ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಾಮರಾಜಪೇಟೆಯಲ್ಲಿ ಗೋಮಾತೆಯ ಕೆಚ್ಚಲು ಕತ್ತರಿಸಿದ ಅಮಾನುಷ ಘಟನೆಯ ಆಘಾತದಿಂದ ಹೊರಬರುವ ಮುನ್ನವೇ ಈಗ ಮತ್ತೊಂದು ಹೇಯ ಕೃತ್ಯ ನಡೆದಿದ್ದು, ಹೊನ್ನಾವರ ತಾಲ್ಲೂಕಿನ ಸಾಲ್ಕೋಡ ಗ್ರಾಮದಲ್ಲಿ ಗಬ್ಬದ ಆಕಳು ಕಡಿದು, ಗರ್ಭದಿಂದ ಕರು ತೆಗೆದು ಬಿಸಾಡಿ, ಮಾಂಸ ಹೂತ್ತೊಯ್ಯುವ ಮೂಲಕ ಕಿಡಿಗೇಡಿಗಳು ಮತ್ತೊಮ್ಮೆ ಕ್ರೌರ್ಯ ಮೆರೆದಿದ್ದಾರೆ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
ತುಷ್ಟೀಕರಣ, ಅರಾಜಕತೆಯಿಂದ ನಿಸ್ತೇಜವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಬಲಹೀನತೆಯನ್ನೇ ಬಂಡವಾಳವಾಗಿಸಿಕೊಂಡಿರುವ ಮತಾಂಧ ಶಕ್ತಿಗಳು, ಗೋವುಗಳ ಮೇಲೆ ಪ್ರಹಾರ ಮಾಡುವ ಮೂಲಕ ಹಿಂದೂಗಳಿಗೆ ಸವಾಲು ಹಾಕುತ್ತಿವೆ ಎಂದು ಜೆಡಿಎಸ್ ಕಿಡಿ ಕಾರಿದೆ.
ಸಿಎಂ ಸಿದ್ದರಾಮಯ್ಯ ನವರೇ, ಗೋವುಗಳ ಮೇಲೆ ಪದೇ ಪದೇ ನಡೆಯುತ್ತಿರುವ ಈ ದಾಳಿಗಳನ್ನು ಗಮನಿಸಿದರೆ ಇದರ ಹಿಂದೆ ದೊಡ್ಡ ಜಾಲವೇ ಅಡಗಿದಂತಿದೆ. ಮತಾಂಧ ಶಕ್ತಿಗಳು, ಮೂಲಭೂತವಾದಿ ಶಕ್ತಿಗಳ ದೊಡ್ಡ ಜಿಹಾದಿ ಷಡ್ಯಂತ್ರವೆ ಇದ್ದಂತಿದೆ.
ಸರ್ಕಾರ ಇದನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಈ ದುಷ್ಕೃತ್ಯಗಳಿಗೆ ಕಡಿವಾಣ ಹಾಕದೆ ಹೋದರೆ, ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಜೆಡಿಎಸ್ ಎಚ್ಚರಿಕೆ ನೀಡಿದೆ.