ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕಲ್ಲಂಗಡಿ ಹಣ್ಣುಗಳನ್ನು ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಬದಿಗೆ ಬಿದ್ದು ಲಾರೀ ಚಾಲಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಮೇಷ್ಟ್ರು ಮನೆ ಕ್ರಾಸ್ ಸಮೀಪದ ಸರ್ವೀಸ್ ರಸ್ತೆಯಲ್ಲಿ ಸಂಭವಿಸಿದೆ.
ತಮಿಳುನಾಡಿನಿಂದ ಹಾವೇರಿ ಕಡೆಗೆ ಕಲ್ಲಂಗಡಿ ಹಣ್ಣುಗಳನ್ನು ತುಂಬಿಕೊಂಡು ಬರುತ್ತಿದ್ದ ಕ್ಯಾಂಟರ್, ದಾರಿ ತಪ್ಪಿ ಕೊಡಿಗೇಹಳ್ಳಿ ಸರ್ವೀಸ್ ರಸ್ತೆಯ ಮೂಲಕ ಮತ್ತೆ ರಾಷ್ಟ್ರೀಯ ಹೆದ್ದಾರಿಯತ್ತ ಸಾಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ದಾವಣಗೆರೆ ಮೂಲದ ಕ್ಯಾಂಟರ್ ಚಾಲಕ ವೇದಮೂರ್ತಿ (22) ಅವರ ಕೈ ಮತ್ತು ಕಾಲುಗಳಿಗೆ ತೀವ್ರ ಪೆಟ್ಟಾಗಿದ್ದು, ಅವರನ್ನು ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಘಟನೆಯ ಬಳಿಕ ರಸ್ತೆ ಮೇಲೆ ಚದುರಿದ ಕಲ್ಲಂಗಡಿ ಹಣ್ಣುಗಳನ್ನು ಕೊಂಡೊಯ್ಯಲು ಕೆಲವರು ಮುಗಿ ಬಿದ್ದಿರುವುದು ಕಂಡುಬಂದಿದೆ.
ದ್ವಿಚಕ್ರ ವಾಹನಗಳು, ಆಟೋಗಳಲ್ಲಿ ಚೀಲಗಳಲ್ಲಿ ತುಂಬಿಕೊಂಡು ಹಣ್ಣುಗಳನ್ನು ತೆಗೆದುಕೊಂಡು ಹೋಗುತ್ತಿರುವ ದೃಶ್ಯಗಳು ಸಾಮಾನ್ಯವಾಗಿತ್ತು.
ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.

