾವಣೆ ವದಂತಿ ತಳ್ಳಿ ಹಾಕಿದ ಅವರು, ಮುಖ್ಯಮಂತ್ರಿ ಕುರ್ಚಿಗಾಗಿ ವಿವಾದವೇನೂ ಇಲ್ಲ. ಉಪ ಮುಖ್ಯಮಂತ್ರಿಯಾಗಿ ಮುಂದುವರಿಯಲು ನನಗೆ ತೃಪ್ತಿ ಇದೆ ಎಂದು ಅವರು ಹೇಳಿದ್ದಾರೆ.
ಆಂತರಿಕ ಭಿನ್ನಾಭಿಪ್ರಾಯಗಳು ಅಥವಾ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಸಭೆ ಎಂಬಿತ್ಯಾದಿ ವದಂತಿಗಳು ಮಾಧ್ಯಮಗಳಲ್ಲಿ ಮಾತ್ರ ಬರುತ್ತಿದೆ. ನಾನು ಯಾವುದೇ ಎಐಸಿಸಿ ವರಿಷ್ಠರನ್ನೂ ಭೇಟಿ ಮಾಡುತ್ತಿಲ್ಲ. ಉಪ ಮುಖ್ಯಮಂತ್ರಿಯಾಗಿ ಮುಂದುವರಿಯಲು ನನಗೆ ಸಂತೋಷವಿದೆ ಎಂದು ಅವರು ತಿಳಿಸಿದ್ದಾರೆ.
ಪಕ್ಷದ ಕಾರ್ಯಕರ್ತನಾಗಿರಲು ಇಷ್ಟಪಡುತ್ತೇನೆ ಎಂದು ಹೇಳುವ ಮೂಲಕ ರಾಜ್ಯದಲ್ಲಿನ ಮುಖ್ಯಮಂತ್ರಿ ಬದಲಾವಣೆ ಅಥವಾ ಸಂಭಾವ್ಯ ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಡಿಸಿಎಂ ತೆರೆ ಎಳೆದರು.
ಪಕ್ಷ ನಿರ್ಧಾರ ತೆಗೆದುಕೊಳ್ಳಬಹುದು-
ಮಾಧ್ಯಮಗಳ ಪುನರಾವರ್ತಿತ ಪ್ರಶ್ನೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿ, ನಾಯಕತ್ವಕ್ಕೆ ಸಂಬಂಧಿಸಿದಂತೆ ಯಾವುದೇ ಹೆಸರನ್ನು ಊಹಾಪೋಹ ಮಾಡಬಾರದು. ಯಾವುದೇ ನಿರ್ಧಾರ ತೆಗೆದುಕೊಳ್ಳುವುದು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟದ್ದು, ಯಾವುದೇ ದಿನವಾದರೂ ಕಾಂಗ್ರೆಸ್ ಪಕ್ಷ ನಿರ್ಧಾರ ತೆಗೆದುಕೊಳ್ಳಬಹುದು. ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಡಿಸಿಎಂ ಹೇಳಿದರು.
ಪ್ರಿಯಾಂಕಾ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂಬ ಊಹಾಪೋಹದ ಸುದ್ದಿ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್, ನನಗೆ ಈ ವಿಷಯಗಳ ಬಗ್ಗೆ ತಿಳಿದಿಲ್ಲ. ಎಐಸಿಸಿ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನನ್ನ ನಾಯಕರು ಎಂದು ಡಿಕೆಶಿ ತಿಳಿಸಿದರು.
ನೀವೇ ಸಿದ್ದರಾಮಯ್ಯ ಜೊತೆ ಮಾತನಾಡಿ:
ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗಳಿಗೆ ಡಿಕೆ ಶಿವಕುಮಾರ್ ಉತ್ತರಿಸಿ, ಈ ಪ್ರಶ್ನೆ ಸಂಬಂಧ ನೀವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿ ಎಂದು ಮಾಧ್ಯಮದವರಿಗೆ ಸಲಹೆ ನೀಡಿದರು.
ಅಲ್ಲದೆ ತಮ್ಮ ದೆಹಲಿ ಭೇಟಿ ಸಂಪೂರ್ಣವಾಗಿ ಆಡಳಿತಾತ್ಮಕವಾಗಿದೆಯೇ ಹೊರತು ರಾಜಕೀಯವಾಗಿ ಅಲ್ಲ ಎಂದು ಡಿಸಿಎಂ ಶಿವಕುಮಾರ್ ಪುನರುಚ್ಚರಿಸಿದರು.

