ಚಂದ್ರವಳ್ಳಿ ನ್ಯೂಸ್, ಉಡುಪಿ :
ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ ಇದರ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಶಾಂತಿ ಮತ್ತು ಸ್ವಾತಂತ್ರ್ಯ ಕುರಿತು ವಿಚಾರ ಸಂಕೀರ್ಣ ಕಾರ್ಯಕ್ರಮ ನಯನಾ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ವೊಡೇ ಪಿ ಕೃಷ್ಣ ಭಾಗವಹಿಸಿ ಶುಭ ಹಾರೈಸಿದರು.
ಕನ್ನಡದ ಹೆಸರಾಂತ ಲೇಖಕ ಸಾಹಿತಿ ಡಾ. ಷಡಕ್ಷರಿ ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭ ಚಲನಚಿತ್ರ ಸಮನ್ವಯಕಾರ ಎಸ್ಕೆ ಅನಂತು, ಹಿನ್ನೆಲೆ ಗಾಯಕಿ ಅನುರಾಧ ಭಟ್, ಸಾಹಿತಿ ಡಾ.ಸಮತಾ ದೇಶ ಮಾನೆ, ಸಂಪನ್ಮೂಲ ವ್ಯಕ್ತಿ ಸುರೇಶ್ ಕಮ್ಮಾರ ಮುಂತಾದವರು ಭಾಗವಹಿಸಿ ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷ ಡಾ. ಗುಣವಂತ ಮಂಜು ಕಾರ್ಯಕ್ರಮ ಸಂಯೋಜಿಸಿದ್ದರು. ಈ ಸಂದರ್ಭದಲ್ಲಿ ಲೇಖಕ, ಸಾಮಾಜಿಕ, ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲು ಸೇರಿದಂತೆ ಅನೇಕ ರಂಗದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

