ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ತೂಬಗೆರೆ ಹೋಬಳಿಯ ಎಸ್. ನಾಗೇನಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಹುಲ್ಲಿನ ಬಣವೆ ಹಲಸಿನ ಮರ ನೀರಿನ ಪೈಪ್ ಸುಟ್ಟು ಭಸ್ಮವಾಗಿರುವ ಘಟನೆ ಎಸ್. ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಎಸ್ ನಾಗೇನಹಳ್ಳಿ ಗ್ರಾಮದಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ ಕೆಲವೇ ನಿಮಿಷಗಳಲ್ಲಿ ವ್ಯಾಪಿಸಿ ಕೊಂಡು, ಗ್ರಾಮದ ರೈತ ವೆಂಕಟಪ್ಪ ಅವರಿಗೆ ಸೇರಿದ ಕೃಷಿ ಭೂಮಿಯಲ್ಲಿ ಇಟ್ಟುಕೊಂಡಿದ್ದ ಸುಮಾರು ಐದು ಟ್ರಾಕ್ಟರ್ ಲೋಡ್ ರಾಗಿ ಹುಲ್ಲಿನ ಬಣವೆ, ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ಹಲಸಿನ ಮರ, ಜೊತೆಗೆ ಟೊಮೋಟೊ ಬೆಳೆಗೆ ಅಳವಡಿಸಲಾಗಿದ್ದ ಅಪಾರ ಮೌಲ್ಯದ ಹನಿ ನೀರಾವರಿ ಪೈಪುಗಳು ಹಾಗೂ ಟೊಮೇಟೊ ಕಡ್ಡಿಗಳು ಬೆಂಕಿ ಗಾಹುತಿಯಾಗಿವೆ. ಈ ಅವಘಡದಿಂದ ರೈತರಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ವಾಗಿದೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ನೀರು, ಮಣ್ಣು ಬಳಸಿ ಬೆಂಕಿ ನಂದಿಸಲು ಯತ್ನಿಸಿದರೂ, ಬಿಸಿಲಿನ ತೀವ್ರತೆ, ಒಣ ಹವಾಮಾನ ಹಾಗೂ ಗಾಳಿಯ ವೇಗ ದಿಂದಾಗಿ ಬೆಂಕಿ ಇನ್ನಷ್ಟು ವ್ಯಾಪಿಸಿಕೊಂಡಿದೆ. ಪರಿಸ್ಥಿತಿ ಕೈ ಮೀರುವುದನ್ನು ಗಮನಿಸಿದ ಗ್ರಾಮಸ್ಥರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರೂ, ಅಷ್ಟರೊಳಗೆ ಬಹುತೇಕ ಕೃಷಿ ಸಾಮಗ್ರಿಗಳು ಭಸ್ಮ ವಾಗಿದ್ದರಿಂದ ನಷ್ಟ ತಪ್ಪಿಸಲು ಸಾಧ್ಯವಾಗಲಿಲ್ಲ. ನಂತರ ಬೆಂಕಿ ಇನ್ನಷ್ಟು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಯಿತು.
ರೈತ ವೆಂಕಟಪ್ಪ ಅವರ ಕುಟುಂಬಕ್ಕೆ ರಾಗಿ ಹುಲ್ಲು, ಹಲಸಿನ ಕಾಯಿ ಹಾಗೂ ಟೊಮೇಟೊ ಬೆಳೆ ಮುಖ್ಯ ಆದಾಯದ ಮೂಲವಾಗಿತ್ತು. ಇಂತಹ ಸಂದರ್ಭದಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅವರ ಜೀವನಾಧಾರಕ್ಕೆ ಭಾರೀ ಹೊಡೆತ ನೀಡಿದೆ. ಮುಂದಿನ ಬೆಳೆಗಾಗಿ ಬಳಸಲು ಸಂಗ್ರಹಿಸಿದ್ದ ಹುಲ್ಲು ಹಾಗೂ ನೀರಾವರಿ ವ್ಯವಸ್ಥೆ ನಾಶವಾದುದರಿಂದ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಗ್ರಾಮಸ್ಥರು ಹಾಗೂ ರೈತ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು.
ಈ ವೇಳೆ ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ, ಆಕಸ್ಮಿಕ ಬೆಂಕಿಯಿಂದ ಸಂಪೂರ್ಣ ನಷ್ಟಕ್ಕೆ ಒಳಗಾದ ರೈತ ವೆಂಕಟಪ್ಪ ಅವರಿಗೆ ತಕ್ಷಣ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು, ಜೊತೆಗೆ ಹಾನಿಯ ಸಮೀಕ್ಷೆ ನಡೆಸಿ ಪರಿಹಾರ ಮೊತ್ತ ಘೋಷಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

