ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಒಪ್ಪದ ಪತ್ನಿ ಮತ್ತು ಅತ್ತೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀಕಾಂತ್ಎಂಬುವರು ತನ್ನ ಪತ್ನಿ ಲಕ್ಷ್ಮೀ ಮತ್ತು ಅತ್ತೆ ಶೃತಿ ಅವರಿಗೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸಿ ರಾಡ್ನಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. 15 ವರ್ಷದ ಹಿಂದೆ ಶ್ರೀರಂಗಪಟ್ಟಣ ತಾಲ್ಲೂಕಿನ ಪಾಲಹಳ್ಳಿ ಗ್ರಾಮದ ಲಕ್ಷ್ಮೀ ಜೊತೆ ಶ್ರೀಕಾಂತ್ ವಿವಾಹವಾಗಿದ್ದಾರೆ.
ನಾಲ್ಕು ವರ್ಷಗಳ ಹಿಂದೆ ಶ್ರೀಕಾಂತ್ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದಾರೆ. ಬಳಿಕ, ಪತ್ನಿ ಲಕ್ಷ್ಮೀ ಮತ್ತು ಅತ್ತೆ ಶೃತಿ ಅವರಿಗೂ ಕೂಡ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಇದೇ ವಿಚಾರಕ್ಕೆ ದಂಪತಿ ನಡುವೆ ಜಗಳವಾಗುತ್ತಿತ್ತು.
ಪತಿಯ ಕಿರುಕುಳ ತಾಳಲಾರದೆ ಲಕ್ಷ್ಮೀ ಕಳೆದ ಮೂರು ದಿನಗಳ ಹಿಂದೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಏಪ್ರಿಲ್-12 ರಂದು ಶನಿವಾರ ರಾಜೀಗೆಂದು ಕರೆದು ಲಕ್ಷ್ಮೀ ಮತ್ತು ಶೃತಿಯವರ ತಲೆ ಭಾಗಕ್ಕೆ ಶ್ರೀಕಾಂತ್ ಹಾಗೂ ಕುಟುಂಬಸ್ಥರು ಮಾರಕಾಸ್ತ್ರಗಳಿಂದ ಹೊಡೆದಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ.
ಶ್ರೀರಂಗಪಟ್ಟಣ ತಾಲೂಕು ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಲಕ್ಷ್ಮೀ ಸಹೋದರ ರವಿಕಿರಣ್ ದೂರು ಆಧರಿಸಿಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಶ್ರೀಕಾಂತ್ ಸೇರಿದಂತೆ 9 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ.
ದೂರಿನಲ್ಲಿ ಏನಿದೆ-
ಸ್ಥಳೀಯವಾಗಿ ಚರ್ಚ್ ಒಂದನ್ನ ನಿರ್ಮಿಸಿ, ಆಮಿಷವೊಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಹಲವರನ್ನು ಮತಾಂತರ ಮಾಡಿದ್ದಾರೆ ಎನ್ನಲಾಗಿದೆ. ಮತಾಂತರಕ್ಕೆ ಒಪ್ಪದಿದ್ದಕ್ಕೆ ತವರು ಮನೆಯಿಂದ ಹಣ ತರುವಂತೆ ಲಕ್ಷ್ಮೀ ಅವರಿಗೆ ನಿತ್ಯ ಕಿರುಕುಳ ನೀಡಿದ್ದಾರೆ. ಈಗಾಗಲೇ 25 ಲಕ್ಷ ಹಣನೀಡಲಾಗಿದೆ. ಇದೇ ಹಣದಲ್ಲಿ ಚರ್ಚ್ ಕಟ್ಟಿಸಿಕೊಂಡು ಮತಾಂತರ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ.
ಪಾಲಹಳ್ಳಿ ಗ್ರಾಮದಲ್ಲಿ ಕಳೆದ 10 ವರ್ಷಗಳಿಂದ ನಿರಂತರವಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ನಡೆಯುತ್ತಿದೆ. ಗ್ರಾಮದಲ್ಲಿ ಒಕ್ಕಲಿಗರು, ವಿಶ್ವಕರ್ಮ, ಮರಾಠಿಗಳು ಸೇರಿದಂತೆ ಎಲ್ಲ ಜನಾಂಗದವರನ್ನು ಮತಾಂತರ ಮಾಡುತ್ತಾ ಬಂದಿದ್ದಾರೆ. ಕಷ್ಟದಲ್ಲಿ ಇರುವವರನ್ನು ಟಾರ್ಗೆಟ್ ಮಾಡಿ ಹಣದ ಆಮಿಷ ತೋರಿಸಿ ಮತಾಂತರ ಮಾಡುತ್ತಿದ್ದಾರೆ. ಎಲ್ಲಿಂದಲೋ ಅವರಿಗೆ ಹಣ ಬರುತ್ತಿದೆ. ಮತಾಂತರ ಆದವರಿಗೆ ಲಕ್ಷ ಲಕ್ಷ ಹಣ ಕೊಡುತ್ತಾರೆ.
ಇದಕ್ಕೆ ಅಂತಲೇ ಅವರು ಮತಾಂತರ ಮಾಡುತ್ತಾ ಬಂದಿದ್ದಾರೆ. ಇದು ಗ್ರಾಮದ ಮುಖಂಡರುಗಳಿಗೂ ಗೊತ್ತಿದೆ. ನಾವು ಮತಾಂತರಕ್ಕೆ ಒಪ್ಪದಿದ್ದಾಗ ರಾಜೀ ಪಂಚಾಯತಿಗೆ ಕರೆದು ನನ್ನ ಹಾಗೂ ಮಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಲಕ್ಷ್ಮಿ ತಾಯಿ ಶೃತಿ ದೂರಿದ್ದಾರೆ.
ಸರ್ಕಾರಿ ಸೌಲಭ್ಯಕ್ಕೆ ಹಿಂದೂ ಹೆಸರು, ಆದರೆ ಮಾನಸಿಕವಾಗಿ ಎಲ್ಲರೂ ಮತಾಂತರವಾಗಿದ್ದಾರೆ. ಆರೋಪಿಗಳ ಪಡಿತರ ಚೀಟಿ, ಆಧಾರ್ ಕಾರ್ಡ್ಸೇರಿ ಎಲ್ಲ ದಾಖಲೆಗಳಲ್ಲಿ ಹಿಂದೂ ಹೆಸರು ಇದೆ. ಆದರೆ ಹೊರಗೆ ಸಮಾಜದಲ್ಲಿ ಗುರುತಿಸಿಕೊಳ್ಳುವುದು ಕ್ರಿಶ್ಚಿಯನ್ ಹೆಸರಿನಲ್ಲಿ ಎಂದು ಹಲ್ಲೆಗೊಳಗಾದ ಲಕ್ಷ್ಮಿ ಆರೋಪಿಸಿದ್ದಾರೆ.