ಚಂದ್ರವಳ್ಳಿ ನ್ಯೂಸ್, ಮೈಸೂರು:
ಬಳ್ಳಾರಿ ಗಲಭೆ ಕುರಿತು ಸೂಕ್ತ ತನಿಖೆ ಆಗಿ ಪ್ರಥಮ ವರದಿ ಬರಲಿ. ಆ ನಂತರ ಅದರ ಬಗ್ಗೆ ಮಾತನಾಡೋಣ. ಸರಿದಾರಿಯಲ್ಲಿ ತನಿಖೆ ನಡೆಯುತ್ತಿದ್ದು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಜೆಟ್ ನಂತರ ಸಿಎಂ ಬದಲಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ತಾವು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದೀರಲ್ಲಾ ಎಂಬ ಪ್ರಶ್ನೆಗೆ, ನಾನು ಆ ರೀತಿ ಸಿಎಂ ಬದಲಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ, ನಾನು ಸಿಎಂ ರೇಸ್ನಲ್ಲೂ ಇಲ್ಲ ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಅಧಿಕಾರ ಹಂಚಿಕೆ ಬಗ್ಗೆ ಏನಾದರೂ ಚರ್ಚೆ ನಡೆಯುತ್ತಿದೆಯೇ? ಎಂಬುದಕ್ಕೆ ಪ್ರತಿಕ್ರಿಯಿಸಿದ ಜಾರಕಿಹೊಳಿ, ಅಧಿಕಾರ ಹಂಚಿಕೆ ಕುರಿತು ಚರ್ಚೆ ಗೊತ್ತಿಲ್ಲ, ನಾವು ಆ ಮಟ್ಟದಲ್ಲಿ ಇಲ್ಲ. ಅಧಿಕಾರ ಹಂಚಿಕೆ ಆಗಿದೆಯೇ? ಯಾರು ಯಾವಾಗ ಬರುತ್ತಾರೆ ಅಂತ ಗೊತ್ತಿಲ್ಲ. ನಿರ್ಧಾರ ತೆಗೆದುಕೊಳ್ಳುವ ಜಾಗದಲ್ಲಿ ನಾವು ಇಲ್ಲವಲ್ಲ. ನಿರ್ಧಾರ ಏನಿದ್ದರೂ ದೆಹಲಿಯಲ್ಲಿ ತೆಗೆದುಕೊಳ್ಳುತ್ತಾರೆ. ನಮ್ಮ ಮಟ್ಟದಲ್ಲಿ ಯಾವುದೂ ಇರುವುದಿಲ್ಲ ಎಂದು ಅವರು ತಿಳಿಸಿದರು.
ಸಿದ್ದರಾಮಯ್ಯನವರ ಸಾಧನಾ ಸಮಾವೇಶದ ಸಿದ್ಧತೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಅದರ ಬಗ್ಗೆ ಇನ್ನೂ ನಿರ್ಧಾರ ಆಗಬೇಕು. ಎಲ್ಲಿ ಸಮಾವೇಶ ಮಾಡಬೇಕು ಎಂಬ ಬಗ್ಗೆ ಚರ್ಚೆ ಆಗಬೇಕು. ಅಂತಿಮವಾಗಿ ಸಿದ್ದರಾಮಯ್ಯ ಅವರೇ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಸಿದ್ದರಾಮಯ್ಯ 5 ವರ್ಷಕ್ಕೆ ಸಿಎಂ ಆಗಿದ್ದಾರೆ. ನಾವು ಅದನ್ನೇ ಸಾಕಷ್ಟು ಬಾರಿ ಹೇಳಿದ್ದೇವೆ ಎಂದು ಹೇಳಿದರು. ಆದರೂ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಲೇ ಇರುವುದಕ್ಕೆ, ಆ ಚರ್ಚೆ ನಿಲ್ಲಬೇಕು ಎಂಬ ಬಗ್ಗೆ ನಮ್ಮ ಅಭಿಪ್ರಾಯವೂ ಇದೆ ಎಂದು ತಿಳಿಸಿದರು.
ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರುತ್ತಾರಾ? ಎಂದು ಕೇಳಿದಾಗ, ಅವರೇ ಹೇಳಿದ ಮೇಲೆ ಇನ್ನೇನು?. ಅಧಿವೇಶನದಲ್ಲೇ ಹೇಳಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

