ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ವೇದಿಕೆ ನೀಡುವುದು ಬಾಲ ಭವನದ ಉದ್ದೇಶವಾಗಿದೆ. ಓದಿನ ಜೊತೆಗೆ ಮಕ್ಕಳಲ್ಲಿರುವ ಆಟೋಟ ಹಾಗೂ ವಿವಿಧ ಪ್ರತಿಭೆಯನ್ನು ಗುರುತಿಸಿ ವೇದಿಕೆಯನ್ನು ಕಲ್ಪಿಸುವ ಸಲುವಾಗಿ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಹಾಗೂ ತಾಲೂಕು ಬಾಲ ಭವನ ಸಮಿತಿ ಅಧ್ಯಕ್ಷ ವೈ.ರವಿಕುಮಾರ್ ಹೇಳಿದರು.
ರಾಜ್ಯ ಬಾಲ ಭವನ ಸೊಸೈಟಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಹಾಗೂ ತಾಲೂಕು ಬಾಲ ಭವನ ಸಮಿತಿ ಸಹಯೋಗದಲ್ಲಿ ಶನಿವಾರ ನಗರದ ರೋಟರಿ ವಿದ್ಯಾಲಯದಲ್ಲಿ ನಡೆದ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ ಉದ್ಘಾಟಸಿ ಅವರು ಮಾತನಾಡಿದರು.
ಸ್ಪರ್ಧೆಗಳಲ್ಲಿ ಬಹುಮಾನ ಪಡೆಯುವುದಕ್ಕಿಂತ ಭಾಗವಹಿಸುವುದು ಬಹಳ ಮುಖ್ಯ. ಮಕ್ಕಳಿಗೆ ಚಿತ್ರಕಲೆ,ಗಾಯನ, ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತ ಮಕ್ಕಳಿಗೆ ಬಹುಮಾನವನ್ನು ನೀಡಲಾಗುತ್ತಿದೆ. ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿದರೆ ಏಕಾಗ್ರತೆ ಮತ್ತು ನೆನಪಿನ ಶಕ್ತಿ ಹೆಚ್ಚಾಗುತ್ತದೆ ಎಂದರು.
ಬಾಲ ಭವನ ಕಾರ್ಯದರ್ಶಿ ಹಾಗೂ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ವೀಣಾ ರವರು ಮಾತನಾಡಿ, ರಾಜ್ಯಾದ್ಯಂತ ಇಂದು ಕಲಾ ಪ್ರತಿಭೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಿಂದ ಮಕ್ಕಳಲ್ಲಿ ಅಡಗಿರುವ ಕಲೆಯನ್ನು ಗುರುತಿಸಿ, ಪ್ರೋತ್ಸಾಹಿಸಲು ಸಹಕಾರಿಯಾಗಿದೆ. ಶಾಲೆಯ ಪಾಠದ ಜೊತೆಗೆ ಸೃಜನಾತ್ಮಕ ಚಟುವಟಿಕೆಗಳು ವೇದಿಕೆ ಕಲ್ಪಿಸಲಾಗಿದೆ ಎಂದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಸಿದ್ದರಾಜು.ಎಸ್ ಮಾತನಾಡಿ ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವ ಹಾಗೆ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸುವ ಕೆಲಸವನ್ನು ರಾಜ್ಯಬಾಲ ಸೊಸೈಟಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆಸಲಾಗುತ್ತಿರುವುದು ಉತ್ತಮವಾದ ಕೆಲಸವಾಗಿದೆ. ಚಿತ್ರದುರ್ಗ ಶೌರ್ಯ ಪರಾಕ್ರಮಕ್ಕೆ ಹೆಸರಾಗಿದೆ ಮಕ್ಕಳಲ್ಲಿರುವ ಪ್ರತಿಭೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಅಳವಡಿಸಿಕೊಂಡರೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಬಹುದು. ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಮಕ್ಕಳ ಭಾಗವಹಿಸಿದರೆ ಒತ್ತಡದಿಂದ ಹೊರಗಿರುತ್ತಾರೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಬಾಲಭವನ ಕಾರ್ಯಕ್ರಮ ಸಂಯೋಜಕ ಡಿ.ಕುಮಾರ್ ಮಾತನಾಡಿ, ಆರು ತಾಲೂಕುಗಳಲ್ಲಿ ಎಂಟು ಕಾರ್ಯಕ್ರಮ ಹಮ್ಮಿಕೊಂಡು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬಹುಮಾನವನ್ನು ನೀಡಲಾಗುತ್ತಿದೆ. ಇದಕ್ಕೆ ರಾಜ್ಯಬಾಲ ಭವನ ಸೊಸೈಟಿಯ ಅಧ್ಯಕ್ಷ ಬಿ.ಆರ್.ನಾಯ್ಡು, ಸಿ.ಇ.ಓ ಡಾ.ಆಕಾಶ್.ಎಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ ಕುಮಾರ್.ಕೆ.ಎಚ್ ಸೂಕ್ತ ಮಾರ್ಗದರ್ಶನ ನೀಡಿದ್ದಾರೆ ಎಂದರು.
ಕಲಾಪ್ರತಿಭೆ ಕಾರ್ಯಕ್ರಮದಲ್ಲಿ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ಹಾಗೂ ಪದಕಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮೇಲ್ವಿಚಾರಕಿ ಪಾವನ, ಸಿರಿ ಸಂಪಿಗೆ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಕೆ.ಪವಿತ್ರ ವಿವಿಧ ಸ್ಪರ್ಧೆಗಳಿಗೆ ತೀರ್ಪುಗಾರರಾಗಿ ಭಾಗವಹಿಸಿದ್ದರು. ಮುಖ್ಯ ಶಿಕ್ಷಕ ಉಮಾದೇವಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

