ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ರಾಜಧಾನಿ ಬೆಂಗಳೂರು ಈಗ ‘ಡ್ರಗ್ಸ್ ಹಬ್‘, ‘ಉಡ್ತಾ ಬೆಂಗಳೂರು‘ ಆಗಿ ಮಾರ್ಪಡುತ್ತಿರುವುದು ಆತಂಕಕಾರಿ ಮಾತ್ರವಲ್ಲ, ಕಾನೂನು ಸುವ್ಯವಸ್ಥೆಯ ಕುಸಿತದ ದುರಂತ ಸಾಕ್ಷ್ಯ! ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಬೆನ್ನಲ್ಲೇ ಈಗ ಬೆಂಗಳೂರಿನಲ್ಲೂ ಮೂರು ಡ್ರಗ್ ಫ್ಯಾಕ್ಟರಿಗಳನ್ನು ಮಹಾರಾಷ್ಟ್ರ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದರೆ ನಮ್ಮ ರಾಜ್ಯದ ಗುಪ್ತಚರ ಇಲಾಖೆ ಮತ್ತು ಪೊಲೀಸ್ ವ್ಯವಸ್ಥೆ ನಿದ್ರಿಸುತ್ತಿದೆಯೇ? ಇದಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ,
ಗೃಹಮಂತ್ರಿ ಡಾ.ಜಿ ಪರಮೇಶ್ವರ್ ಅವರೇ, ಪೊಲೀಸರನ್ನು ಕೇವಲ ವಿರೋಧ ಪಕ್ಷದವರ ಮೇಲೆ ರಾಜಕೀಯ ಸೇಡು ತೀರಿಸಿಕೊಳ್ಳಲು ಮಾತ್ರ ಬಳಸಿಕೊಳ್ಳಲಾಗುತ್ತಿದೆಯೇ? ನಮ್ಮ ಮಕ್ಕಳ, ಯುವಜನತೆಯ ಬಗ್ಗೆ ನಿಮಗೆ ಕಿಂಚಿತ್ತೂ ಕಾಳಜಿ ಇಲ್ಲವೆ? ಹೊರರಾಜ್ಯದ ಪೊಲೀಸರು ಬಂದು ನಮ್ಮ ರಾಜ್ಯದ ಡ್ರಗ್ ಮಾಫಿಯಾ ಬಯಲಿಗೆಳೆಯಬೇಕಾದ ಅನಿವಾರ್ಯತೆ ಬಂದಿರುವುದು ಈ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವೈಫಲ್ಯ ಮಾತ್ರವಲ್ಲ, ನಾಚಿಕೆಗೇಡಿನ ಸಂಗತಿ ಎಂದು ವಿಜಯೇಂದ್ರ ಟೀಕಿಸಿದ್ದಾರೆ.
ನೆರೆರಾಜ್ಯದ ಪೊಲೀಸರ ಕಾರ್ಯಾಚರಣೆಯಿಂದಾಗಿ ಇಷ್ಟು ಬಯಲಿಗೆ ಬಂದಿದೆ. ಇನ್ನೂ ತೆರೆಮರೆಯಲ್ಲಿ, ಕಾನೂನಿನ ಕಣ್ಣು ತಪ್ಪಿಸಿ ಯಾವ ಪ್ರಮಾಣದಲ್ಲಿ ಈ ಡ್ರಗ್ಸ್ ಮಾಫಿಯಾ ಕೆಲಸಮಾಡುತ್ತಿರಬಹುದು ಎನ್ನುವುದು ನಿಜಕ್ಕೂ ಗಂಭೀರವಾದ ಹಾಗೂ ಕಳವಳಕಾರಿ ಸಂಗತಿ.
ಈ ಕೂಡಲೇ ನಮ್ಮ ಪೊಲೀಸ್ ವ್ಯವಸ್ಥೆ ಸಕ್ಷಮವಾಗಿ ಕಾರ್ಯನಿರ್ವಹಿಸಿ, ಯಾವುದೇ ರಾಜಕೀಯ ಹಸ್ತಕ್ಷೇಪಕ್ಕೂ ಆಸ್ಪದ ಕೊಡದೆ, ಈ ಡ್ರಗ್ ಮಾಫಿಯಾವನ್ನು ಬೇರುಸಹಿತ ಕಿತ್ತೆಸೆಯಲು ಯುದ್ಧೋಪಾದಿಯಲ್ಲಿ ಕಾರ್ಯಾಚರಣೆ ನಡೆಸಬೇಕಾಗಿದೆ. ಮೊದಲು ನಮ್ಮ ಪೊಲೀಸರಿಗೆ ಮುಕ್ತವಾಗಿ ಕೆಲಸ ಮಾಡಲು ಬಿಡಿ, ಡ್ರಗ್ಸ್ ಪಿಡುಗಿಗೆ ಸಂಪೂರ್ಣ ಕಡಿವಾಣ ಹಾಕಿ ಎಂದು ವಿಜಯೇಂದ್ರ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

